Home / ಕಥೆ / ಜನಪದ / ಕೊಂಡು ತಂದ ಮಾತು

ಕೊಂಡು ತಂದ ಮಾತು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಚಿಕ್ಕ ಹಳ್ಳಿಯೊಂದರಲ್ಲಿ ಸಮಗಾರ ಗಂಡಹೆಂಡಿರಿದ್ದರು. ಗಂಡನು ಹಳೆಯ ಕಾಲ್ಮರೆಗಳನ್ನು ಗಟ್ಟಿಮಾಡಿಕೊಡುವ ಕೆಲಸಮಾಡುತ್ತಿದ್ದನು. ಇಡಿಯವಾರ ದುಡಿದರೂ ಅವನಿಗೆ ಒಂದು ರೂಪಾಯಿಗಿಂತ ಹೆಚ್ಚು ಗಳಿಕೆ ಆಗುತ್ತಿದ್ದಿಲ್ಲ.

ನೆರೆಯೂರಿನ ಸಂತೆಗೆ ಹೋಗಿ ಉಪ್ಪು – ಮೆಣಸಿನಕಾಯಿ ಮೊದಲಾದವುಗಳನ್ನು ಕೊಂಡುತರುವದಕ್ಕಾಗಿ ಹೆಂಡತಿಯು ಹನ್ನರಡಾಣೆ ಹಣವನ್ನು ಗಂಡನ ಕೈಗಿತ್ತಳು. ಹಸಿವೆಯಾದಾಗ ಉಣ್ಣಲೆಂದು ಒಂದೆರಡು ರೊಟ್ಟಿಗಳನ್ನೂ ಕಟ್ಟಿದಳು.

ಸಮಗಾರನು ದಾರಿ ಹಿಡಿದು ಸಾಗುತ್ತಿರಲು ಅವನಿಗೆ ಕುದುರೆಯ ಮೇಲೆ ಕುಳಿತು ಸಂತೆಗೆ ಹೊರಟವನು ಚೊತೆಯಾದನು. ಅವನನ್ನು ಕುರಿತು ಸಮಗಾರನು – “ಅಪ್ಪಾ, ಏನಾದರೊಂದು ಮಾತು ಹೇಳಿರಿ. ಅಂದರೆ ದಾರಿಸಾಗುತ್ತದೆ” ಎಂದನು.

“ಮಾತೆಂದರೆ ಸುಮ್ಮನೇ ಬರುವವೇ ? ಮಾತಿಗೆ ರೊಕ್ಕ ಬೀಳುತ್ತವೆ” ಎಂದನು ಕುದುರೆಯವನು.

“ಒಂದು ಮಾತಿನ ಬೆಲೆ ಎಷ್ಟು?” ಸಮಗಾರನ ಪ್ರಶ್ನೆ.

“ನಾಲ್ಕಾಣೆಗೊಂದು ಮಾತು.”

ಹೆಂಡತಿ ಸಂತೆಗಾಗಿ ಕೊಟ್ಟ ಹನ್ನರಡಾಣೆಗಳಲ್ಲಿ ನಾಲ್ಕಾಣೆಕೊಟ್ಟು ಒಂದು ಮಾತು ಕೊಂಡರಾಗುತ್ತದೆ. ಕೊಂಡಮಾತು ಎಂಥವಿರುತ್ತವೆಯೋ ನೋಡೋಣ – ಎಂದುಕೊಂಡು, ಕಿಸೆಯೊಳಗಿನ ನಾಲ್ಕಾಣೆ ರೊಕ್ಕ ತೆಗೆದು ಕುದುರೆಯವನ ಕೈಯಲ್ಲಿಟ್ಟು – “ಒಂದು ಮಾತು ಹೇಳಿರಿ” ಅಂದನು.

“ಸತ್ತವನನ್ನು ಹೊತ್ತು ಹಾಕಬೇಕು.”

