Home / ಕಥೆ / ಜನಪದ / ಯಾರಿಗೆ ಕೊಡಬೇಕು ಕನ್ಯೆ

ಯಾರಿಗೆ ಕೊಡಬೇಕು ಕನ್ಯೆ

ಹೀಂಗ ಒಂದು ಊರಿತ್ತು. ಆ ಊರಲ್ಲಿ ಇಬ್ಬರು ಗಂಡಹೆಂಡಿರಿದ್ದರು. ಅವರಿಗೆ ಒಬ್ಬಳೇ ಮಗಳು. ಬಹಳ ಚೆಲುವೆ; ಕಡ್ಡಿಯಿಂದ ಕೊರೆದಂತೆ ರೂಪು; ಮೈಬಣ್ಣ ಬಂಗಾರದ್ದು; ಏನು ಆ ಮೂಗು ಸಂಪಿಗೆ ತೆನೆ; ಏನು ಆ ಹಲ್ಲು ದಾಳಿಂಬರ ಬೀಜ; ಆಕೆಯನ್ನು ಯಾರು ಬೇಡವೆಂದಾರು? ಆಕೆಗಿದ್ದ ಮೂವರೂ ಸೋದರ ಮಾವಂದಿರು ಕೇಳುತ್ತಿದ್ದರು – ಆಕೆ ನನಗೆ ಬೇಕು, ನನಗೆ ಬೇಕು – ಎಂದು.

ಅಕ್ಕನಿಗೆ ಇದ್ದವಳು ಒಬ್ಬಳೇ ಮಗಳು. ಕೇಳುವವರು ಮೂವರು ತಮ್ಮಂದಿರು. ಯಾರಿಗೆ ಕೊಡಬೇಕು ?

ಎಲ್ಲರೂ ಒಳ್ಳೆಯವರೇ ಆಗಿದ್ದರು; ಚೆಲುವರೂ ಆಗಿದ್ದರು. ಒಬ್ಬನಿಗೆ ಕೊಟ್ಟರೆ ಇಬ್ಬರು ಸಿಟ್ಟಾಗುತ್ತಾರೆ. ಏನು ಮಾಡುವುದು ಯುಕ್ತಿ ?

ಮೂವರೂ ತಮ್ಮರನ್ನು ಕರೆದು ಅಕ್ಕನು, ತಲೆಗೆ ನೂರುನೂರು ರೂಪಾಯಿ ಕೊಟ್ಟಳು. “ಎಲ್ಲಿಗೆ ಬೇಕೋ ಅಲ್ಲಿಗೆ ಹೋಗಿರಿ. ಯಾರು ತೀವ್ರವಾಗಿ ಹೆಚ್ಚು ಗಳಿಸಿಕೊಂಡು ಬರುವಿರೋ ಅವರಿಗೆ ನನ್ನ ಮಗಳನ್ನು ಕೊಡುವೆನು” ಎಂದು ಹೇಳಿದಳು.

ಆ ಮಾತಿಗೆ ಮೂವರೂ ಒಪ್ಪಿ ದೇಶಾಂತರಕ್ಕೆ ನಡೆದರು. ಕೆಲವು ದಿನಗಳಲ್ಲಿ ಅವರು ಮೈಸೂರಿನಂಥ ಪಟ್ಟಣಕ್ಕೆ ಹೋದರು. ಊರತುಂಬ ಅಂಗಡಿಗಳು ! ಪ್ರತಿಯೊಂದು ಅಂಗಡಿಯಲ್ಲಿ ತರತರದ ಬದುಕು ! ನೋಡುತ್ತ ನೋಡುತ್ತ ಒಂದು ಅಂಗಡಿಯನ್ನು ಪ್ರವೇಶಿಸಿದರು. ಅಲ್ಲೊಂದು ಕನ್ನಡಿಯಿತ್ತು. ಅದರಲ್ಲಿ ನೋಡಿದರೆ ಜಗತ್ತೆಲ್ಲ ಕಣ್ಣಮುಂದೆ ಬರುತ್ತಿತ್ತು. ಹಿರಿಯಣ್ಣನು ತನ್ನ ಬಳಿಯಲ್ಲಿದ್ದ ನೂರು ರೂಪಾಯಿಕೊಟ್ಟು ಅದನ್ನು ಕೊಂಡುಕೊಂಡನು.

