Home / ಕವನ / ಕವಿತೆ / ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ           || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ               || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ            || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ           || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ           || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ            || ೫ ||
***

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...