“ಇಷ್ಟಕ್ಕೇ ನಾಲ್ಕಾಣೆ ಕೊಟ್ಟಂತಾಯಿತು. ಆಗಲಿ. ಇನ್ನೊಂದು ಮಾತು ಹೇಳಿ. ಇಕೊಳ್ಳಿರಿ, ನಾಲ್ಕಾಣೆ” ಸಮಗಾರನು ಅನ್ನಲು “ಸರಕಾರದ ಮುಂದೆ ಸುಳ್ಳು ಹೇಳಬಾರದು” ಇದು ಕುದುರೆಯವನು ಹೇಳಿದ ಎರಡನೇಮಾತು. ಸಮಗಾರನಿಗೆ ಅನಿಸಿತು – “ಇನ್ನುಳಿದ ನಾಲ್ಕಾಣೆಯಿಂದ ಸಂತೆಯಲ್ಲಿ ಏನುಕೊಳ್ಳಲಿಕ್ಕಾಗುತ್ತದೆ? ಇನ್ನೊಂದು ಮಾತನ್ನೇ ಕೊಂಡರಾಯಿತು” ಕುದುರೆಯವನಿಗೆ ಮತ್ತೆ ನಾಲ್ಕಾಣೆಕೊಟ್ಟು ಮೂರನೇ ಮಾತು ಕೇಳಿದನು-

“ಹೆಂಡತಿಯ ಮುಂದೆ ನಿಜ ಹೇಳಬಾರದು” ಇದೇ ಆತನು ಹೇಳಿಕೊಟ್ಟ ಮೂರನೇಮಾತು. ಸುಮಗಾರನಿಗೆ ಸಂತೆಯಲ್ಲಿ ಮಾಡಬೇಕಾದ ಯುವಕೆಲಸವೂ ಇರಲಿಲ್ಲ,- ನೇರವಾಗಿ ಹಳ್ಳಕ್ಕೆ ಹೋಗಿ ಹೆಂಡತಿಕಟ್ಟಿಕೊಟ್ಟ ಎರಡು ರೊಟ್ಟಿಗಳನ್ನು ತಿಂದು ಊರ ಚಾವಡಿ ಮುಂದಿನ ಕಟ್ಟಿಯಮೇಲೆ ಕುಳಿತುಕೊಂಡನು. ಅ ಅಷ್ಟರಲ್ಲಿ ಓಲೆಕಾರನು ಬಂದು – “ನಿನ್ನನ್ನು ಗೌಡರು ಕರೆಯುತ್ತಾರೆ” ಎನ್ನಲು ಸಮಗಾರನು ಗೌಡನ ಬಳಿಗೆ ಹೋದನು. ಗೌಡ ಹೇಳಿದನು ಆತನಿಗೆ – “ಇಗೋ, ಇಲ್ಲಿ ಯಾವ ಊರಿನವನೋ ಏನೋ, ಮಲಗಿಕೊಂಡಲ್ಲಿಯೇ ಸತ್ತಿದ್ದಾನೆ. ಆತನನ್ನು ಹೊತ್ತೊಯ್ದು ಹುಗಿದು ಬಾ, ಎರಡು ರೂಪಾಯಿ ಕೊಡುತ್ತೇನೆ.”

ಸಮಗಾರನಿಗನಿಸಿತು – ನಾಲ್ಕಾಣೆಗೆ ಕೊಂಡ ಒಂದು ಮಾತು ಎರಡು ರೂಪಾಯಿ ಗಳಿಸಿಕೊಡುತ್ತಿರುವಾಗ ಒಲ್ಲೆನೆನ್ನಬಾರದು. ಗೌಡನಿಂದ ಎರಡು ರೂಪಾಯಿ ಇಸಗೊಂಡು ಮಲಗಿದವನ ಬಳಿಗೆ ಹೋಗಿ, ಅವನನ್ನು ಎತ್ತಿ ಕುಳ್ಳಿರಿಸುವಷ್ಟರಲ್ಲಿ ಒಂದು ಹಮ್ಮಿಣಿಯೇ ಸಿಕ್ಕಿತು. ಅದನ್ನು ಭದ್ರವಾಗಿರಿಸಿಕೊಂಡು ಹೆಣವನ್ನು ಹೊತ್ತು ಹುಗಿದುಬಂದನು ಸಂತೆಗೆ.

