Home / ಕವನ / ಕವಿತೆ / ಹಳೆ ಮಾರ್ಗಗಳು

ಹಳೆ ಮಾರ್ಗಗಳು


ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು
ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ
ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು
ಮೊದಲು ಯಾರೂ ಕಡಿಯಲಿಲ್ಲ ಇವನ್ನು
ಕವಿತೆಯ ಸಾಲುಗಳಂತೆ ಹುಟ್ಟಿದವು.


ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ
ತಲಪಿದವು ಈ ಪೇಟೆಯನ್ನು ಹಳ್ಳಿಗಳಿಂದ
ಮೊಣಕಾಲೆತ್ತರಕ್ಕೆ ಎಬ್ಬಿಸಿದವು ಕೆಂಪು ಮಣ್ಣು
ಮಳೆಗೆ ತೊಳೆದುಕೊಳ್ಳುವುದಕ್ಕಷ್ಟೆ.  ಅಲ್ಲದಿದ್ದರೆ
ನೆರೆನೀರಿಗೆಲ್ಲಿಂದ ಆ ತರದ ಬಣ್ಣ?


ನಡೆದವರಿಗೆ ಮಾತ್ರ ಗೊತ್ತು ಮಾರ್ಗಗಳ ಮರ್ಮ
ಎಲ್ಲಿ ಅವು ಮಾತು ತೆಗೆಯುತ್ತವೆ ಮತ್ತು ಎಲ್ಲಿ
ಮೌನವಾಗುತ್ತವೆ ಎಂದು. ಮನುಷ್ಯ ದುಃಖದ
ಬಗ್ಗೆ ದೊಡ್ಡದಾಗಿ ಹೇಳುವ ಈಗಿನವರು
ಹಳೆಯ ಮಾರ್ಗಗಳಲ್ಲೆಂದೂ ನಡೆದಿರಲಿಕ್ಕಿಲ್ಲ.


ನಡೆದ ನೆನಪಿದೆ ನನಗೆ ಅಂಥ ಕೊರಕಲುಗಳನ್ನು
ಬರಿಗಾಲಲ್ಲಿ, ಯಾವ ವಿಷಾದವೂ ಅನಿಸದೆ.  ಮೂವತ್ತು
ವರ್ಷಗಳ ಹಿಂದೆ ಕೋಟೂರ ಚಡವಿನಲ್ಲಿ
ಒಂದು ಇದ್ದಿಲ ಬಸ್ಸು ಕಾಣಿಸಿಕೊಂಡು
ಗದ್ದೆಗಳ ಮೇಲೆ ಧೂಳು ಹಾರಿಸಿ ಹೋದ ನೆನಪೂ ಉಂಟು


ನಂತರ ಇದೆಲ್ಲ ಹೇಗೆ ಬದಲಾಯಿತೆಂದು ತಿಳಿಯದು.
ಹಳೆ ಮಾರ್ಗಗಳೀಗ ಇದ್ದಲ್ಲೆ ಬೆಳೆದಿವೆ.
ಜಲ್ಲಿ ಹಾಸಿ ದಾಮರು ಹಾಕಿದ್ದಾರೆ.  ಅನೇಕ
ಮೋಟರುಗಳು ಓಡಾಡುತ್ತಿವೆ ದಿನಕ್ಕೆ.
ದೂರವನ್ನು ಮಿನಿಟುಗಳಲ್ಲಿ ಹೇಳುತ್ತಿದ್ದಾರೆ.


ಈ ಪೇಟೆಯ ಸೆರಗಿನಲ್ಲಿ ಹಾದು ಹೋಗಿದೆ
ಒಂದು ರಾಷ್ಟ್ರೀಯ ಹೆದ್ದಾರಿ.  ನಾವೂ ಸೇರಿದ್ದೇವೆ
ದೇಶದ ಸಾರಿಗೆ ವ್ಯವಸ್ಥೆಯಲ್ಲಿ.  ಆದರೂ
ಓಡುತ್ತಿದೆ ಹಳೆ ಮಾರ್ಗಗಳ ಬೆನ್ನು ಹತ್ತಿ ಮನಸ್ಸು
ಈಗಿಲ್ಲದ ಕಾಲಸಪ್ಪಳಗಳನ್ನು ಕೇಳಲು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...