Home / ಕವನ / ಕವಿತೆ / ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ

ಎಲ್ಲರಂಥವನಲ್ಲ ನನ ಗಂಡ
ಬಲ್ಲಿದನು ಪುಂಡ
ಎಲ್ಲರಂಥವನಲ್ಲ ನನ ಗಂಡ         || ಪ ||

ಸೊಲ್ಲು ಸೊಲ್ಲಿಗೆ ಬಯ್ದು ನನ್ನ
ಎಲ್ಲಿಗೋಗದ್ಹಾಂಗ ಮಾಡಿಟ್ಟಾ
ಕಾಲ್ಮುರಿದು ಬಿಟ್ಟಾ           || ಅ.ಪ ||

ಮಾತಾಪಿತರು ಮನೆಯೊಳಿರುತಿರಲು
ಮನಸೋತು ಮೂವರು
ಪ್ರೀತಿಗೆಳೆತನ ಮಾತಿನೊಳಿರುತಿರಲು
ಮೈನೆರೆತು ಮಾಯದಿ
ಘಾತವಾಯಿತು ಯವ್ವನವು ಬರಲು
ಹಿಂಗಾಗುತಿರಲು
ದೂತೆ ಕೇಳ್ನಿಮ್ಮವರು ಶೋಭನ
ರೀತಿಚಾರವನೆಲ್ಲ ತೀರಿಸಿ
ಆತನೊಳು ಮೈಹೊಂದಿಕೆಯ ಮಾಡಿ
ಮಮತೆಯಲ್ಲಿ ಕೂಡಿ               || ೧ ||

ಅಕ್ಕತಂಗಿಯರಾರು ಮಂದಿಗಳಾ
ಅಗಲಿಸಿದನೈವರ
ಕಕ್ಕುಲಾತಿಯ ಅಣ್ಣತಮ್ಮಗಳಾ
ನೆದರೆತ್ತಿ ಮ್ಯಾಲಕ
ನೋಡಗೊಡದೇ ಹತ್ತು ದಿಕ್ಕುಗಳಾ
ಮಾಡಿದನೆ ಮರುಳಾ
ತೆಕ್ಕೆಯೊಳು ಬಿಗಿದಪ್ಪಿ ಸುರತಾ-
ನಂದಸುಖ ತಾಂಬೂಲ ರಸಗುಟ-
ಗಿಕ್ಕಿ ಅಕ್ಕರತಿಯಲಿ ನಗುವನು ತಾ
ಬಹು ಸುಗುಣನೀತಾ            || ೨ ||

ತುಂಟ ಸವತಿಯ ಸೊಂಟಮುರಿ ಹೊಡೆದಾ
ಒಣ ಪಂಟಮಾತಿನ
ಗಂಟಗಳ್ಳರ ಮನೆಗೆ ಬರಗೊಡದಾ
ಹದಿನೆಂಟು ಮಂದಿ
ಕುಂಟಲಿಯರ ಹಾದಿಯನು ಕಡಿದಾ
ಎನ್ನ ಕರವ ಪಿಡಿದಾ
ಕುಂಟಕುರುಡಾರೆಂಟು ಮಂದಿ
ಗಂಟುಬಿದ್ದರೆ ಅವರ ಕಾಣುತ
ಗಂಟಲಕೆ ಗಾಣಾದನೇಳಕ್ಕಾ
ತಕ್ಕವನೇ ಸಿಕ್ಕಾ           || ೩ ||

ಅತ್ತೆಮಾವರ ಮನೆಯ ಬಿಡಿಸಿದನೇ
ಮತ್ತೆಲ್ಲಿ ಮೂವರ
ಮಕ್ಕಳೈವರು ಮಮತೆಯ ಕೆಡಿಸಿದನೇ
ಎನ್ನನ್ನು ತಂದು
ರತ್ನಜ್ಯೋತಿಯ ಪ್ರಭೆಯೊಳಿರಿಸಿದನೇ
ಎನಗೊತ್ತಿನವನು
ಎತ್ತ ಹೋಗದೆ ಚಿತ್ತವಗಲದೆ
ಗೊತ್ತಿನಲ್ಲಿ ಇಟ್ಟು ಎನ್ನನು
ಮುತ್ತಿನಾ ಮೂಗುತಿಯ ಕೊಟ್ಟಾನೇ
ಅವನೇನು ದಿಟ್ಟನೇ           || ೪ ||

ಕಾಂತೆ ಕೇಳೆ ಕರುಣ ಗುಣದಿಂದ
ಎನಗಿಂಥ ಪುರುಷನು
ಬಂದು ದೊರಕಿದ ಪುಣ್ಯಫಲದಿಂದಾ
ಎನ್ನಂತರಂಗದ
ಕಾಂತ ಶ್ರೀ ಗುರುನಾಥ ಗೋವಿಂದಾ
ಶಿಶುನಾಳದಿಂದ
ಕಾಂತೆ ಬಾರೆಂತೆಂದು ಕರೆದೇ-
ಕಾಂತ ಮಂದಿರದೊಳಗೆ ಒಯ್ದು
ಭ್ರಾಂತಿ ಭವ ದುರಿತವನು ಪರಿಹರಿಸಿ
ಚಿಂತೆಯನು ಮರಸಿ            || ೫ ||
***

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...