Home / ಕಥೆ / ಜನಪದ / ಪಾದರಕ್ಷೆಯ ಪುಣ್ಯ

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು – “ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೀಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದು ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ಬೆಣ್ಣೆ, ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ
ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ – ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತು ರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು – “ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ” ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಯಣದ ಸಿದ್ಧತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ – ‘ತಮ್ಮ ಪಾದರಕ್ಷೆ ಯ ಪುಣ್ಯ’ ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು – “ಎಲ್ಲಿ ಮಾಯವಾದವು?”

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು-

“ಹಿಂದಿನೂರಿನ  ಶಿಷ್ಯಮಕ್ಕಳು ಮಾತುಮಾತಿಗೆ ‘ತಮ್ಮ ಪಾದರಕ್ಷೆಯ ಪುಣ್ಯ’ ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ.”

“ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ – ಗುರುವಿನಿಂದ ದಕ್ಷಿಣೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...