Home / ಕಥೆ / ಜನಪದ / ಮಾಡಿದ್ದೊಂದು ಆಗಿದ್ದೊಂದು

ಮಾಡಿದ್ದೊಂದು ಆಗಿದ್ದೊಂದು

ಹೀಗೆ ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿಗೆ ಸೊಸೆಯೂ ಬಂದಿದ್ದಳು. ವಾಡಿಕೆಯಂತೆ ಅತ್ತೆ ಸೊಸೆಯರಲ್ಲಿ ವಿರಸಕ್ಕಾರಂಭವಾಗಿ ಕದನವಾಗತೊಡಗಿದವು. ಕದನದ ಪರಿಣಾಮದಿಂದ ಕುನಸುಹುಟ್ಟಿಕೊಂಡಿತು ಪರಸ್ಪರರಲ್ಲಿ. ಎಂಥದೋ ಒಂದು ಉಪಾಯದಿಂದ ಅತ್ತೆಯನ್ನು ಇಲ್ಲದಂತಾಗಿಸಬೇಕೆಂಬ ಹಂಚಿಕೆಯನ್ನು ಸೊಸೆ ಹುಡುಕ ತೊಡಗಿದಳು. ಅದಕ್ಕೆ ಗಂಡನ ಸಹಾಯವೂ ಸಕಾಲದಲ್ಲಿ ದೊರೆಯುವಂತೆ ಹೇಳಿದ್ದಳು.

ರಾತ್ರಿ ಮಲಗಿರುವಾಗ ಅತ್ತೆಯನ್ನು ಕಟ್ಟಿ ಒಯ್ದು ಹೊಳೆಯಲ್ಲಿ ಒಗೆಯಬೇಕೆಂದು ನಿರ್ಧರಿಸಿ ಗಂಡನಿಗೆ ಸಿದ್ಧನಾಗಿರಲು ತಿಳಿಸಿದಳು. ಗಂಡನು ಹೆಂಡತಿಯ ಕೆಲಸಕ್ಕೆ ಸಮ್ಮತಿಸಿ ಅದನ್ನು ನಿರ್ವಹಿಸಲು ಸಿದ್ದನಾದರೂ ಆ ವಿಷಯವನ್ನು ತಾಯಿಗೆ ಹೇಳಲು ಮರೆಯಲಿಲ್ಲ.

ಅದೇ ಸಂದರ್ಭದಲ್ಲಿ ಮಗಳನ್ನು ಕಂಡು ಹೋಗಬೇಕೆಂದು ಸೊಸೆಯ ತಾಯಿ ಆ ಊರಿಗೆ ಬಂದಳು. ಮನೆಗೆ ಬಂದ ಬೀಗತಿಯನ್ನು ತಾಯಿ ಆದರದಿಂದ ಬರಮಾಡಿಕೊಂಡಳು. ಎಲ್ಲರೂ ಕೂಡಿ ಉಂಡುನಕ್ಕರು, ಕೆಲೆದರು. ರಾತ್ರಿ ಬಹಳ ಆಯಿತೆಂದು ತಂತಮ್ಮ ಹಾಸಿಗೆ ಹಾಸಿಕೊಂಡರು.

ಬೀಗತಿಯರು ಒಂದೇ ಕಡೆಯಲ್ಲಿ ಹಾಸಿಗೆ ಹಾಕಿದರು. ತಂತಮ್ಮ ಹೊದಿಕೆ ಹೊತ್ತು ಕೆಲಹೊತ್ತು ಮಾತಾಡುತ್ತ ಮಲಗಿದರು- ಬಳಿಕ ಅದರಿಗೆ ನಿದ್ದೆ ಹತ್ತಿತು.
ಗಂಡ ಹೆಂಡಿರು ನಿತ್ಯದಂತೆ ತಮ್ಮ ಕೋಣೆಗೆ ತೆರಳಿದರು ಮಲಗಲಿಕ್ಕೆ. ಸೊಸೆ ಯಾವುದೊ ನೆವದಿಂದ ಹೊರಗೆ ಬಂದು, ತನ್ನ ತಾಯಿ-ಅತ್ತೆಯರಿಗೆ ನಿದ್ದೆ ಹತ್ತಿದೆಯೆಂದು ಬಗೆದು, ಅತ್ತೆಯ ಕಾಲಬೆರಳಿಗೆ ಕಂಬಳಿಯ ಕರೆಯನ್ನು ಕಟ್ಟಿದಳು. ಅಂದಿನ ರಾತ್ರಿಯಲ್ಲಿಯೇ ಆಕೆಯನ್ನು ಹೊಳೆ ಕಾಣಿಸಿ ಬರಬೇಕಾಗಿತ್ತು.
ಇಬ್ಬರು ಮುದುಕಿಯರು ಒತ್ತಟ್ಟಿಗೆ ಮಲಗಿದಾಗ, ಗಂಡನು ತನ್ನ ತಾಯನ್ನು ಸಹಜವಾಗಿ ಗುರುತಿಸಲೆಂದು ಹಾಗೆ ಮಾಡಿ ಗಂಡನಿಗೆ ತಿಳಿಸಿದಳು.