ಇನ್ನೊಂದು ಅಂಗಡಿಯಲ್ಲಿ ವಿಚಿತ್ರವಾದ ತೊಟ್ಟಿಲು ಕಂಡರು. ಅದರಲ್ಲಿ ಕುಳಿತು ಮನಸ್ಸು ಹರಿದಲ್ಲಿ ಹೋಗಲು ಬರುವಂತಿತ್ತು. ನಡುವಿನಣ್ಣನು ಅದನ್ನು ನೂರು ರೂಪಾಯಿಗಳಿಗೆ ಖರೀದಿಮಾಡಿದನು. ಮುಂದಿನ ಪೇಟೆಯಲ್ಲಿ ಗೊಂಬೆಗಳ ಅಂಗಡಿಯಿತ್ತು. ಅಲ್ಲಿ ಸತ್ತವರನ್ನು ಬದುಕಿಸುವ ಗೊಂಬೆಗಳಿದ್ದವು. ಅವುಗಳನ್ನು ಸಣ್ಣವನು ಕೊಂಡುಕೊಂಡನು. ಅಷ್ಟಾಗುವುದಕ್ಕೆ ಊಟದ ಹೊತ್ತಾಗಿತ್ತು. ಮೂವರೂ ಹಸಿದಿದ್ದರು. ಅಕ್ಕ ಕಟ್ಟಿದ ಬುತ್ತಿಯಂತೂ ಇತ್ತು. ಅದನ್ನು ತೆಗೆದುಕೊಂಡು ಊರಹೊರಗೆ ಹಳ್ಳದ ಕಡೆಗೆ ಊಟಕ್ಕೆಂದು ನಡೆದರು. ಹಳ್ಳದಲ್ಲಿ ಕೈಕಾಲು ತೊಳೆದುಕೊಂಡು ಬಂದು ಬುತ್ತಿ ಬಿಚ್ಚಿದರು. ಇನ್ನೇನು, ಊಟಕ್ಕೆ ಕುಳಿತುಕೊಳ್ಳಬೇಕೆನ್ನುವಷ್ಟರಲ್ಲಿ, ತಮ್ಮೂರ ಕಡೆಯ ಸಂಗತಿಯನ್ನು ತಿಳಿದುಕೊಳ್ಳಬೇಕೆಂದು ಕನ್ನಡಿಯಲ್ಲಿ ನೋಡಿದರು. ದುರ್ದೈವ ಎದುರಿಗೇ ಬಂದಂತಾಯ್ತು. ತಾವು ಮದುವೆಯಾಗಬೇಕೆಂದಿರುವ ಕನ್ಯೆ ತೀರಿಕೊಂಡಿತ್ತು. ಗೋರಿಮರಡಿಗೆ ಒಯ್ಯುವ ಸಿದ್ಧತೆ ನಡೆದಿತ್ತು. ಬಿಚ್ಚಿದ ಬುತ್ತಿ ಕಟ್ಟಿದರು. ಇನ್ನೆಲ್ಲಿಯ ಊಟವೆಂದು ಕೂಡಲೇ ತೊಟ್ಟಿಲಲ್ಲಿ ಕುಳಿತರು. ಹಾ೦ ಅನ್ನುವಷ್ಟರಲ್ಲಿ ಊರಿಗೆ ಬಂದು ತಲುಪಿದರು. ಸಣ್ಣ ತಮ್ಮನು ತನ್ನ ಬಳಿಯಲ್ಲಿರುವ ಗೊಂಬೆಯಿಂದ ಸತ್ತವಳನ್ನು ಎಬ್ಬಿಸಿದನು.

ಇನ್ನು ಹೇಳಿರಿ – ಅಕ್ಕನು ಯಾರಿಗೆ ಕೊಡಬೇಕು. ತನ್ನ ಮಗಳನ್ನು ?
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...