Home / ಕವನ / ಕವಿತೆ / ರೈತಹತ್ಯಾ (ಬೀದಿ ನಾಟಕದ ಹಾಡು)

ರೈತಹತ್ಯಾ (ಬೀದಿ ನಾಟಕದ ಹಾಡು)

ಹಾಡು – ೧

ಎಲ್ಲಿಹುದೊ ಬಾಳ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಜೀವ ಜಲ ಹನಿಹನಿ ರಾಶಿ
ಸುರಿಯೆ ಧಾರೆ ಹಸಿರು ಕಾಣಿ
ಹೂವರಳಿಸಿ ನಗು ಮಿಂಚಿಸಿ
ಜೀವಕೆಲ್ಲ ಚೇತನವ ಪೂಸಿ ||

ಮುಗಿಲಾಗಿರೆ ಬಟ ಬಯಲು
ನೆಲವೆಲ್ಲ ದ್ವೇಷಾಗ್ನಿ ಬುಗಿಲು
ಎಲ್ಲಿ ನಮ್ಮ ಬೆಳ್ಳಿ ಬೆಳಕು
ಅದೆಲ್ಲಿಹುದೊ ಜೀವ ತಳುಕು ||

ಹಾಡು – ೨

ಯಾರು ಕಾಯುವರಣ್ಣ
ರೈತಾಪಿ ಜನರನ್ನ ||

ತೆಂಗೀಗೆ ಜಂಗಲು ಹಿಡಿದು
ಜುಂಗು ಹತ್ತಿತು ಬದುಕು
ಮಳೆಯಿಲ್ಲ ಬೆಳೆಯಿಲ್ಲ
ದನ ಕರುಗೆ ಮೇವಿಲ್ಲ ||

ಕಣಜದೋರಿಗೆ ಕರುಣೆಯಿಲ್ಲ
ಜಣ್‌ಜಣ್ ಹಣ ಕಾಣಲಿಲ್ಲ
ಕೀಟ ಕಳೆಯ ಔಸದೀಯ
ಭಾಗ್ಯವಲ್ಲ ನಾವೆ ಕುಡಿಯೊ ||

ಹಾಡು – ೩

ದುಡ್ಡು ಕೊಡ್ತಾರೆ ಇವರು
ಜಪ್ತಿ ಮಾಡ್ತಾರೆ ||

ಸಾಲ ಮಾಡಿ ಅಂತಾರೆ
ಸಬ್ಸಿಡಿ ಮಾತ ಹೇಳ್ತಾರೆ
ಸಾಲದ ಶೂಲಕೆ ಹಾಕುತ್ತ
ನಮ್ ಗೋಣು ಮುರಿತಾರೆ ||

ಸಾಲ ಎಣಿಸಿ ಕೊಡುತಾರೆ
ಮೇಲೆ ಬಡ್ಡಿ ಹಾಕ್ತಾರೆ
ಸರ್ವಿಸ್ ಪರ್ವಿಸ್ ಚಾರ್ಜು
ಅಂತ ಟಾರ್ಚರ್‍ ಮಾಡ್ತಾರೆ ||

ಹಾಡು – ೪

ಮಾರುವಾಡಿ ಮುಂದೆ ಬಂದ
ಅಡಮಾನವೆಲ್ಲ ಹರಾಜು ಎಂದ ||

ಬೆಳ್ಳಿ ಬಂಗಾರದ ಅಂಗಡಿ
ಕಾಲೂರಲು ಜಾಗ ಒಂದಡಿ
ಬೆಳೆದ ವಾಮನ ತ್ರಿವಿಕ್ರಮ
ಹಿಡಿಯೋರ್‍ಯಾರವನ ಕ್ರಮ ||

ಬಡ್ಡಿ ಬಡ್ಡಿ ಚಕ್ರ ಬಡ್ಡಿ
ಹೊಟ್ಟೆ ಬೆಳೆದಂತೆ ಅಡ್ಡಾದಿಡ್ಡಿ
ತಕಡಿಗಾಕಿದರೆ ಬಂಗಾರ
ಬಂದಿತಲ್ಲಾ ಸಂಚಕಾರ ||

