Home / ಕಥೆ / ಜನಪದ / ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಬಟ್ಟಲ್ಯಾತಕ್ಕ ಕೆನಿ ತಿನ್ಲಕ್ಕ

ಗಂಡಹೆಂಡಿರು ಮಾತಾಡಿಕೊಂಡು ಒಂದು ಹಿಂಡುವ ಎಮ್ಮೆಯನ್ನು ಕೊಂಡುತಂದರು. ಹಾಲಿಗೆ ಹೆಪ್ಪು ಹಾಕಿ, ಬೆಣ್ಣೆ ತುಪ್ಪ ಮಾಡಿ ಮಾರಿಕೊಂಡರೆ ಕೈಯಲ್ಲಿ ಹಣವೂ ಆಗುವದೆಂದು ಗಂಡನು ಹೆಂಡತಿಗೆ ಸೂಚನೆಮಾಡಿದನು. ಅದಕೈ ಹೆಂಡತಿ ಸೈ ಎಂದಳು.

ಕೆಂಡದ ಮೇಲಿಟ್ಟು ಹಾಲು ಕಾಸಿದರೆ, ಅಂಗೈಗಡುತರ ಕೆನೆ ಹೊರಡುವದು. ಆದರೆ ಅದನ್ನು ನೋಡಿದರೆ ಹೆಂಡತಿಯ ಜೀವ ಅದನ್ನು ತಿನ್ನುವುದಕ್ಕೆ ಎಳಸುವದು. ಅಲ್ಪಸ್ವಲ್ಪ ತಿಂದರೆ ಸಾಕಾಗುವಂಥವಲ್ಲ ಕೆನೆ. ಅದನ್ನು ಇಡಿಯಾಗಿ ತಿಂದು, ಹಾಲಿಗೆ ಕೆನೆಯೇ ಹೊರಡುವದಿಲ್ಲವೆಂದು ಗಂಡನಿಗೆ ಹೇಳುವಳು. ಎಮ್ಮೆ ಹೆಡಸಿನದಲ್ಲ, ಬರಿ ಹಾಲಿನದು – ಎಂದು ತಪ್ಪು ಎಮ್ಮೆಯ ಮೇಲೆ ಹಾಕುವಳು.

ಗಂಡನು, ತಮಗೆ ಎಮ್ಮೆ ಮಾರಿದವರಲ್ಲಿ ಹೋಗಿ ಕೇಳಿದ – “ಹೆಡಸು ಹಯನಿಗೆ ಮಿಗಿಲಾದ ಎಮ್ಮೆಯೆಂದು ನಮಗೆ ಭರವಸೆ ಹೇಳಿದಿರಿ. ಈಗ ಕೆನೆಯೇ ಹೊರಡುವದಿಲ್ಲವೆಂದು ನನ್ನ ಹೆಂಡತಿ ಹೇಳುತ್ತಿದ್ದಾಳೆ. ನೀವು ಸುಳ್ಳು ಹೇಳಿ ಎಮ್ಮೆ ಕೊಡಬಾರದಿತ್ತು, ನೆರೆಯವರಿಗೆ.”

ಆ ರೈತನ ಹೆಂಡತಿ ಹಯನು ಮಾಡಬಲ್ಲಳು. ಆ ಕೆಲಸದಲ್ಲಿ ಬಲ್ಲಿದಳು. ಮಾರಿದ ಎಮ್ಮೆಯ ಹಯನವನ್ನು ಸಹ ಈ ಮುಂಚೆ ಮಾಡಿದ್ದಳು. ಆಕೆ ಹೇಳಿದಳು – “ತಮ್ಮಾ, ನಿನ್ನ ಹೆಂಡತಿ ಹೇಳುವುದು ಸುಳ್ಳು. ಹಾಲು ಚನ್ನಾಗಿ ಕಾಸಿ ಅಂಗೈಗಡುತರ ಕೆನೆ ತೆಗೆದು ತೋರಿಸಲೇನು ನಿನಗೆ? ನಿಮ್ಮಲ್ಲಿಯೂ ಕೆನೆ ಹೊರಡುತ್ತಿರಬಹುದು. ಆದರೆ ಅದನ್ನು ನಿನ್ನ ಹೆಂಡತಿ ಅದೆಂತು ಇಲ್ಲದಾಗಿಸುತ್ತಾಳೋ ನೋಡು.”

“ಹೇಗೆ ನೋಡಲಿ ?”

