ಬಂದೇ ಬರತಾವ ಕಾಲ
ಮಂದಾರ ಕನಸನು
ಕಂಡಂಥ ಮನಸನು
ಒಂದು ಮಾಡುವ ಸ್ನೇಹಜಾಲ
– ಬಂದೇ ಬರತಾವ ಕಾಲ
ಮಾಗಿಯ ಎದೆ ತೂರಿ
ಕೂಗಿತೊ ಕೋಗಿಲ,
ರಾಗದ ಚಂದಕೆ
ಬಾಗಿತೊ ಬನವೆಲ್ಲ,
ತೂಗುತ ಬಳ್ಳಿ ಮೈಯನ್ನ
ಸಾಗದು ಬಾಳು ಏಕಾಕಿ ಎನುತಾವ
– ಬಂದೇ ಬರತಾವ ಕಾಲ
ಹುಣ್ಣಿಮೆ ಬಾನಿಂದ
ತಣ್ಣನೆ ಸವಿಹಾಲು
ಚೆಲ್ಲಿದೆ ಮೆಲ್ಲನೆ
ತೊಯಿಸಿದೆ ಬುವಿಯನು
ಮುಸುಕಿದೆ ಮಾಯೆ ಜಗವನು
ಬುವಿ ಬಾನು ಸೇರಿ ಹರಸ್ಯಾವ ಬಾಳನು
– ಬಂದೇ ಬರತಾವ ಕಾಲ
*****
ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.