ಹಾಡು – ೫

ಜಮೀನುದಾರ ಮುರುದಾರ
ಬಡವರ ಭೂಮಿ ಬಕಾಸುರ ||

ಬಡತನ ಭಂಗದ ಪಿತಾಮಹ
ಜೀತ ಬೆವರಿನ ರಣಪಂತ
ಹಸಿಮಾಂಸದ ನರಭಕ್ಷಕ
ಮಾಡೋರ್‍ಯಾರಿವಗೆ ಶಿಕ್ಷಾ ||

ಮೂರಕೆ ಆರು ಲೆಕ್ಕ ಬರೆದು
ಸಾಲಕೆ ಕಟ್ಟಿನ ಗೆರೆಯ ಕೊರೆದು
ಬಿಡದೆ ಮಾಡುವ ವಸೂಲಿಕೋರ
ಊರ ಜುಟ್ಟಿನ ಸೂತ್ರಧಾರ ||

ಹಾಡು – ೬

ಹರಿದೀತು ಕಣ್ಣಗಂಗೆ
ಗಂಗಮ್ಮ ತಾಯಾಗೆ
ಒಡ್ಡು ಕಟ್ಟುವರ್‍ಯಾರು
ಬೋಯಿಗಳು || ಅಣ್ಣಾ ||

ಮುದ್ದೆ ಕೂಡಿಸಲಿಕ್ಕೆ
ಹಿಟ್ಟಿಲ್ಲ ಸೊಪ್ಪಿಲ್ಲ
ಹಿಡಿ ಹಿಟ್ಟು ಆಯಿತೊ
ಹಂಬಲಿಯು || ಅಣ್ಣಾ ||

ತಿನ್ನಲಾರೆವು ಎಂದು
ಅನ್ನ ಚೆಲ್ಲುವ ಮಂದಿ
ಕೊಡಿರಯ್ಯೊ ಹಿಡಿಗೂಳು
ನಿಮ್ಮ ಧರ್ಮ || ಅಣ್ಣಾ ||

ಹಾಡು – ೭

ಕೊಳ್ಳುವಿರಾ ಅಣ್ಣಾ ಕೊಳ್ಳುವಿರಾ
ಜೀವಗಳು ಬಿಕರಿಗಿವೆ ಕೊಳ್ಳುವಿರಾ ||

ಜೀವಾವ ಕೊಂಡು ದುಡ್ಡಾ ಕೊಟ್ಟಾರೆ
ಅದೆ ನಮ್ಮ ಮನೆ ಮಂದಿ ಹೊಟ್ಟಹೊರೆ
ಜೀವ ಉಳಿಸಲು ಜೀವ ಮಾರಾಟವೆ
ಜೀವ ಕೊಂಡು ಜೀವ ಉಳಿಸಿರಣ್ಣಾ ||

ನಮ್ಮ ಹಸಿವು ದುಃಖ ನಿಮ್ಮದಾಗಲಿಲ್ಲ
ಕನಸ ಕೊಂಡು ಮಹಲಲಿ ಕುಣಿದಿರಲ್ಲ
ಹೊಟ್ಟೆ ಕೇಳಲಿಲ್ಲ ಸುಮ್ಮನಿರಲಾಗಿಲಿಲ್ಲ
ಉರಿಬೆಂದು ಬೂದಿ ಆದೆವಲ್ಲ ||

ಹಾಡು – ೮

ಸಹಾಯವ ಮಾಡೀರಣ್ಣ
ನಾವು ಸಾಯಬೇಕ್ರಣ್ಣ ||

ಇದ್ದು ನಾವು ಬದುಕಲಾರೆವು
ನಿಮಗೆ ಏನೂ ಮಾಡಲಾರೆವು
ಬದುಕಿಗಂತೂ ಏನೂ ಇಲ್ಲ
ಸಾವಿಗಾದ್ರೂ ಕೊಡ್ರಿ ಬೆಲ್ಲ ||

ನಮ್ಮ ಸಾವಿಗೆ ನೀವೇ ಸಾಕ್ಷಿ
ಅದುವೆ ಸದ್ಯ ನಮಗೆ ಮೋಕ್ಷ
ಮನಕರಗದವರ ನಡುವೆ
ಸಾವೆ ಪರಮ ಒಡವೆ ||
*****

 

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...