“ನಾನು ಎರಡು ಗೊಂಬೆ ಮಾಡಿಕೊಡುತ್ತೇನೆ. ಅವುಗಳಲ್ಲಿ ಒಂದನ್ನು ಹಾಲ ಗಡಿಗೆಯಿಡುವಲ್ಲಿ, ಇನ್ನೊಂದು ಪಾತ್ರೆಪಗಡೆ ಇಡುವಲ್ಲಿ ಗಟ್ಟಿಯಾಗಿ ನೆಡು. ಅದರಿಂದ ತಾನೇ ಹೊರಬೀಳುತ್ತದೆ ಇದ್ದ ಸಂಗತಿ” ಎಂದಳು ಆ ರೈತನ ಹೆಂಡತಿ.

ಅವೆರಡು ಗೊಂಬೆಗಳನ್ನು ತಂದು ಗಂಡನು ಸರಿಯಾದ ಸ್ಥಳಗಳಲ್ಲಿ ಗಟ್ಟಿಯಾಗಿ ನಿಲ್ಲಿಸಿದನು. ಹೆಂಡತಿ ಎಂದಿನಂತೆ ಹಾಲಗಡಿಗೆಯನ್ನು ತೆಗೆದುಕೊಂಡು ಕೆನೆ ತಿನ್ನಬೇಕೆಂದು, ಪಾತ್ರೆ ತೆಗೆದುಕೊಳ್ಳಲು ಕೈ ಚಾಚಿದಾಗ ಅಲ್ಲಿ ನಿಲ್ಲಿಸಿದ ಗೊಂಬೆ – “ಬಟ್ಟಲ್ಯಾತಕ್ಕ” ಎಂದು ಕೇಳಿತು. ಅತ್ತ ಕಡೆಗೆ ಕಿವಿಕೊಡದೆ ಹಾಲಗಡಿಗೆಯ ಬಳಿಗೆ ಬಂದಾಗ – “ಹಾಲು ಕೆನಿ ತಿನ್ಲಕ್ಕ” ಎಂದಿತು ಇನ್ನೊಂದು ಗೊಂಬೆ. ಅಷ್ಟಕ್ಕೆ ಬಿಡಲಿಲ್ಲ ಆ ಗೊಂಬೆಗಳು.

ಒಂದು ಕೇಳುವುದು – “ಬಟ್ಟಲ್ಯಾತಕ್ಕ ?”

ಇನ್ನೊಂದು ಕೇಳುವುದು – “ಕೆನಿತಿನ್ಲಕ್ಕ.”

ಈ ಕ್ರಮ ನಡೆದೇ ನಡೆಯಲು ಹೆಂಡತಿ ಹುಚ್ಚು ಹಿಡಿದಂತೆ ನಿಂತುಬಿಟ್ಟಳು. ಅದೇ ಹೊತ್ತಿಗೆ ಅಕಸ್ಮಾತ್ ಗಂಡ ಬರಲು ಆಕೆ, ಗೊಂಬೆಗಳ ಸಲುವಾಗಿ ದೂರು ಹೇಳಿದಳು – “ನೋಡಿರಿ. ಈ ಗೊಂಬೆಗಳು ಸುಳ್ಳುಸುಳ್ಳೇ ಕೂಗಾಟ ಎಬ್ಬಿಸಿವೆ. ಬಟ್ಟಲ್ಯಾತಕ್ಕ ಅನ್ನುತ್ತದೆ ಒಂದು. ಕೆನಿತಿನ್ಲಕ್ಕ ಅನ್ನುತ್ತದೆ ಇನ್ನೊಂದು, ಅವುಗಳನ್ನು ಕಿತ್ತೊಗೆಯಿರಿ.”

“ಇರಲಿ ಬಿಡು. ಅವೇನು ಮಾಡುತ್ತವೆ ನಿನಗೆ ?”

ತರುವಾಯ ಹಾಲು ಕಾಸಿದರೆ ಕೆನೆ ಬರತೊಡಗಿತು. ಕಡಿದರೆ ಮುದ್ದೆ ಮುದ್ದೆ ಬೆಣ್ಣೆ; ಕಾಸಿದರೆ ತಂಬಿಗೆ ತಂಬಿಗೆ ತುಪ್ಪ. ಅದನ್ನು ಕಂಡು ಗಂಡನು ಹಿಗ್ಗಿ -“ಹೆಂಡತಿ ಚೆನ್ನಾಗಿ ಮಾಡುವಳು ಹಯನ” ಎಂದು ಹೊಗಳತೊಡಗಿದನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...