Home / ಕವನ / ಅನುವಾದ / ದುಃಖಸೇತು

ದುಃಖಸೇತು

ಅನಾಥೆ ಇವಳಿನ್ನೊಬ್ಬ
ಳೀ ಜನ್ಮರೋಸಿ,
ವೇದೆಯನು ತಾಳದೆಯೆ
ಮುಳುಗಿದಳು ಹೊಳೆಗೆ.
ಮೆಲ್ಲಗಿವಳನು ಮುಟ್ಟು,
ಮರುಗಿ ಹಿಡಿದೆತ್ತು,
ಏನು ಕೋಮಲಕಾಯ!
ಹೊಳಪು ಹೊಸಪ್ರಾಯ
ನೋಡು, ಮೈಯೊಳಗುಡಿಗೆ
ತೊಯ್ದು ಹತ್ತಿಹುದು:
ತೋಡಿ, ತೊರೆನೊರೆಯಾಗಿ
ಹೊಳೆ ಬಸಿಯುತಿಹುದು.
ಎದೆಗರಗು, ಬಾ, ಎತ್ತು,
ಮಾಕರಿಸದೊಲಿದು.
ದುಡುಕಿ, ಕಟ್ಟನು ಮೀರಿ,
ಕೆಟ್ಟವಳು ಇವಳು,
ತಾನು ಮಾಡಿದ ಕರ್ಮ
ತನ್ನ ಬೆನ್ನಲಿ ಬಂದು
ಸುಟ್ಟವಳು ಇವಳು;
ಎನುತ ದೋಷವ ಬೆದಕಿ
ಗದರದಿರು ನೀನು.
ಅವಳ ಪಾಪಗಳೇನೊ,
ಹೊಲ್ಲನಡೆಯೇನೊ ,
ಅದರೆಣಿಕೆಗಿದೆ ಹೊತ್ತು?
ನಾವೆ ಜರೆವವರು?
ಜವರಾಯ ನುಂಗಿದೀ
ಹೆಣ್ಣು ಮಗುವಿನಲಿ
ಹೊರೆದ ಕಲ್ಮಷ ತೊಳೆದು,
ಈಗ ತಾನುಳಿದಿಹುದು,
ಚೆಲುವಾದ, ನಿರ್ಮಲದ
ಹೆಣ್ಣುತನವೊಂದು!
ಏನು ಕರೆಗಳೆ ಇರಲಿ,
ಹೆಣ್ಣು ಹುಟ್ಟಹುದು.
ಒರಸು ಆ ತುಟಿಗಳನು,
ಕೆಸರೊಸರುತಿಹುದು.
ಕಟ್ಟು ಕೂಡಿಸಿ ಕುರುಳ,
ಕರಿಯ ಸೊಂಪಿನ ಕುರುಳ,
ಅದ್ದಿ ಕೆದರಿಹುದು.
ಆರಿವಳು? ಮನೆಯೆಲ್ಲಿ?
ಬಲ್ಲವರು ಯಾರು?
ಇವಳ ತಂದೆಯದಾರು ?
ಇವಳ ತಾಯಿಯದಾರು?
ಅಕ್ಕತಂಗಿಯರಿಹರೆ?
ಅಣ್ಣತಮ್ಮದಿರು?
ಇನ್ನು ಅಕ್ಕರೆಯಾತ
ಇನ್ನು ಹತ್ತಿರದಾತ
ಮತ್ತೊಬ್ಬನಿಹನೊ?
ನಿರಿಹಿಡಿದು, ನಡುವೇರಿ,
ತೊದಲುಮಾತನು ಬೀರಿ,
ಕೊರಗ ನಗಿಸಲು ಬಲ್ಲ
ಮಗುವಿಲ್ಲವೇನೋ?
ಆಹ, ಎಲ್ಲಡಗಿತೋ
ಆರ್ಯಧರ್ಮದ ಕರುಣ,
ಆರ್ಯಜನಗಳ ಮರುಕ,
ಉರಿಯುವನೆ ಬಲ್ಲ!
ಅಯ್ಯೋ, ಏನನ್ಯಾಯ,
ತುಂಬಿದೀ ಊರಲ್ಲಿ,
ಮನೆ ಇವಳಿಗಿಲ್ಲ,
ತುಂಬಿದೀ ಜನದಲ್ಲಿ
ನೆರೆ ಇವಳಿಗಿಲ್ಲ.
ಅನಾಥೆ ಹಾ, ದಿಕ್ಕಿಲ್ಲ,
ಮರಣವೇ ಶರಣು.
ಹೆತ್ತವರ ಪ್ರೇಮವೋ,
ಸೋದರರ ಪ್ರೇಮವೋ,
ಕೂಡಿದನ ಪ್ರೇಮವೋ,
ಮಕ್ಕಳಲ್ಲಿ ಪ್ರೇಮವೋ,
ಯಾವುದೂ ಹಿಡಿಯದೆಯೆ
ತಡೆಯದೆಯೆ ಹೋಯ್ತೆ?
ನಿಷ್ಕರುಣರಲಿ ಬೆಂದು,
ಪ್ರೇಮಸಾಗರದಮೃತ
ಬಯಲುದೊರೆಯಾಯ್ತೆ?
