Home / ಕವನ / ಕವಿತೆ / ರಾಮುಲುವೂ ಸೋಮುಲುವೂ

ರಾಮುಲುವೂ ಸೋಮುಲುವೂ

ನಿರ್ಜನವಾದ ಬಯಲು
ಹೊತ್ತಾದರೋ ಕಹಿಬೇವಿನ ಹೆಮ್ಮೆರಗಳ ಹಿಂದೆ ಮರೆಯಾಗುತ್ತಿದೆ
ಒಂದಿಷ್ಟು ಇಳಿಬೆಳಕು ಮಾತ್ರ
ಪುಡಿ ಪುಡಿಯಾದ ಒಣಹುಲ್ಲಿನ ಮೇಲೆ ಸಮಾನಾಂತರವಾಗಿ ಬಿದ್ದಿದೆ
ಅಷ್ಟರಲ್ಲಿ ಎಡಗಡೆಯಿಂದ (ಅಥವಾ ಬಲಗಡೆಯಿಂದ)
ರಾಮುಲುವೂ ಸೋಮುಲುವೂ
ಅನುಮಾನಿಸುತ್ತ ಅನುಮಾನಿಸುತ್ತ ಪ್ರವೇಶಿಸುವರು
ಅಂಗಿಯ ಬದಿಗೆ ಜೋತಕೈ, ಕಚ್ಚೆಯ ಕೆಳಗೆ ದೊಂಗಾಲು
ತಲೆಯಿರುವಲ್ಲಿ ಮುಂಡಾಸು-ದೂರಕ್ಕೆ ಇಷ್ಟೆ-
ಒಂದು ಕ್ಷಣ ಮುಖ ಮುಖ ನೋಡುತ್ತ ನಿಲ್ಲುವರು
ನಂತರ ಲಗುಬಗನೆ
ಚೆಂಡುಗಳನ್ನರಸುತ್ತ ಬೇರೆ ಬೇರೆ ದಿಕ್ಕುಗಳಿಗೆ ಚದುರುವರು
ಹೀಗೆ ಅರಸುತ್ತ, ಕಂಡುಹುಡುಕುತ್ತ
ಹಲವು ಕಾಲದ ಮೇಲೆ
ಪಿಚ್ಚಿನಲ್ಲಿ ಇಬ್ಬರೂ ಭೇಟಿಯಾಗುವರು
ನಂತರ ವಿಕೆಟುಗಳನ್ನು ಹೆಕ್ಕಿ ತಬ್ಬಿಕೊಂಡು
ದಾಪುಗಾಲುಗಳನ್ನು ಹಾಕುತ್ತ ನಿಷ್ಕ್ರಮಿಸುವರು


ಇಬ್ಬನಿಯಾದರೋ ನೆಲಕ್ಕೆ ತೆಳ್ಳಗಿನ ಮುಸುಕು ಹಾಕುತ್ತಿದೆ
ಆಕಾಶದಲ್ಲಿ ನಾಲ್ಕಾರು ನಕ್ಷತ್ರಗಳು ಬಿದ್ದಿವೆ
ಆಲಸಿಗಳಾದ ಕತ್ತೆಗಳು ಮಾತ್ರ ಯಾವುದನ್ನೂ ಗಮನಿಸದೆ
ನಿಶ್ಚಲವಾಗಿ ನಿಂತಿವೆ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಮತ್ತೆ ಪ್ರವೇಶಿಸುವರು
ನೆಟ್ಟದೃಷ್ಟಿಯಿಂದ ಪಿಚ್ಚಿನ ಕಡೆಗೆ ದಪದಪನೆ ಧಾವಿಸುವರು
ಅದರ ಹುರಿಹಾಸನ್ನು
ಎಡಗಡೆಯಿಂದೊಬ್ಬ, ಬಲಗಡೆಯಿಂದೊಬ್ಬ
ಎತ್ತಿ ಸುತ್ತಲು ಮನಸ್ಸು ಮಾಡುವರು
ಸುತ್ತುತ್ತ ಉರುಳುರುಳಾಗಿ ಬೆಳೆಯುತ್ತಿರುವ ಹಾಸಿನ
ಉರುಳಿಗೆ ಕೈಗಳನ್ನೂ ನೆಲಕ್ಕೆ ಕಾಲುಗಳನ್ನೂ
ಊರಿ ನೂಕಿ ಸೆಟೆದು ಮುಗ್ಗರಿಸಿ ಬೀಳುವರು
ಕೆಳಗೊಬ್ಬ, ಮೇಲೊಬ್ಬ
ಬಿದ್ದರೂ ಬಿಡದೆ, ಕೈ ಬದಲಾಯಿಸುತ್ತ, ಏದುತ್ತ
ಎತ್ತಿ ಎಳೆದು ದೂರಕ್ಕೆ ಸಾಗಿಸುವರು


ಜನವರಿಯ ಇರುಳಾದರೋ ಯಥೇಷ್ಟ ಹೆಪ್ಪುಗಟ್ಟುತ್ತಿದೆ
ಮೈದಾನು ಯಾವುದು, ಮರ ಯಾವುದು ಗೊತ್ತಾಗುವುದೆ ಕಷ್ಟ
ಅಷ್ಟರಲ್ಲಿ ರಾಮುಲುವೂ ಸೋಮುಲುವೂ
ಭಾರವಾದ ಕೂಜೆಗಳನ್ನು ಎತ್ತಿಕೊಂಡು ಬಿಡದೆ ಪ್ರವೇಶಿಸುವರು
ಕುಸಿದುಹೋಗುತ್ತಿರುವ ಕಾಲುಗಳನ್ನು ಲೆಕ್ಕಿಸದೆ
ಪಿಚ್ಚಿನ ಕಡೆಗೆ ಚುರುಕಾಗಿ ಪುಟಪುಟನೆ ಹೆಜ್ಜೆ ಹಾಕುವರು
ಬಾಯಲ್ಲಿ ಒಂದೊಂದು ಬೀಡಿ
ಜೋಡಿ ನಕ್ಷತ್ರಗಳಂತೆ ಉರಿಯುತ್ತ
ರಾಮುಲುವೂ ಸೋಮುಲುವೂ
ಧೂಳೆಬ್ಬಿಸಿ ಸುಸ್ತಾಗಿ ಮಲಗಿದ ಬಯಲ ಮೈಗೆ
ನೀರು ಸಿಂಪಡಿಸಲು ತೊಡಗುವರು
ಕ್ರಮೇಣ ದಟ್ಟವಾದ ಕತ್ತಲು ಎಲ್ಲವನ್ನೂ ಆವರಿಸುವುದು
ಸ್ವಲ್ಪ ಹೊತ್ತಿನಲ್ಲೆ ಒಂದು ಬೀಡಿ ನಂದುವುದು
ನಂತರ ಇನ್ನೊಂದು
*****

Tagged:

Leave a Reply

Your email address will not be published. Required fields are marked *

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...