Home / ಕವನ / ಹಾಯ್ಕು / ಝೆನ್ ಹಾಯಿಕುಗಳು

ಝೆನ್ ಹಾಯಿಕುಗಳು

ಬುದ್ಧ
ಬೇರಾಗು
ನನ್ನಲ್ಲಿ
ಸಿದ್ಧಿ
ತೇರಾಗು.

ಝೆನ್‌ಗೆ ಬೇಕೆ?
ತುತ್ತೂರಿ ಪೀಪಿ
ಶಂಖನಾದ, ಖಡ್ಗ?
ನಿಂತಿರುವ ನೋಡಿ
ಮುಗ್ಧ ಹುಡುಗ
ಓದಿ ಝೆನ್ ಅವನ
ಮೊಗದ ತುಂಬಾ!

ನನ್ನ ಹೃದಯ
ವೀಣೆಯ
ಝೆನ್ ತಂತಿಯ
ಝೆನ್ ಝೇಂಕಾರ
ಅದು ನನ್ನ ಸಾಕಾರ.

ಕವಿತೆ ಬರೆದರೆ
ಕವಿತೆ ಚಿಟ್ಟೆ
ಗೂಡ ಬಿಟ್ಟು ಹಾರೀತು
ಪ್ರೀತಿ ತೋರಿದರೆ
ಗೂಡ ಕಟ್ಟೀತು
ಎದೆ ಆಳದಲ್ಲಿ.

ಹಸುರೆಲೆಯ
ಹಸಿರು ವಾಗ್ದಾನದಲಿ
ಉನ್ಮತ್ತ ಇಬ್ಬನಿ
ಬಿಸಿಲು ಮಂಚದಲಿ
ಉಸಿರಾಡುತ್ತಿದೆ
ಅದೆಷ್ಟು ಕ್ಷಣ?

ಎರಡು ಇಬ್ಬನಿ
ಅಳುತ್ತಿವೆ, ಸತ್ತ
ಮೂರನೇಯ ಹನಿಗಾಗಿ,

ನನ್ನೊಳಗೆ
ನಾಧುಮುಕಿ
ನೆಲೆ ಹುಡುಕಿನಿಂತೆ.
ನನ್ನೊಳಗೆ
ನಾ ತೇಲಿ
ದಡ ಸೇರಿ ನಿಂತೆ.

ಇಬ್ಬನಿ ವಿರಮಿಸುತ್ತಿದೆ
ಕಿರಣದ ತೋಳಲ್ಲಿ
ತೋಟದ ಎಲೆಯ
ತುಟ್ಟ ತುದಿಯಲ್ಲಿ,
ಮನೆಗೆ ಸುಣ್ಣ ಬಣ್ಣ
ಮನಕೆ ಹಚ್ಚುವುದೇನು?
ಯಾವ ಬಣ್ಣ, ಯಾವ ಕಣ್ಣ?
ಕೊನೆಗೆ ಸೇರುವುದು
ಯಾವ ಊರು ಅಣ್ಣಾ!

ಉದಯ ವಿಹಾರದಲಿ
ಎರೆಹುಳು ಹುಡುಕುತಿದೆ
ಬಾನ ನಕ್ಷತ್ರ, ದಡದ ಶಂಖ ಚಕ್ರ
ಹಿಂದೆ ಹೆಜ್ಞೆ ಗುರುತನು ಬಿಟ್ಟು
ಮುಟ್ಟುತಿದೆ ಗುರಿಯ ಘಟ್ಟ.

ಹಸಿರು ಗದ್ದೆಗಳು
ಬಸಿರ ಮಾತಿಗೆ
ನಕ್ಷತ್ರದ ಮಿಣುಕು ಮಾತು.
ತೆನೆಯ ಸೊಗದ ನರ್ತನಕ್ಕೆ
ಗೀತ ಹಾಡುತಿದೆ
ಹಕ್ಕಿ ಬಾನಿಗಾತು.

ತೃಪ್ತಿ ಹಿಡಿಯಲ್ಲಿ
ಹೂವು ಮುಡಿಯಲ್ಲಿ
ದೀಪ್ತಿ, ಎಲ್ಲೆಡೆಯಲ್ಲಿ
ಹೃದಯ ಗುಡಿಯಲ್ಲಿ

ಜಗವೊಂದು
ಬರೆಯುವ ಹಲಗೆ
ಬರೆದಿಡು ಪ್ರೇಮ ಪತ್ರ.

ಬೋಳು ರೆಂಬೆಯ ಮೇಲೆ
ನಡುಗುವ ಹಕ್ಕಿ ಜೋಡಿಗೆ
ರೆಕ್ಕೆ ಕಂಬಳಿಯ ಮೋಡಿ
ಹಿಮವು ಬೀಳುತಿದೆ
ಹೃದಯ ಮುದುಡುತಿದೆ
ಶೋಕ ಗೀತೆ ಹಾಡಿ.