ದೀನರಕ್ಷಕ ಮೊರೆಯ
ಕೇಳಿ ಕಾಪಾಡುವುದು
ತನಗೆ ಹುಸಿಯಾಯ್ತೆ?
ಏನು ಬಂತೋ ದುಃಖ,
ಏನು ಬಂತೋ ರೋಷ,
ಕ್ರೂರಮನಸನು ಮಾಡಿ
ಬೀರಿದಳು ಬದುಕು!
ಊರ ಮನೆಬೆಳಕುಗಳು
ದೂರ ಸರಿಯುತ್ತ,
ಕತ್ತಲೆಯ ಹೊಳೆ ಹರಿದು
ಹತ್ತಿರಕೆ ಬರುತ,
ಚಳಿಗಾಲ ಸೋಕಿದರೆ
ಬೆಚ್ಚಿ ನಡುಗುವಳು,
ಬೆಚ್ಚಿದಳೆ, ನಡುಗಿದಳೆ,
ಹೆದರಿದಳೆ ಹೊಳೆಗೆ?
ಹುಚ್ಚು ಹಿಡಿಸಿದ ಹಾಳು
ಬಾಳ ತೆಗೆದೊಗೆದು,
ಏನಿದೆಯೊ ಅರಿಯದಿಹ
ಸಾವ ಕೆಳೆಬಗೆದು,
ಎಲ್ಲಾದರೂ ಸರಿಯೆ,
ಎಲ್ಲಾದರೂ ಸರಿಯೆ,
ಈ ಲೋಕ ಬೇಡೆಂದು
ಹಾರಿದಳು ನೆಗೆದು.
ಹಾರಿದಳು, ಮುಳುಗಿದಳು,
ತೇಲಿದಳು, ಕೊಚ್ಚಿದಳು,
ಕೊರೆವ ಹೊಳೆಯೊಳಗೆ,
ಎಲವೊ ಕಾಮುಕ, ಕಟುಕ,
ಇಲ್ಲಿ ಬಾ, ನೋಡು ಬಾ
ಎಲ್ಲಿ ಬೆಚ್ಚಗೆ ಮಲಗಿ
ಸಲ್ಲಾಪಮಾಡುತಿಹೆ.
ಈಗ ಬಾ, ನೋಡು ಬಾ,
ಇವಳೊಡನೆ ಮುಳುಗು ಬಾ,
ಮುಳುಗು ಬಾ, ಪಾಪಿ!
ಮೆಲ್ಲಗಿವಳನು ಮುಟ್ಟು,
ಮರುಗಿ ಹಿಡಿದೆತ್ತು.
ಏನು ಕೋಮಲಕಾಯ!
ಹೊಳಪು ಹೊಸಪ್ರಾಯ!
ಕೈಕಾಲುಗಳ ಸವರಿ
ಮೃದುವಾಗಿ ಮಡಿಸು;
ಬಿರುಗಣ್ಣ ನೋಟವನು
ರೆಪ್ಪೆಯಲಿ ಕವಿಸು;-
ಜರೆಯುವರ, ಹಳಿಯುವರ,
ಕೊರೆಯುವರ, ತುಳಿಯುವರ,
ಕಿವಿ ಕೇಳಿ ಕೇಳಿ,
ಹಲ್ಲುಮುಡಿಯನು ಕಚ್ಚಿ
ಕಲ್ಲುಮನಸಾದಾಗ
ನೆಟ್ಟು ದೀ ನೋಟ!
ಮುಂದ ಬಲ್ಲವರಾರು?
ಇಂದಾಯ್ತು ಶಾಂತಿ.
ದೇವ ಮಾಡುವುದಿರಲಿ,
ನಾವು ಮಾಡುವ ಹಿಂಸೆ,
ಅದೆ ನರಕಹಿಂಸೆ!
ದುಃಖಿಗಳ, ಪಾಪಿಗಳ
ನಾವು ಧಿಕ್ಕರಿಸುವೆವು
ದೂರ ಅಟ್ಟುವೆವು.
ಅಟ್ಟನಾ ರೀತಿಯಲಿ
ತಂದೆ, ರಕ್ಷಕನು.
ದೈನ್ಯದಲಿ, ಮೌನದಲಿ
ತನ್ನ ಪಾಪವನೊಪ್ಪಿ
ಮರೆಹೊಗುವನಾಥೆಯನು
ಎದೆಯಲ್ಲಿ ಕೈಮುಗಿಸಿ
ಅವನ ಬಳಿ ಕಳುಹು.
*****
HOOD (1799 – 1845): Bridge of sighs
Tagged:

Leave a Reply

Your email address will not be published. Required fields are marked *

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...