ತನ್ನನ್ನು ಎಂದಾದರೊಮ್ಮೆ ಹೊತ್ತೊಯ್ಯುವರೆಂಬ ಎದೆಗುದಿಯಲ್ಲಿ ಆತನ ತಾಯಿಗೆ ನಿದ್ದೆ ಹತ್ತಿರಲಿಲ್ಲ. ಕಾಲಕಿರಿಬೆರಳಿಗೆ ಸೊಸೆ ಕಂಬಳಿಯ ಕರೆ ಕಟ್ಟುವುದು
ಆಕೆಗೆ ಗೊತ್ತಾಗಿತ್ತು. ಆದರೂ ಬೇಕೆಂತಲೇ ಡುಕ್ಕು ಹೊಡೆದಿದ್ದಳು. ಸೊಸೆ ತನ್ನ ಕೋಣೆಗೆ ಹೊರಟುಹೋದ ಮೇಲೆ, ಆಕೆ ಎದ್ದು ಕುಳಿತು ತನ್ನ ಕಾಲಿನ ಕರೆಯನ್ನು
ಬಿಚ್ಚಿ, ಬೀಗತಿಯ ಕಾಲಬೆರಳಿಗೆ ಕಟ್ಟಿದಳು. ಅದು ಆಕೆಗೆ ಗೊತ್ತಾಗಲಿಲ್ಲ. ಗಡದಾಗಿ ನಿದ್ದೆಹತ್ತಿತ್ತು.

ದೊಡ್ಡ ನಸುಕಿನಲ್ಲೆದ್ದು ಆತನು ಕರೆಕಟ್ಟಿದ ಕಾಲುಳ್ಳ ಮುದುಕಿಯನ್ನು ಅದೇ ಹಾಸಿಗೆಯಲ್ಲಿ ಸುತ್ತಿ ಬಿಗಿದು, ಹೊತ್ತುಕೊಂಡು ಹೊಳೆಯಕಡೆಗೆ ನಡೆದನು.
ಜೊತೆಯಲ್ಲಿ ಹೆಂಡತಿಯೂ ಇದ್ದಳು. ಹೊಳೆಯಲ್ಲಿ ಒಂದು ಕಡೆಗೆ ನೀರು ಬಹಳವಿದ್ದವು. ಅಲ್ಲಿಗೆ ಹೋಗಿ ತಲೆಯಮೇಲಿನ ಗಂಟನ್ನು ಚೆಲ್ಲಿಕೊಟ್ಟ ಬಳಿಕ
“ಪೀಡೆ ತೊಲಗಿತು” ಎಂದು ಹೆಂಡತಿ ಸಮಾಧಾನದ ಉಸಿರು ಹಾಕಿದಳು.

ಅವರು ತಮ್ಮ ಕೆಲಸ ಮುಗಿಸುವ ಹೊತ್ತಿಗೆ ನಸುಕುಹರಿದು ಬೆಳಗಾಗತೊಡಗಿತು. ಗಂಡ ಹೆಂಡರು ಮನೆಯ ಹಾದಿ ಹಿಡಿದರು.

ಎಂಥದೋ ಮೌನದಲ್ಲಿ ಅರ್ಧದಾರಿ ಮರಳಿ ಬಂದ ಮೇಲೆ “ಮನಸಿನಂತೆ ಮಹಾದೇವ” ಎಂದಳು ಹೆಂಡತಿ.

“ಮನೆಗೆ ಹೋದ ಬಳಿಕ ತಿಳಿಯುವದು” ಗಂಡನ ಪಡಿನುಡಿ.

ಹೆಂಡತಿಗೆ ಅದೇನೋ ದಿಗಿಲು. ಮತ್ತೆ ಅದೇ ಮೌನದಲ್ಲಿ ಮನೆಗೆ ಬರುವಷ್ಟರಲ್ಲಿ ತನ್ನತ್ತೆಯೇ ಬಾಗಿನಿಂತು, ಬಾಗಿಲಮುಂದೆ ಕಸಗುಡಿಸುವದನ್ನು ಕಂಡು ತಬ್ಬಿಬ್ಬಾದಳು. ಆದರೆ ಯಾರಿಗೆ ಹೇಳುವುದು, ಏನೆಂದು ಹೇಳುವುದು. ಹೊಳೆಯ ಪಾಲಾದವಳು ಗಂಡನ ತಾಯಾಗಿರದೆ ತನ್ನ ತಾಯಿಯೇ ಆಗಿದ್ದಾಳೆಂದು
ಬಗೆದು ಒಳಗಿನದೊಳಗೇ ದುಃಖಿಸಿದಳು. ಆಡಿತೋರಿಸಲು ಸಾಧ್ಯವೇ ?

ಹೆಂಡತಿಯ ಅತ್ತೆಯನ್ನು ಹೊತ್ತೊಯ್ದು ಹೊಳೆಕಾಣಿಸುವುದನ್ನು ಬಿಟ್ಟು. ತನ್ನತ್ತೆಯನ್ನು ಹೊತ್ತೊಯ್ಯುವ ಪ್ರಸಂಗ ಬಂದುದು ಆಶ್ಚರ್ಯವೆಂದು ಬಗೆದ ಗಂಡನಿಗೂ ಅದರ ಕೀಲು ತಿಳಿದಿರಲಿಲ್ಲ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...