Home / ಕಥೆ / ಜನಪದ / ಯಾರಿಗೆ ಕೊಡಬೇಕು ಕನ್ಯೆ

ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...