ಪೀಚ್, ಪ್ಲಮ್
ಮರಗಳೂ ನಿಂತಿವೆ
ಬೆಟ್ಟದ ತುದಿಯಲ್ಲಿ
ಬಿದ್ದು ಉರುಳುತಿವೆ
ಹಣ್ಣುಗಳು, ಮಣ್ಣಿನಲ್ಲಿ
ಬೆಟ್ಟ ಕೊಚ್ಚುತ್ತಿದೆ
ನನ್ನದೆಂಬ ಜಂಭ! ಅದೆಷ್ಟಡಂಭ!

ಧೈರ್ಯ ಸ್ಥೈರ್ಯದಿ
ಒಣಗಿದ ಮರನಿಂತಿದೆ
ಚಳಿಯ ಒಪ್ಪಿಕೊಂಡು
ಮತ್ತೆ ಚೈತ್ರ ಚಿಗುರು
ಹೂಗಳ, ಅಪ್ಪಿಕೊಂಡು
ಬಂದೇ ಬಂದಾನು ವಸಂತನೆಂದು.

ಅನುಭವದಲ್ಲಿ
ಭಾವ ಒಂದೇ ಏಕೆ?
ಪ್ರಭಾವ, ವಿಭಾವಗಳ ಸಾಲು
ಹುಡುಕಿದರೆ ಸಿಗದಿರುವುದೇ
ಝೆನ್ ಮಾಲು?

ಶೂನ್ಯಗಳ ಸನ್ನೆಯಲಿ
ಕಂಡುಕೋ
ನನ್ನಿಯ ಅರಿವು
ನಡೆಸುವುದು ಮುನ್ನ
ತಿಳಿಸುವುದು ವಿಶ್ವ ಅವಿಚ್ಛಿನ್ನ

ರೆಂಬೆಗಳು ತೂಗುತಿವೆ
ಎಲೆಗಳು, ಮರ್ಮರ ಹಾಡುತಿವೆ
ವೃಕ್ಷನಿಂತು ನಿದ್ರಿಸುತ್ತಿದೆ
ತೋಟದ ಕಟ್ಟೆಯಲ್ಲಿ
ಕುಳಿತು ನಾ ದೃಷ್ಟಿಸಿರುವೆ.

ಮೊಗ್ಗು ಹೂ ಕಾಯಿ
ಹಣ್ಣುಗಳಿರಲು
ಗಿಡವೆಂದು, ಒಂಟಿಯಿಲ್ಲ
ನಾ ನಿಂತಿರುವೆ ಒಂಟಿ
ಬೀದಿ ಕಂಭದಂತೆ.

ಎಲೆಗಳೂ ಪಟಪಟ
ಮಾತನಾಡುತಿವೆ
ನಿಂತು ವೃಕ್ಷ
ಕೇಳಿ ಕೇಳಿ
ತಲೆ ತೂಗುತಿದೆ.

ಕ್ಷಣ ಕ್ಷಣದ ಬಾಳಲ್ಲಿ
ಕಣ ಕಣದ ದೈವ
ಬೇಕೇ? ಒಣ ಒಣದ ತತ್ವ
ಝೆನ್‌ಲಿ ಒಂದಾಗೆ
ಹೊರ ಬಾರದೆ ಸತ್ವ?

ನನಗೆ ಇದೆ ಹೆಸರು
ನನ್ನೊಡನೆ ಹುಟ್ಟಿದ
ಮನಕೆ ಇದೆ ಯಾವ ಹೆಸರು?
ನನಗೆ ಇದೆ ಉಸಿರು
ಮನಕೆ ಇದೆ ಯಾವ ಬಸಿರು?

ಅನಂತದಿಂದ
ಸಿಡಿದಿರುವ, ನಾನೊಂದು
ಜೀವರಕ್ತ ಬಿಂದು
ಬಾಳು ಬೆಳೆಯೆ ಎತ್ತರಕ್ಕೆ
ಬದುಕೊಂದು ಸಿಂಧು.

ಆಗಸ ಭೂಮಿಯ ಒಂದಾಗಿಸಿ
ಝೆನ್ ನೂಲಿನಲಿ ಜಗವ ಹೆಣೆದೆ
ನಾನು, ನನ್ನ ಮನ
ಬಲುದೂರ ಸರಿದು
ಬೇರೆಯಾಗಿಯೆ ನಿಂತೆ.

ಉದುರಿದ ಎಲೆಯೊಂದ
ಎತ್ತಿ, ತುಟಿಗೊತ್ತಿಕೊಂಡೆ
ಗಿಡ ಕಣ್ಣಿಟ್ಟು ನೋಡಿ
ತಲೆ ತೂಗಿ ಹೂವರಿಳಿಸಿತು
ಗಿಡ ತುಂಬ.

ತತ್ತರಿಸುವ ಮನ
ತಥಾಗತನ ಎದುರಲ್ಲಿ
ಕರಗಿ ನೀರಾಗುತ್ತಿರುವ
ಹಿಮಗಡ್ಡೆಯ ಗುಡ್ಡೆ.

****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...