Home / ಕವನ / ಕವಿತೆ / ಹಳೆ ಮಾರ್ಗಗಳು

ಹಳೆ ಮಾರ್ಗಗಳು


ಕುಂಬಳೆ ಮಂಜೇಶ್ವರ ಪೆರ್ಲ ಪುತ್ತೂರು
ಬದಿಯಡ್ಕ ಕಾರಡ್ಕ ಸುಳ್ಯ ಹೀಗೆ
ಇಲ್ಲಿಗೆ ಹಲವು ಮಾರ್ಗಗಳು ಬಂದು ಸೇರಿದವು
ಮೊದಲು ಯಾರೂ ಕಡಿಯಲಿಲ್ಲ ಇವನ್ನು
ಕವಿತೆಯ ಸಾಲುಗಳಂತೆ ಹುಟ್ಟಿದವು.


ನಡೆದದ್ದೆ ಮಾರ್ಗ ಆಗ.  ಹಾಗೆ ನಡೆದೇ
ತಲಪಿದವು ಈ ಪೇಟೆಯನ್ನು ಹಳ್ಳಿಗಳಿಂದ
ಮೊಣಕಾಲೆತ್ತರಕ್ಕೆ ಎಬ್ಬಿಸಿದವು ಕೆಂಪು ಮಣ್ಣು
ಮಳೆಗೆ ತೊಳೆದುಕೊಳ್ಳುವುದಕ್ಕಷ್ಟೆ.  ಅಲ್ಲದಿದ್ದರೆ
ನೆರೆನೀರಿಗೆಲ್ಲಿಂದ ಆ ತರದ ಬಣ್ಣ?


ನಡೆದವರಿಗೆ ಮಾತ್ರ ಗೊತ್ತು ಮಾರ್ಗಗಳ ಮರ್ಮ
ಎಲ್ಲಿ ಅವು ಮಾತು ತೆಗೆಯುತ್ತವೆ ಮತ್ತು ಎಲ್ಲಿ
ಮೌನವಾಗುತ್ತವೆ ಎಂದು. ಮನುಷ್ಯ ದುಃಖದ
ಬಗ್ಗೆ ದೊಡ್ಡದಾಗಿ ಹೇಳುವ ಈಗಿನವರು
ಹಳೆಯ ಮಾರ್ಗಗಳಲ್ಲೆಂದೂ ನಡೆದಿರಲಿಕ್ಕಿಲ್ಲ.


ನಡೆದ ನೆನಪಿದೆ ನನಗೆ ಅಂಥ ಕೊರಕಲುಗಳನ್ನು
ಬರಿಗಾಲಲ್ಲಿ, ಯಾವ ವಿಷಾದವೂ ಅನಿಸದೆ.  ಮೂವತ್ತು
ವರ್ಷಗಳ ಹಿಂದೆ ಕೋಟೂರ ಚಡವಿನಲ್ಲಿ
ಒಂದು ಇದ್ದಿಲ ಬಸ್ಸು ಕಾಣಿಸಿಕೊಂಡು
ಗದ್ದೆಗಳ ಮೇಲೆ ಧೂಳು ಹಾರಿಸಿ ಹೋದ ನೆನಪೂ ಉಂಟು


ನಂತರ ಇದೆಲ್ಲ ಹೇಗೆ ಬದಲಾಯಿತೆಂದು ತಿಳಿಯದು.
ಹಳೆ ಮಾರ್ಗಗಳೀಗ ಇದ್ದಲ್ಲೆ ಬೆಳೆದಿವೆ.
ಜಲ್ಲಿ ಹಾಸಿ ದಾಮರು ಹಾಕಿದ್ದಾರೆ.  ಅನೇಕ
ಮೋಟರುಗಳು ಓಡಾಡುತ್ತಿವೆ ದಿನಕ್ಕೆ.
ದೂರವನ್ನು ಮಿನಿಟುಗಳಲ್ಲಿ ಹೇಳುತ್ತಿದ್ದಾರೆ.


ಈ ಪೇಟೆಯ ಸೆರಗಿನಲ್ಲಿ ಹಾದು ಹೋಗಿದೆ
ಒಂದು ರಾಷ್ಟ್ರೀಯ ಹೆದ್ದಾರಿ.  ನಾವೂ ಸೇರಿದ್ದೇವೆ
ದೇಶದ ಸಾರಿಗೆ ವ್ಯವಸ್ಥೆಯಲ್ಲಿ.  ಆದರೂ
ಓಡುತ್ತಿದೆ ಹಳೆ ಮಾರ್ಗಗಳ ಬೆನ್ನು ಹತ್ತಿ ಮನಸ್ಸು
ಈಗಿಲ್ಲದ ಕಾಲಸಪ್ಪಳಗಳನ್ನು ಕೇಳಲು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...