Home / ಕವನ / ಕವಿತೆ / ಒಂದು ಪೇಟೆಯೆಂದರೆ

ಒಂದು ಪೇಟೆಯೆಂದರೆ

ಸಣ್ಣಪುಟ್ಟ ಓಣಿಗಳನ್ನೂ ಬೀದಿಗಳನ್ನೂ ಈ ಪೇಟೆಯ ಒಳಹೊರಕ್ಕೆ
ಹೊಕ್ಕು ಹೊರಟು ಅಚಾನಕ ನಿಮ್ಮ ಕೈಬಿಡುವ ಹಾದಿಗಳನ್ನೂ
ಹೋಲಿಸಬಹುದು ಕ್ಲಿಷ್ಟವಾದೊಂದು ನರಮಂಡಲಕ್ಕೆ

ಅದರಿದರ ಮಿದುಳು ಯಾವುದೋ ನಾನು ಕಾಣೆ
ತಾಲೂಕಾಪೀಸೆ, ನಗರಸಭಾಕಛೇರಿಯೆ, ಜೈಲೆ,
ರೈಲು ನಿಲ್ದಾಣವೆ, ಅಥವ ಕಾವಿ ಬಳಿದ ಪೋಲೀಸು ಠಾಣೆ?

ಮಿದುಳಿರುವುದಕ್ಕೆ ಇದೇನೂ ಸಾವಯವ ಜೀವಿಯಲ್ಲ ಖರೆ
ಬಹುಶಃ ಇದ್ದೀತು ಇದು ಬೆಳೆದುಬಂದ ರೀತಿ ಸರಿಯಲ್ಲದೆ, ಅಥವ
ನಾವು ಮಾಡಿದ ಹೋಲಿಕೆಯಲ್ಲಿ ಏನೊ ತೊಂದರೆ

ಇದ್ದರೂ ಇರಬಹುದು.  ಆದರೂ ಈ ಸ್ಥಾವರಕ್ಕೆಷ್ಟು ನೆನಪು
ಕದಂಬರು ನಿಲ್ಲಿಸಿದ ಶಾಸನ ಮತ್ತೆ ಯಾರೋ ಹೇರಿಸಿದ ಮದರಾಸು
ಸಂಸ್ಥಾನ, ನಿನ್ನೆ ಮೊನ್ನೆ ಈ ಕಡೆ ಬಂದವನು ಟಿಪ್ಪು

ಇದು ಚರಿತ್ರೆ.  ಚರಿತ್ರೆಯೊಂದೇ ನೆನಪಲ್ಲ.  ನೆನಪು ಉಪ್ಪಿನ ಹಾಗೆ
ಸಮುದ್ರದಿಂದ ಮೊಗೆದುದು ಅಥವ ಭೂಮಿಯೊಳಗಿಂದ ಅಗೆದುದು
ಮೈಯಲ್ಲಿ ಕರಗಿರುವುದು, ಹರಳುಗಟ್ಟುವುದಿಲ್ಲ ಒಳಗೆ

ತಲೆಹೊರೆಯಾಗಿ ಇಲ್ಲಿಗಿದು ಬಂತು ಈ ನೆನಪು ಬಳಸು ದಾರಿ
ಸಾಗಿ, ನೆಲಕ್ಕೆ ಸುರಿದ ಇಲ್ಲವೇ ಉಟ್ಟ ವಸ್ತ್ರಕ್ಕೆ ಒರಸಿದ ಬೆವರಾಗಿ
ಕಣ್ಣ ಒಸರಿನಲ್ಲಷ್ಟು ನಡೆಯೆಬ್ಬಿಸಿದ ಧೂಳಿನಲ್ಲಷ್ಟು ಸೇರಿ

ಬಂದರೆ ಆಲ ಅಶ್ವತ್ಥ ಗುಡಿಗುಡಾರಗಳು ಗದ್ದೆ ಬಯಲು
ಗಡಿ ಗಡಿಗೆ ಒಮ್ಮೆ ನಿಲ್ಲಿಸಿದ್ದ ಹೊರೆಕಂಬಗಳು
ಮತ್ತೆ ನಸುಕಿಗೇ ಕಟ್ಟಿದ ಎತ್ತಿನ ಗಾಡಿಗಳ ಸಾಲು

