Home / ಕಥೆ / ಜನಪದ / ಮಾಡಿದ್ದೊಂದು ಆಗಿದ್ದೊಂದು

ಮಾಡಿದ್ದೊಂದು ಆಗಿದ್ದೊಂದು

ಹೀಗೆ ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿಗೆ ಸೊಸೆಯೂ ಬಂದಿದ್ದಳು. ವಾಡಿಕೆಯಂತೆ ಅತ್ತೆ ಸೊಸೆಯರಲ್ಲಿ ವಿರಸಕ್ಕಾರಂಭವಾಗಿ ಕದನವಾಗತೊಡಗಿದವು. ಕದನದ ಪರಿಣಾಮದಿಂದ ಕುನಸುಹುಟ್ಟಿಕೊಂಡಿತು ಪರಸ್ಪರರಲ್ಲಿ. ಎಂಥದೋ ಒಂದು ಉಪಾಯದಿಂದ ಅತ್ತೆಯನ್ನು ಇಲ್ಲದಂತಾಗಿಸಬೇಕೆಂಬ ಹಂಚಿಕೆಯನ್ನು ಸೊಸೆ ಹುಡುಕ ತೊಡಗಿದಳು. ಅದಕ್ಕೆ ಗಂಡನ ಸಹಾಯವೂ ಸಕಾಲದಲ್ಲಿ ದೊರೆಯುವಂತೆ ಹೇಳಿದ್ದಳು.

ರಾತ್ರಿ ಮಲಗಿರುವಾಗ ಅತ್ತೆಯನ್ನು ಕಟ್ಟಿ ಒಯ್ದು ಹೊಳೆಯಲ್ಲಿ ಒಗೆಯಬೇಕೆಂದು ನಿರ್ಧರಿಸಿ ಗಂಡನಿಗೆ ಸಿದ್ಧನಾಗಿರಲು ತಿಳಿಸಿದಳು. ಗಂಡನು ಹೆಂಡತಿಯ ಕೆಲಸಕ್ಕೆ ಸಮ್ಮತಿಸಿ ಅದನ್ನು ನಿರ್ವಹಿಸಲು ಸಿದ್ದನಾದರೂ ಆ ವಿಷಯವನ್ನು ತಾಯಿಗೆ ಹೇಳಲು ಮರೆಯಲಿಲ್ಲ.

ಅದೇ ಸಂದರ್ಭದಲ್ಲಿ ಮಗಳನ್ನು ಕಂಡು ಹೋಗಬೇಕೆಂದು ಸೊಸೆಯ ತಾಯಿ ಆ ಊರಿಗೆ ಬಂದಳು. ಮನೆಗೆ ಬಂದ ಬೀಗತಿಯನ್ನು ತಾಯಿ ಆದರದಿಂದ ಬರಮಾಡಿಕೊಂಡಳು. ಎಲ್ಲರೂ ಕೂಡಿ ಉಂಡುನಕ್ಕರು, ಕೆಲೆದರು. ರಾತ್ರಿ ಬಹಳ ಆಯಿತೆಂದು ತಂತಮ್ಮ ಹಾಸಿಗೆ ಹಾಸಿಕೊಂಡರು.

ಬೀಗತಿಯರು ಒಂದೇ ಕಡೆಯಲ್ಲಿ ಹಾಸಿಗೆ ಹಾಕಿದರು. ತಂತಮ್ಮ ಹೊದಿಕೆ ಹೊತ್ತು ಕೆಲಹೊತ್ತು ಮಾತಾಡುತ್ತ ಮಲಗಿದರು- ಬಳಿಕ ಅದರಿಗೆ ನಿದ್ದೆ ಹತ್ತಿತು.
ಗಂಡ ಹೆಂಡಿರು ನಿತ್ಯದಂತೆ ತಮ್ಮ ಕೋಣೆಗೆ ತೆರಳಿದರು ಮಲಗಲಿಕ್ಕೆ. ಸೊಸೆ ಯಾವುದೊ ನೆವದಿಂದ ಹೊರಗೆ ಬಂದು, ತನ್ನ ತಾಯಿ-ಅತ್ತೆಯರಿಗೆ ನಿದ್ದೆ ಹತ್ತಿದೆಯೆಂದು ಬಗೆದು, ಅತ್ತೆಯ ಕಾಲಬೆರಳಿಗೆ ಕಂಬಳಿಯ ಕರೆಯನ್ನು ಕಟ್ಟಿದಳು. ಅಂದಿನ ರಾತ್ರಿಯಲ್ಲಿಯೇ ಆಕೆಯನ್ನು ಹೊಳೆ ಕಾಣಿಸಿ ಬರಬೇಕಾಗಿತ್ತು.
ಇಬ್ಬರು ಮುದುಕಿಯರು ಒತ್ತಟ್ಟಿಗೆ ಮಲಗಿದಾಗ, ಗಂಡನು ತನ್ನ ತಾಯನ್ನು ಸಹಜವಾಗಿ ಗುರುತಿಸಲೆಂದು ಹಾಗೆ ಮಾಡಿ ಗಂಡನಿಗೆ ತಿಳಿಸಿದಳು.

