Home / ಕಥೆ / ಜನಪದ / ಪಾದರಕ್ಷೆಯ ಪುಣ್ಯ

ಪಾದರಕ್ಷೆಯ ಪುಣ್ಯ

ಶ್ರೀಮಂತಿಕೆಯನ್ನು ಭೋಗಿಸಿ, ಸಾಮಾನ್ಯಸ್ಥಿತಿಗೆ ಬಂದ ಇಬ್ಬರು ಗಂಡಹೆಂಡಿರು ಒಂದೂರಿನಲ್ಲಿ ಇದ್ದರು. ಅವರ ಕುಲಗುರುಗಳು ವಾಡಿಕೆಯಂತೆ ಅವರ ಮನೆಗೆ ಆಗಮಿಸಿದರು, ಒಬ್ಬ ಸೇವಕನೊಡನೆ. ಆ ಗಂಡಹೆಂಡಿರು ತಮ್ಮ ಸಾಮಾನ್ಯಸ್ಥಿತಿಯನ್ನು ಗುರುಗಳಿಗೆ ತೋರಗೊಡದೆ, ಮೊದಲಿನಂತೆಯೇ ಅವರನ್ನು ಸತ್ಕರಿಸಲು ನಿಶ್ಚಯಿಸಿದರು. ತಮ್ಮ ಮನೆಯೊಳಗಿನ ಒಂದು ಕೋಣೆಯಲ್ಲಿ ಗುರುಗಳು ಇಳಿದುಕೊಳ್ಳಲು ಏರ್ಪಡಿಸಿದರು. ಆದರೆ ಗುರುಗಳಿಗೆ ಬಿನ್ನಹಮಾಡಿ ದಕ್ಷಿಣೆಕೊಡಮಾಡುವುದು ಏತರಿಂದ – ಎಂದು ಆ ದಂಪತಿಗಳು ಯೋಚಿಸತೊಡಗಿದರು. ಅವರಿಗೊಂದು ಯುಕ್ತಿ ಹೊಳೆಯಿತು – “ಗುರುಗಳಿಗೆ ಪ್ರತ್ಯೇಕವಾದ ಒಂದು ಜೊತೆ ಚಮ್ಮಳಿಗೆಗಳಿವೆ. ಹೇಗಾದರೂ ಅವುಗಳನ್ನು ಅವರು ಉಪಯೋಗಿಸುವದಿಲ್ಲ. ಚೀಲದಲ್ಲಿ ಬಯತಿರಿಸಿರುತ್ತಾರೆ. ಅವುಗಳನ್ನು ಅವರಿಗೆ ಗೊತ್ತಾಗದಂತೆ ಒಯ್ದು ಮಾರಿ ಬಂದರಾಯಿತು. ತಕ್ಕಷ್ಟು ಹಣ ಬರುತ್ತದೆ. ಅದನ್ನೇ ಖರ್ಚು ಮಾಡಿ, ಗುರುಗಳಿಗೆ ಬಿನ್ನಹಮಾಡಿಸಿ ಮೇಲೆ ದಕ್ಷಿಣೆ ಕೊಡಬಹುದು.

ಗಂಟಿನಲ್ಲಿದ್ದ ಆ ಚಮ್ಮಳಿಗೆಗಳನ್ನು ಗುರುಗಳಿಗೂ ಅವರ ಸೇವಕನಿಗೂ ಗೊತ್ತಾಗದಂತೆ ಎತ್ತಿತಂದು ಕೊಟ್ಟವಳು ಹೆಂಡತಿ. ಅವುಗಳನ್ನು ಪೇಟೆಗೊಯ್ದು ಮಾರಿಕೊಂಡು ಮೂವತ್ತು ರೂಪಾಯಿ ತಂದವನು ಗಂಡ. ಆ ಬಳಿಕ ಗೋದಿ, ಅಕ್ಕಿ, ಬೇಳೆ, ಬೆಲ್ಲ, ಬೆಣ್ಣೆ, ಎಣ್ಣಿ ಮೊದಲಾದವುಗಳನ್ನು ಕೊಂಡುತಂದರು. ಗೊತ್ತು ಮಾಡಿದ ದಿವಸ ಹೂರಣಕ್ಕೆ ಹಾಕಿ ಹೋಳಿಗೆ ಮಾಡಿದರು. ತುಪ್ಪವಂತೂ ಬೆಣ್ಣೆ ಕಾಸಿದ್ದಿತ್ತು.

