Home / ಕವನ / ಕವಿತೆ / ಮುಖಾಮುಖಿ

ಮುಖಾಮುಖಿ


ಪುಷ್ಟವಾದ ಒಂದು ಬೆಕ್ಕು ನನ್ನ ಮನೆಯ
ಡ್ರಾಯಿಂಗ್ ರೂಮಿನಲ್ಲಿ ಬಂದು ನನ್ನನ್ನು ಕಂಡು
ಹಠಾತ್ತನೆ ನಿಂತಿತು.  ಅಲ್ಲಿ ಅದು ನನ್ನನ್ನು ನಿರೀಕ್ಷಿಸಿರಲಾರದು.
ಇಲ್ಲ, ಸೋಮವಾರ ಎಲ್ಲರೂ ಅವರವರ ಆಫೀಸಿಗೆ
ಹೋಗಿರುವ ಅಪರಾಹ್ನವಂತೂ ಖಂಡಿತ ಇಲ್ಲ.
ತುಸು ಅಸಮಾಧಾನದಿಂದ ನನ್ನ ಕಡೆ ನೋಡಿತು.
ನಮ್ಮ ಕಣ್ಣುಗಳು ಪರಸ್ಪರ ನಟ್ಟು ಯಾರು ಮೊದಲು
ಮುಖ ತಿರುಗಿಸುವುದು ಎಂಬ ಒಂದು ವಿಧ
ಅಘೋಷಿತ ಯುದ್ಧದಲ್ಲಿ ಇಬ್ಬರೂ ತೊಡಗಿದೆವು.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ನಿಶ್ಚಲವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಸೆಟೆದ ಬಾಲ, ನಿಮಿರಿದ ಕೂದಲು, ಊರಿದ ಕಾಲುಗುರು-
ಒಟ್ಟಾರೆ ಹೂಡಿದ ಬಿಲ್ಲಿನಂತಿರುವ ಬೆಕ್ಕು
ಆಕ್ರಮಿಸಿತ್ತೀಗ ನನ್ನ ಇಡೀ ದೃಷ್ಟಿ ಪರಿಧಿಯನ್ನು-
ದಾರಿತಪ್ಪಿದಂತೆ ನಾನು ಚರಿತ್ರಪೂರ್ವ ಭೂಖಂಡಗಳಲ್ಲಿ
ಬಿದ್ದಂತೆ ಅಪರಿಚಿತ ಸಮುದ್ರಗಳಲ್ಲಿ.  ಆದರೂ
ಎವೆಯಿಕ್ಕಲಿಲ್ಲ ನಾನು.  ಎವೆಯಿಕ್ಕಲಿಲ್ಲ ಬೆಕ್ಕು.
ಮನುಷ್ಯ ಮತ್ತು ಮೃಗಕ್ಕೆ ಮೂಲಭೂತವಾದ
ಯಾವದೋ ಸ್ಥಿತಿವಿಶೇಷದಲ್ಲಿ ನಿಂತಿತ್ತು ನನ್ನೆದುರು
ಬೆಕ್ಕಿಗೆ ಬೆಕ್ಕೇ ಛಲವಾಗಿ.
ಒಂದು ಬೆಕ್ಕಿನ ಕಣ್ಣುಗಳು ಇಷ್ಟು ಅನಾಥವಾಗಿರುತ್ತವೆ
ಎಂದು ನನಗೆ ಗೊತ್ತಿರಲಿಲ್ಲ.


ಕೊನೆಗೂ ಸೋತದ್ದು ಮೃಗವೆ.  ಅಥವಾ ಹಾಗೆಂದುಕೊಂಡುದು
ನಾನು.  ಆ ಸೆಟೆದ ಮೈ ಕ್ರಮೇಣ ನುಸುಲಾಗಿ
ಹೊರಟು ಹೋಯಿತು ಬೆಕ್ಕು ಬೆಕ್ಕಿನ ಗತಿಯಲ್ಲಿ.
ಹೀಗೆ ನನ್ನ ದೃಷ್ಟಿ ಒಮ್ಮೆಲೆ ಖಾಲಿಯಾದಾಗ
ಅನಿಸಿತು ನನಗೆ-ಒಪ್ಪಿಕೊಳ್ಳಬಹುದಿತ್ತು ನಾನು
ಬೆಕ್ಕಿಗೆ ಬೆಕ್ಕಿನ ಸ್ವಾಭಿಮಾನ.  ಅಷ್ಟಕ್ಕೂ ನಾನು ಗಳಿಸಿದ್ದೇನು?
ಗೆದ್ದರೆ ಗೆಲ್ಲಬೇಕು ಬಹುಬಲಿಯಂತೆ-
ಬಿಟ್ಟುಕೊಡುವುದರಿಂದ.
ಒಂದು ಬೆಕ್ಕಿನ ಕಣ್ಣುಗಳಲ್ಲಿ ಇಷ್ಟೊಂದು ವಿಷಾದವಿರುತ್ತದೆ
ಎಂದು ನನಗೆ ಗೊತ್ತಿರಲಿಲ್ಲ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...