ತನ್ನನ್ನು ಎಂದಾದರೊಮ್ಮೆ ಹೊತ್ತೊಯ್ಯುವರೆಂಬ ಎದೆಗುದಿಯಲ್ಲಿ ಆತನ ತಾಯಿಗೆ ನಿದ್ದೆ ಹತ್ತಿರಲಿಲ್ಲ. ಕಾಲಕಿರಿಬೆರಳಿಗೆ ಸೊಸೆ ಕಂಬಳಿಯ ಕರೆ ಕಟ್ಟುವುದು
ಆಕೆಗೆ ಗೊತ್ತಾಗಿತ್ತು. ಆದರೂ ಬೇಕೆಂತಲೇ ಡುಕ್ಕು ಹೊಡೆದಿದ್ದಳು. ಸೊಸೆ ತನ್ನ ಕೋಣೆಗೆ ಹೊರಟುಹೋದ ಮೇಲೆ, ಆಕೆ ಎದ್ದು ಕುಳಿತು ತನ್ನ ಕಾಲಿನ ಕರೆಯನ್ನು
ಬಿಚ್ಚಿ, ಬೀಗತಿಯ ಕಾಲಬೆರಳಿಗೆ ಕಟ್ಟಿದಳು. ಅದು ಆಕೆಗೆ ಗೊತ್ತಾಗಲಿಲ್ಲ. ಗಡದಾಗಿ ನಿದ್ದೆಹತ್ತಿತ್ತು.

ದೊಡ್ಡ ನಸುಕಿನಲ್ಲೆದ್ದು ಆತನು ಕರೆಕಟ್ಟಿದ ಕಾಲುಳ್ಳ ಮುದುಕಿಯನ್ನು ಅದೇ ಹಾಸಿಗೆಯಲ್ಲಿ ಸುತ್ತಿ ಬಿಗಿದು, ಹೊತ್ತುಕೊಂಡು ಹೊಳೆಯಕಡೆಗೆ ನಡೆದನು.
ಜೊತೆಯಲ್ಲಿ ಹೆಂಡತಿಯೂ ಇದ್ದಳು. ಹೊಳೆಯಲ್ಲಿ ಒಂದು ಕಡೆಗೆ ನೀರು ಬಹಳವಿದ್ದವು. ಅಲ್ಲಿಗೆ ಹೋಗಿ ತಲೆಯಮೇಲಿನ ಗಂಟನ್ನು ಚೆಲ್ಲಿಕೊಟ್ಟ ಬಳಿಕ
“ಪೀಡೆ ತೊಲಗಿತು” ಎಂದು ಹೆಂಡತಿ ಸಮಾಧಾನದ ಉಸಿರು ಹಾಕಿದಳು.

ಅವರು ತಮ್ಮ ಕೆಲಸ ಮುಗಿಸುವ ಹೊತ್ತಿಗೆ ನಸುಕುಹರಿದು ಬೆಳಗಾಗತೊಡಗಿತು. ಗಂಡ ಹೆಂಡರು ಮನೆಯ ಹಾದಿ ಹಿಡಿದರು.

ಎಂಥದೋ ಮೌನದಲ್ಲಿ ಅರ್ಧದಾರಿ ಮರಳಿ ಬಂದ ಮೇಲೆ “ಮನಸಿನಂತೆ ಮಹಾದೇವ” ಎಂದಳು ಹೆಂಡತಿ.

“ಮನೆಗೆ ಹೋದ ಬಳಿಕ ತಿಳಿಯುವದು” ಗಂಡನ ಪಡಿನುಡಿ.

ಹೆಂಡತಿಗೆ ಅದೇನೋ ದಿಗಿಲು. ಮತ್ತೆ ಅದೇ ಮೌನದಲ್ಲಿ ಮನೆಗೆ ಬರುವಷ್ಟರಲ್ಲಿ ತನ್ನತ್ತೆಯೇ ಬಾಗಿನಿಂತು, ಬಾಗಿಲಮುಂದೆ ಕಸಗುಡಿಸುವದನ್ನು ಕಂಡು ತಬ್ಬಿಬ್ಬಾದಳು. ಆದರೆ ಯಾರಿಗೆ ಹೇಳುವುದು, ಏನೆಂದು ಹೇಳುವುದು. ಹೊಳೆಯ ಪಾಲಾದವಳು ಗಂಡನ ತಾಯಾಗಿರದೆ ತನ್ನ ತಾಯಿಯೇ ಆಗಿದ್ದಾಳೆಂದು
ಬಗೆದು ಒಳಗಿನದೊಳಗೇ ದುಃಖಿಸಿದಳು. ಆಡಿತೋರಿಸಲು ಸಾಧ್ಯವೇ ?

ಹೆಂಡತಿಯ ಅತ್ತೆಯನ್ನು ಹೊತ್ತೊಯ್ದು ಹೊಳೆಕಾಣಿಸುವುದನ್ನು ಬಿಟ್ಟು. ತನ್ನತ್ತೆಯನ್ನು ಹೊತ್ತೊಯ್ಯುವ ಪ್ರಸಂಗ ಬಂದುದು ಆಶ್ಚರ್ಯವೆಂದು ಬಗೆದ ಗಂಡನಿಗೂ ಅದರ ಕೀಲು ತಿಳಿದಿರಲಿಲ್ಲ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...