Home / ಕಥೆ / ಜನಪದ / ಉತ್ತರೀಮಳೆ

ಉತ್ತರೀಮಳೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಅತ್ತೆ ಸೊಸೆಯರು ಹಿತ್ತಲ ಮನೆಯಲ್ಲಿ ಒಂದಿಷ್ಟು ವಾದಿಸಾಡುತ್ತಿದ್ದರು. ಅಷ್ಟರಲ್ಲಿ ಹೊಲದಿಂದ ಮಗನು ಬಂದನೆಂದು ಅತ್ತೆ ಎದ್ದು ಹೋದಳು. ಮಗನಿಗೆ ಉಣಬಡಿಸಬೇಕಲ್ಲವೇ?

ಊಟಕ್ಕೆ ಕುಳಿತ ಮಗನಿಗೆ ಉಣಬಡಿಸುತ್ತ ಹಗುರಾಗಿ ಎಳೆತೆಗೆದಳು ತಾಯಿ – “ಈ ಸೊಸೆ ಬೇಡಪ್ಪ ಮಗನೇ, ಇವಳನ್ನು ತವರಿಗೆ ಕಳಿಸು.”

“ಕಳಿಸಿಬಿಡುವುದಕ್ಕೆ ಎತ್ತೇ ಎಮ್ಮೆಯೇ? ಖರ್ಚು – ಮಾಡಿತಂದು ಕೈಹಿಡಿದವಳನ್ನು ಹೇಗೆ ಬಿಡುವುದವ್ವ” ಎಂದು ಕೇಳಿದನು ಮಗ.

“ನನ್ನ ಚಿನ್ನದ ಒಂಕೆ ಮಾರುವೆನು. ಸೂತ್ರದ ಗೊಂಬೆಯಂಥ ಹೆಣ್ಣು ತರುವೆನು. ಮಗನೇ, ಬಿಟ್ಟುಬಿಡು ಇವಳನ್ನು” ತಾಯಿಯ ಆಗ್ರಹ.

“ಆವಲ್ಲ ಕರುವಲ್ಲ, ಬೊಗಸೆತುಂಬ ತೆರವುಕೊಟ್ಟು ತಂದವಳನ್ನು ಬಿಡುವುದೆಂತು ತಾಯಿ?”

“ಕಿವಿಯೊಳಗಿನ ವಜ್ರದೋಲೆ ಮಾರುತ್ತೇನೆ. ಬ್ಯಾಂಗಡಿಯಂಥ ಹೆಣ್ಣು ತರುತ್ತೇನೆ. ಬಿಟ್ಟುಬಿಡು ನನ್ನ ಮಗನೇ ಇವಳನ್ನು” ಮತ್ತೆಯೂ ಅದೇ ಒತ್ತಾಯ ತಾಯಿಯದು.

“ಕೊಂಡುತಂದ ಆಡು-ಕುರಿ ಬಿಟ್ಟುಬಿಡುವುದಕ್ಕಾಗುವದಿಲ್ಲ. ದೈವಸಾಕ್ಷಿಯಾಗಿ ಕೈಹಿಡಿದವಳನ್ನು ಹೇಗೆ ಬಿಡುವುದು ಅವ್ವಾ ?”

“ಇದೋ ಈ ಮೂಗುತಿಯನ್ನು ಮಾರುತ್ತೇನೆ. ಮುತ್ತಿನಂಥ ಮಡದಿಯನ್ನು ತರುತ್ತೇನೆ. ಬಿಟ್ಟುಬಿಡು ಇವಳನ್ನು” ಅನ್ನುತ್ತಾಳೆ ತಾಯಿ.

ನೂರು ಸಾರೆ ಹೇಳುತ್ತ ಬಂದರೆ ಸುಳ್ಳೇ ಸತ್ಯವಾಗುವದಂತೆ. ಛಲಹಿಡಿದು ಬಿಟ್ಟು ಮಾತು ಗೆಲ್ಲಲೇ ಬೇಕಲ್ಲವೇ ? ಸೊಸೆ ತನ್ನ ತವರಿಗೆ ಹೊರಟುನಿಂತಳು.

“ಸೊಸೆ ಮುದ್ದೇ, ನೆಲುವಿನ ಮೇಲಿಟ್ಟ ನೆಲ್ಲಕ್ಕಿ ಬೋನವನ್ನಾದರೂ ಉಂಡು ಹೋಗು” ಎಂದು ಅತ್ತೆ ತೋರಿಕೆಯಲ್ಲಿ ಆಗ್ರಹಪಡಿಸಿದರೆ, ಸೊಸೆ ಏನೆಂದು ಮರುನುಡಿಯುತ್ತಾಳೆ – “ಅದನ್ನು ನೀನುಣ್ಣು ಇಲ್ಲವೆ ಮಗನಿಗೆ ಉಣಬಡಿಸು. ಉಳಿದರೆ ಬರುವವಳಿಗಾಗಿ ಕಾಯ್ದಿಡು.”