ಗುರುಗಳ ಸ್ನಾನ, ಪೂಜೆ ಆದ ಬಳಿಕ ಆ ದಂಪತಿಗಳು ಪಾದಪೂಜೆಗೆ ಕುಳಿತರು. ಅದು ಮುಗಿದ ಮೇಲೆ ಕರಣಪ್ರಸಾದ ತೆಗೆದುಕೊಂಡು ಗುರುಗಳಿಗೆ
ಉಣಬಡಿಸುವ ಏರ್ಪಾಡು ನಡೆಸಿದರು. ಹೋಳಿಗೆ – ತುಪ್ಪದ ಊಟದಿಂದ ಗುರುಗಳು ಸಂತೃಪ್ತರಾದರು. ಶಿಷ್ಯ ಮಕ್ಕಳು ಗುರುಗಳ ಕಾಲಿಗೆರಗಿ ಇಪ್ಪತ್ತು ರೂಪಾಯಿ ಗುರುದಕ್ಷಿಣೆಯಿಟ್ಟರು. ಗುರುಗಳಿಗೆ ಅತಿಶಯ ಆನಂದವಾಗಿ ಅವರ ಔದಾರ್ಯವನ್ನು ಹೊಗಳ ತೊಡಗಿದರು.

ಗಂಡಹೆಂಡಿರು ಕೈಮುಗಿದು – “ಅದೆಲ್ಲ ತಮ್ಮ ಪಾದರಕ್ಷೆಯ ಪುಣ್ಯ” ಎಂದು ವಿನಯಿಸಿದರು.

ಸೇವಕನನ್ನು ಕರೆದು ಗುರುಗಳು ಮುಂದಿನ ಪಯಣದ ಸಿದ್ಧತೆ ನಡೆಸಿದರು. ಗಂಡಹೆಂಡಿರನ್ನು ಕರೆದು ಅವರ ಭಕ್ತಿಯನ್ನೂ ಔದಾರ್ಯವನ್ನೂ ಕೊಂಡಾಡಿದರು. ದಂಪತಿಗಳಿಬ್ಬರೂ ಗುರುಗಳ ಕಾಲಿಗೆರಗಿ – ‘ತಮ್ಮ ಪಾದರಕ್ಷೆ ಯ ಪುಣ್ಯ’ ಎನ್ನುತ್ತ ಆಶೀರ್ವಾದ ಪಡೆದರು.

ಮುಂದಿನೂರು ತಲುಪಿ ಬೀಡು ಬಿಟ್ಟಾಗ ಗುರುಗಳು ತಮ್ಮ ಚಮ್ಮಳಿಗೆಗಳನ್ನು ಹುಡುಕಾಡಿದರೆ ಸಿಗಲೇ ಇಲ್ಲ. ಸೇವಕನನ್ನು ಕೇಳಿದರು – “ಎಲ್ಲಿ ಮಾಯವಾದವು?”

ಗುರುಗಳಿಗಂತೂ ಏನೂ ತಿಳಿಯಲಿಲ್ಲ. ಕೊನೆಗೆ ಸೇವಕನೇ ಅನುಮಾನಿಸುತ್ತ ನುಡಿದನು-

“ಹಿಂದಿನೂರಿನ  ಶಿಷ್ಯಮಕ್ಕಳು ಮಾತುಮಾತಿಗೆ ‘ತಮ್ಮ ಪಾದರಕ್ಷೆಯ ಪುಣ್ಯ’ ವೆನ್ನುತ್ತಿದ್ದರು. ಅವರೇ ಪುಣ್ಯಕಟ್ಟಿಕೊಂಡಂತೆ ಕಾಣುತ್ತದೆ.”

“ಗುರುದಕ್ಷಿಣೆ ಈ ಬಗೆಯಾಗಿ ಸಿಕ್ಕಿತೆನ್ನೋಣ – ಗುರುವಿನಿಂದ ದಕ್ಷಿಣೆ” ಎಂದರು ಗುರುಗಳು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...