Home / ಕಥೆ / ಜನಪದ / ಮಾಡಿದ್ದೊಂದು ಆಗಿದ್ದೊಂದು

ಮಾಡಿದ್ದೊಂದು ಆಗಿದ್ದೊಂದು

ಹೀಗೆ ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿಗೆ ಸೊಸೆಯೂ ಬಂದಿದ್ದಳು. ವಾಡಿಕೆಯಂತೆ ಅತ್ತೆ ಸೊಸೆಯರಲ್ಲಿ ವಿರಸಕ್ಕಾರಂಭವಾಗಿ ಕದನವಾಗತೊಡಗಿದವು. ಕದನದ ಪರಿಣಾಮದಿಂದ ಕುನಸುಹುಟ್ಟಿಕೊಂಡಿತು ಪರಸ್ಪರರಲ್ಲಿ. ಎಂಥದೋ ಒಂದು ಉಪಾಯದಿಂದ ಅತ್ತೆಯನ್ನು ಇಲ್ಲದಂತಾಗಿಸಬೇಕೆಂಬ ಹಂಚಿಕೆಯನ್ನು ಸೊಸೆ ಹುಡುಕ ತೊಡಗಿದಳು. ಅದಕ್ಕೆ ಗಂಡನ ಸಹಾಯವೂ ಸಕಾಲದಲ್ಲಿ ದೊರೆಯುವಂತೆ ಹೇಳಿದ್ದಳು.

ರಾತ್ರಿ ಮಲಗಿರುವಾಗ ಅತ್ತೆಯನ್ನು ಕಟ್ಟಿ ಒಯ್ದು ಹೊಳೆಯಲ್ಲಿ ಒಗೆಯಬೇಕೆಂದು ನಿರ್ಧರಿಸಿ ಗಂಡನಿಗೆ ಸಿದ್ಧನಾಗಿರಲು ತಿಳಿಸಿದಳು. ಗಂಡನು ಹೆಂಡತಿಯ ಕೆಲಸಕ್ಕೆ ಸಮ್ಮತಿಸಿ ಅದನ್ನು ನಿರ್ವಹಿಸಲು ಸಿದ್ದನಾದರೂ ಆ ವಿಷಯವನ್ನು ತಾಯಿಗೆ ಹೇಳಲು ಮರೆಯಲಿಲ್ಲ.

ಅದೇ ಸಂದರ್ಭದಲ್ಲಿ ಮಗಳನ್ನು ಕಂಡು ಹೋಗಬೇಕೆಂದು ಸೊಸೆಯ ತಾಯಿ ಆ ಊರಿಗೆ ಬಂದಳು. ಮನೆಗೆ ಬಂದ ಬೀಗತಿಯನ್ನು ತಾಯಿ ಆದರದಿಂದ ಬರಮಾಡಿಕೊಂಡಳು. ಎಲ್ಲರೂ ಕೂಡಿ ಉಂಡುನಕ್ಕರು, ಕೆಲೆದರು. ರಾತ್ರಿ ಬಹಳ ಆಯಿತೆಂದು ತಂತಮ್ಮ ಹಾಸಿಗೆ ಹಾಸಿಕೊಂಡರು.

ಬೀಗತಿಯರು ಒಂದೇ ಕಡೆಯಲ್ಲಿ ಹಾಸಿಗೆ ಹಾಕಿದರು. ತಂತಮ್ಮ ಹೊದಿಕೆ ಹೊತ್ತು ಕೆಲಹೊತ್ತು ಮಾತಾಡುತ್ತ ಮಲಗಿದರು- ಬಳಿಕ ಅದರಿಗೆ ನಿದ್ದೆ ಹತ್ತಿತು.
ಗಂಡ ಹೆಂಡಿರು ನಿತ್ಯದಂತೆ ತಮ್ಮ ಕೋಣೆಗೆ ತೆರಳಿದರು ಮಲಗಲಿಕ್ಕೆ. ಸೊಸೆ ಯಾವುದೊ ನೆವದಿಂದ ಹೊರಗೆ ಬಂದು, ತನ್ನ ತಾಯಿ-ಅತ್ತೆಯರಿಗೆ ನಿದ್ದೆ ಹತ್ತಿದೆಯೆಂದು ಬಗೆದು, ಅತ್ತೆಯ ಕಾಲಬೆರಳಿಗೆ ಕಂಬಳಿಯ ಕರೆಯನ್ನು ಕಟ್ಟಿದಳು. ಅಂದಿನ ರಾತ್ರಿಯಲ್ಲಿಯೇ ಆಕೆಯನ್ನು ಹೊಳೆ ಕಾಣಿಸಿ ಬರಬೇಕಾಗಿತ್ತು.
ಇಬ್ಬರು ಮುದುಕಿಯರು ಒತ್ತಟ್ಟಿಗೆ ಮಲಗಿದಾಗ, ಗಂಡನು ತನ್ನ ತಾಯನ್ನು ಸಹಜವಾಗಿ ಗುರುತಿಸಲೆಂದು ಹಾಗೆ ಮಾಡಿ ಗಂಡನಿಗೆ ತಿಳಿಸಿದಳು.