ಈ ನೆನಪಿನ ಸಾಕ್ಷಿ.  ಹೀಗೆ ಈ ಪೇಟೆಯ ನರಗಳಿಗೆ ಎಲ್ಲೆಲ್ಲೂ
ಸಾಗಿ ಸೆಣೆದು ಸೇರುವಾತುರ ಈ ಹೊರೆ ಹೊತ್ತು ಆ ಅಗೋಚರ ಕೇಂದ್ರ
ಯಾವ ಅರೆಗನಸಿನ ತೆಕ್ಕೆಯಲ್ಲೊ ಯಾವ ಕೊಚ್ಚೆಯ ಮಗ್ಗುಲಲ್ಲೊ

ಸೇರುವುವು ಸೇರಲೇಬೇಕಾಗಿ.  ಒಂದು ಪೇಟೆಯೆಂದರೆ ನೆಲ
ಸಾರಿಸಿ ಹಾಕಿದ ರಂಗೋಲಿಯಲ್ಲ, ಟೇಬಲಿನ ಮೇಲೆ ಹೊಳೆಯುವ
ತಾಟಿನಲ್ಲಿ ನೀಟಾಗಿ ಕತ್ತಿರಿಸಿಟ್ಟ ಕಸಿಮಾವಿನ ಹಣ್ಣಲ್ಲ

ಒಂದು ಪೇಟೆಗೆ ತನ್ನದೇ ಎದೆಬಡಿತವಿದೆ.  ಕೇಳಿಲ್ಲವೇ ನಾವದನ್ನು
ಒಂಟಿಯಾಗಿ ಎಲ್ಲಿಂದೆಲ್ಲಿಗೆ ಸಾಗುವ ರಾತ್ರಿ ಉಗಿಬಂಡಿಯ
ಭಾರವಾದ ಕಾಲಸಪ್ಪಳದಲ್ಲಿ ಮಿಳಿಯುವುದನ್ನು

ಕಂಡಿಲ್ಲವೇ ಅದು ಮುದುಕುವುದು ಘಟ್ಟದ ಕೆಳಗೆ ಮಳೆ ಬೀಳುವ ಇರುಳು
ವೃದ್ಧನಂತೆ ಅಥವ ತೆರೆಯುವುದಂಗಾತ ಹೆಣ್ಣಿನಂತೆ
ಮುಂದೊತ್ತುವಾಗ ಯಕ್ಷಿಣೀ ಲಾಂದ್ರದ ನೆರಳು

ಒಂದು ಪೇಟೆಯೆಂದರೆ ಬರೇ ಅಂಗಡಿಬೀದಿಗಳಲ್ಲ.  ಇದರ ವಸ್ತು
ಈ ಹೊಗೆಹಿಡಿದ ಹಂಚಿನ ಮತ್ತು ಮುಳಿಮನೆಗಳ ಬದಿಗೆ
ಅಡ್ಡಾದಿಡ್ಡಿ ಹೆಜ್ಜೆಗಳಲ್ಲಿ ಮೂಡಿದ ಪ್ರತ್ಯೇಕ ಗುರುತು

ಒದಗಬೇಕಷ್ಟೆ ಇಲ್ಲಿ ನಡೆವವರಿಗೆ ಮಾತ್ರ.  ಎಷ್ಟೆ
ಹೊರಟರೂ ಮತ್ತೆ ತನ್ನ ಒಳಪ್ರಾಕಾರಗಳಲ್ಲಿ ಸುತ್ತಿಸುವ ಕೋಟೆ
ನೀವೇ ಹೇಳಿದಂತೆ ನಮಗೆ ವಿಧಿಸುವುದು ನಾವು ಕಲ್ಪಿಸಿದ ಪೇಟೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...