“ಚೆಟ್ಟಿಗೆಯೊಳಗಿರುವ ಗಟ್ಟಿತುಪ್ಪವೊಂದಿಷ್ಟು ತಿಂದಾದರೂ ಹೋಗಮ್ಮ ಮುದ್ದು ಸೊಸೆಯೇ” ಎಂದು ಅತ್ತೆಯಾಡಿದ ಉಪಕಾರದ ಮಾತಿಗೆ ಸೊಸೆ ಹೇಳುತ್ತಾಳೆ – “ನೀನಾದರೂ ತಿನ್ನು. ನಿನ್ನ ಮಗನಿಗಾದರೂ ತಿನ್ನಿಸು. ಅದರಲ್ಲಿ ಒಂದಿಷ್ಟು ಬರುವವಳಿಗಾಗಿ ಕಾಯ್ದಿರಿಸು.”

ಒಲೆಯಮೇಲಿಟ್ಟ ಹಸುವಿನ ಹಾಲನ್ನಾದರೂ ಕುಡಿದು ಹೋಗು ಎಂದಾಗ ಹಾಗೂ, ಪಟ್ಟಿಗೆಯೊಳಗಿನ ಸಂಣಂಚಿನ ಕುಪ್ಪಸವನ್ನಾದರೂ ತೊಟ್ಟುಕೊಂಡು ಹೋಗು ಎಂದಾಗ, ಸೊಸೆ ಅದೇರೀತಿಯಲ್ಲಿ ಉತ್ತರಿಸುತ್ತಾಳೆ.

ಹೇಳಿದ್ದಕ್ಕೆಲ್ಲ ಮರಳಿ ಉತ್ತರ ಕೊಡುವಳೆಂದು ಆ ಸೊಸೆಗೆ ಉತ್ತರಾದೇವಿಯೆಂದು ಹೆಸರಾಯಿತೇನೋ. ಅಂತೂ ಉತ್ತರಾದೇವಿ ಅತ್ತೆಯ ಮನೆಯಿಂದ ತವರು ಮನೆಯತ್ತ ಹೊರಟಳು.

ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡಿದ್ದಾಳೆ. ಇನ್ನೊಂದನ್ನು ಕೈಹಿಡಿದು ನಡೆಸುತ್ತಿದ್ದಾಳೆ. ತುಸು ಮುಂದೆ ಸಾಗುವಷ್ಟರಲ್ಲಿ ಬಾಳೆ ಬನವನ್ನು ಕಂಡು, ಅದಕ್ಕೆ ಹೇಳುತ್ತಾಳೆ, ತವರುಮನೆಗೆ ಹೋಗುವೆನೆಂದು. “ನೀನು ಹೋದರೆ ನಮಗೆ ನೀರುಣಿಸುವವರಾರು ? ಹಣ್ಣಾದರೆ ತಿನ್ನುವವರಾರು?” ಎಂದು ಕೇಳಿತು ಬಾಳೆಯ ಬನ.

“ನೀರುಣ್ಣಿಸುವದಕ್ಕೂ ಹಣ್ಣು ತಿನ್ನುವದಕ್ಕೂ ನನಗಿಂತ ಜಾಣೆಯಾದವಳು ಈ ಮನೆಗೆ ಬರುತ್ತಾಳೆ” ಎಂದು ಮರುನುಡಿಯುತ್ತಾಳೆ ಉತ್ತರೆ.

ಇನ್ನೂಮುಂದೆ ಹೋದಾಗ ಕಿತ್ತಳೆಯ ಬನಕ್ಕೂ ಹೇಳುತ್ತಾಳೆ ತವರೂರಿಗೆ ಹೋಗುವೆನೆಂದು. ಕಿತ್ತಳೆ ಬನವೂ ಕೇಳುತ್ತದೆ – “ನೀನು ಹೋದರೆ ನನಗೆ ನೀರುಣ್ಣಿಸುವರಾರು? ಹಣ್ಣಾದರೆ ತಿನ್ನುವವರಾರು” ಎಂದು. ಅದಕ್ಕೂ ಮರುನುಡಿಯುತ್ತಾಳೆ ಅದೇಬಗೆಯಾಗಿ -“ನೀರುಣಿಸುವದಕ್ಕೂ ಹಣ್ಣುತಿನ್ನುವದಕ್ಕೂ ನನಗಿಂತ ಜಾಣೆಯಾದವಳು ಈ ಮನೆಗೆ ಬರುತ್ತಾಳೆ.”

ಅತ್ತೆಯಾದವಳು ಸೀರೆಕುಪ್ಪಸಗಳ ದೊಡ್ಡ ಗಂಟನ್ನೇ ಆಕೆಯ ಮುಂದೆ ಇಳುಹಿದರೆ ಸೊಸೆ – “ಇನ್ನಾವ ಸೀರೆಯೂ ಬೇಡ. ಬೇರಾವ ಕುಪ್ಪಸವೂ ಬೇಡ, ನಮ್ಮವ್ವ ನನಗೆಂದು ಕೊಟ್ಹ ಸೀರೆಕುಪ್ಪಸ ಎತ್ತಿ ಇಡಿರಿ ಈಚೆಗೆ” ಎಂದಳು.

ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡು, ಇನ್ನೊಂದನ್ನು ಕೈಯಲ್ಲಿ ಹಿಡಿದುಕೊಂಡು, ಕಾಲ್ಗೆಜ್ಜೆಯನ್ನು ಗಿಲಿಸುತ್ತ ಹೊರಟ ಆಕೆಯನ್ನು ಕಂಡು ದೊಡ್ಡ ಮನುಷ್ಯರೊಬ್ಬರು ಕೇಳಿದರು – “ನೀನಾವ ರಾಜನ ಸೊಸೆಯಮ್ಮ?”

“ನಾನಾವ ರಾಜನ ಸೊಸೆಯಾಗಲಿ ? ಅತ್ತೆಮ್ಮನ ಉರವಣಿಗೆಯಲ್ಲಿ ತವರೂರಿಗೆ ಹೊರಟಿದ್ದೇನೆ” ಎಂದು ಉತ್ತರಾ ಮರುನುಡಿಯುತ್ತಾಳೆ.

ಮೊದಲು ತಂದೆಯ ಮನೆಗೆ ಹೋಗಿ –  ಕದತೆಗೆ, ಅಪ್ಪಯ್ಯ, ಕದತೆಗೆಯಿರಿ. ನನ್ನಪ್ಪಾ ನನಗೆ ಕದತೆಗೆ” ಎಂದು ಕೂಗಲು ಒಳಗಿನಿಂದ ತಂದೆಯ
ಉತ್ತರ ಬರುತ್ತದೆ. –

“ಕಂದವ್ವನನ್ನು ತೊಡೆಯಮೇಲೆ ಹಾಕಿಕೊಂಡು ಚಾಪೆಯಮೇಲೆ ಕುಳಿತಿದ್ದೇನೆ. ದೀಪದ ಬುರುಡೆ ತುಂಬಿದೆ. ಹೇಗೆ ಎದ್ದು ಬರಲಿ ? ಮಗಳೇ, ನಿಮ್ಮಣ್ಣನ ಮನೆಗೆ ಹೋಗವ್ವ”

ಬಳಿಕ ಅಣ್ಣನ ಮನೆಗೆ ಹೋಗಿ ಅಲ್ಲಿಯೂ ಅದೇ ಬಗೆಯಾಗಿ ಹಲುಬಿದರೆ, ಅಣ್ಣನ ತೊಡೆಯ ಮೇಲೆ ಮುದ್ದುಮಗು ಮಲಗಿದ್ದರಿಂದ ಅವನಿಗೂ ಎದ್ದು ಬರಲಿಕ್ಕಾಗಲಿಲ್ಲ. ಅಕ್ಕನಮನೆಗೆ ಹೋಗಲು ತಿಳಿಸಿದನು.

ಅಕ್ಕನ ಮನೆ ಆಯಿತು. ತಂಗೆಯಮನೆ ಆಯಿತು. ಅಲ್ಲಿ ತೋಳಿನಲ್ಲಿ ಕೆಂಪವ್ವ ಮಲಗಿದ್ದರೆ, ಇಲ್ಲಿ ಕಾಳವ್ವ ಮಲಗಿದ್ದಳು. ಆದ್ದರಿಂದ ಎದ್ದು ಬರುವವರಾರು? ತಂಗಿಯ ಸೂಚನೆಯಂತೆ ಅವ್ವನ ಮನೆಗೆ ಹೋದಳು.

ಕಣ್ಣೀರು ಕೋಡಿಯಾಗಿ ಹರಿಯುತ್ತದೆ.

“ಕದ ತೆಗೆ ಅವ್ವಾ” ಅಂದಾಗ ಅವಳು ಕದತೆಗೆದು ಮಗಳನ್ನು ಅಪ್ಪಿಕೊಂಡು ತಲೆತಡವಿದಳು. ಕಣ್ಣೀರು ಹೊಳೆಯಾಗಿ ಹರಿಸುತ್ತ ಹೇಳಿದಳು –

“ನಿನ್ನಪ್ಪ ನನ್ನನ್ನು ಉರಿಸಿದನು. ನನ್ನ ಪಾಡು ನಿನಗೂ ತಗುಲಿತೇ ? ನೀನು ಉತ್ತರಾಮಳೆಯಾಗಿ ಹೊರಡಿನ್ನು”.

ಮಗಳು ಒಂದು ಮಗುವನ್ನು ಬಗಲಲ್ಲಿ ಎತ್ತಿಕೊಂಡು, ಇನ್ನೊಂದನ್ನು ಕೈಯಲ್ಲಿ ಹಿಡಿದುಕೊಂಡು ಕಾಲುಗೆಜ್ಜೆ ಗಿಲಕ್ ಅನ್ನುತ್ತಿರಲಿ, ಉತ್ತರೆ ಮಳೆಯಾಗಿ ಹೊರಟಳು.

ಉತ್ತರೆಮಳೆಗಾಗಿ ದಾರಿಕಾಯದವರು ಯಾರಿದ್ದಾರೆ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...