ತನ್ನನ್ನು ಎಂದಾದರೊಮ್ಮೆ ಹೊತ್ತೊಯ್ಯುವರೆಂಬ ಎದೆಗುದಿಯಲ್ಲಿ ಆತನ ತಾಯಿಗೆ ನಿದ್ದೆ ಹತ್ತಿರಲಿಲ್ಲ. ಕಾಲಕಿರಿಬೆರಳಿಗೆ ಸೊಸೆ ಕಂಬಳಿಯ ಕರೆ ಕಟ್ಟುವುದು
ಆಕೆಗೆ ಗೊತ್ತಾಗಿತ್ತು. ಆದರೂ ಬೇಕೆಂತಲೇ ಡುಕ್ಕು ಹೊಡೆದಿದ್ದಳು. ಸೊಸೆ ತನ್ನ ಕೋಣೆಗೆ ಹೊರಟುಹೋದ ಮೇಲೆ, ಆಕೆ ಎದ್ದು ಕುಳಿತು ತನ್ನ ಕಾಲಿನ ಕರೆಯನ್ನು
ಬಿಚ್ಚಿ, ಬೀಗತಿಯ ಕಾಲಬೆರಳಿಗೆ ಕಟ್ಟಿದಳು. ಅದು ಆಕೆಗೆ ಗೊತ್ತಾಗಲಿಲ್ಲ. ಗಡದಾಗಿ ನಿದ್ದೆಹತ್ತಿತ್ತು.

ದೊಡ್ಡ ನಸುಕಿನಲ್ಲೆದ್ದು ಆತನು ಕರೆಕಟ್ಟಿದ ಕಾಲುಳ್ಳ ಮುದುಕಿಯನ್ನು ಅದೇ ಹಾಸಿಗೆಯಲ್ಲಿ ಸುತ್ತಿ ಬಿಗಿದು, ಹೊತ್ತುಕೊಂಡು ಹೊಳೆಯಕಡೆಗೆ ನಡೆದನು.
ಜೊತೆಯಲ್ಲಿ ಹೆಂಡತಿಯೂ ಇದ್ದಳು. ಹೊಳೆಯಲ್ಲಿ ಒಂದು ಕಡೆಗೆ ನೀರು ಬಹಳವಿದ್ದವು. ಅಲ್ಲಿಗೆ ಹೋಗಿ ತಲೆಯಮೇಲಿನ ಗಂಟನ್ನು ಚೆಲ್ಲಿಕೊಟ್ಟ ಬಳಿಕ
“ಪೀಡೆ ತೊಲಗಿತು” ಎಂದು ಹೆಂಡತಿ ಸಮಾಧಾನದ ಉಸಿರು ಹಾಕಿದಳು.

ಅವರು ತಮ್ಮ ಕೆಲಸ ಮುಗಿಸುವ ಹೊತ್ತಿಗೆ ನಸುಕುಹರಿದು ಬೆಳಗಾಗತೊಡಗಿತು. ಗಂಡ ಹೆಂಡರು ಮನೆಯ ಹಾದಿ ಹಿಡಿದರು.

ಎಂಥದೋ ಮೌನದಲ್ಲಿ ಅರ್ಧದಾರಿ ಮರಳಿ ಬಂದ ಮೇಲೆ “ಮನಸಿನಂತೆ ಮಹಾದೇವ” ಎಂದಳು ಹೆಂಡತಿ.

“ಮನೆಗೆ ಹೋದ ಬಳಿಕ ತಿಳಿಯುವದು” ಗಂಡನ ಪಡಿನುಡಿ.

ಹೆಂಡತಿಗೆ ಅದೇನೋ ದಿಗಿಲು. ಮತ್ತೆ ಅದೇ ಮೌನದಲ್ಲಿ ಮನೆಗೆ ಬರುವಷ್ಟರಲ್ಲಿ ತನ್ನತ್ತೆಯೇ ಬಾಗಿನಿಂತು, ಬಾಗಿಲಮುಂದೆ ಕಸಗುಡಿಸುವದನ್ನು ಕಂಡು ತಬ್ಬಿಬ್ಬಾದಳು. ಆದರೆ ಯಾರಿಗೆ ಹೇಳುವುದು, ಏನೆಂದು ಹೇಳುವುದು. ಹೊಳೆಯ ಪಾಲಾದವಳು ಗಂಡನ ತಾಯಾಗಿರದೆ ತನ್ನ ತಾಯಿಯೇ ಆಗಿದ್ದಾಳೆಂದು
ಬಗೆದು ಒಳಗಿನದೊಳಗೇ ದುಃಖಿಸಿದಳು. ಆಡಿತೋರಿಸಲು ಸಾಧ್ಯವೇ ?

ಹೆಂಡತಿಯ ಅತ್ತೆಯನ್ನು ಹೊತ್ತೊಯ್ದು ಹೊಳೆಕಾಣಿಸುವುದನ್ನು ಬಿಟ್ಟು. ತನ್ನತ್ತೆಯನ್ನು ಹೊತ್ತೊಯ್ಯುವ ಪ್ರಸಂಗ ಬಂದುದು ಆಶ್ಚರ್ಯವೆಂದು ಬಗೆದ ಗಂಡನಿಗೂ ಅದರ ಕೀಲು ತಿಳಿದಿರಲಿಲ್ಲ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...