ಜೀವ ಬೇಡಿದ್ದನ್ನು ಮೊದಲು ಕೊಂಡು ತಿಂದು, ಆ ಬಳಿಕ ಒಂದು ಕುದುರೆಯನ್ನು ಕೊಂಡು ಅದರ ಮೇಲೆ ಕುಳಿತುಕೊಂಡು ತನ್ನೂರ ಹಾದಿ ಹಿಡಿದನು- ದಾರಿ ನೋಡುತ್ತ ಕುಳಿತ ಹೆಂಡತಿಯು ದೂರದಿಂದಲೇ ಗಂಡನನ್ನು ಗುರುತಿಸಿ, “ಕುದುರೆ ಎಲ್ಲಿಂದ ತಂದಿ” ಎಂದು ಕೇಳಿದಳು. “ತಡೆ, ಹೇಳುತ್ತೇನೆ” ಎಂದು ಕುದುರ ಕಟ್ಟಿ ಹಾಕಿ ಒಳಗೆ ಹೋಗಿ ಹೆಂಡತಿಯ ಕೈಯಲ್ಲಿ ಹಮ್ಮೀಣಿಕೊಟ್ಟು ತೆಗೆದು ಇಡಲು ಹೇಳಿದನು.

“ಇದೆಲ್ಲಿ ಸಿಕ್ಕಿತು ?” ಹೆಂಡತಿಯ ಪ್ರಶ್ನೆ.
‘ನೀನು ಕಟ್ಟಿಕೊಟ್ಟ ಎರಡು ರೊಟ್ಟಿಯಿಂದ ಹೊಟ್ಟಿತುಂಬಲಿಲ್ಲ. ಒಂದು ಎಕ್ಕಲೆ ಗಿಡದ ಬಳಿಗೆ ಹೋಗಿ ಅದರ ಹಾಲು ತೆಗೆದುಕೊಂಡು ಕುಳಿತಾಗ ಈ ಹಮ್ಮೀಣಿ ಕಾಣಿಸಿತು” ಎಂದು ಸುಳ್ಳುಸುಳ್ಳು ಹೇಳಿದೆನು. ಹೆಂಡತಿಯ ಮುಂದೆ ನಿಜ ಹೇಳಬಾರದು – ಎಂಬ ಮಾತು ಕೊಂಡಿದ್ದನಲ್ಲವೇ ?

ಹಮ್ಮೀಣಿಯ ಸಹಾಯದಿಂದ ಸುಮಗಾರಮ ಹೊಸಮನೆ ಕಟ್ಟಿಸಿದನು.
ಎತ್ತುಗಳನ್ನು ಕೊಂಡನು. ಗಾಡಿ ಮಾಡಿಸಿದನು. ಹಯನಿಗೆ ಎಮ್ಮೆ ಕಟ್ಟಿದನು.
ಹೆಂಡತಿಗೆ ಒಳ್ಳೊಳ್ಳೆಯ ಸೀರ ಕುಪ್ಪಸ ಕೊಟ್ಟನು. ಆಭರಣಗಳನ್ನು ತಂದನು..
ಅದನ್ನೆಲ್ಲ ಕಂಡು ನೆರೆಹೊರೆಯವರಿಗೆ ಆಶ್ಚರ್ಯವೆನಿಸಿತು.

ಸಮಾಗಾರನ ಹೆಂಡತಿಯನ್ನು ಒತ್ತಟ್ಟಿಗೆ ಕರೆದು, ನೆರೆಮನೆಯ ಹೆಣ್ಣುಮಗಳು ಕೇಳಿದಳು – “ಇದೆಲ್ಲ ಐಶ್ವರ್ಯ ಎಲ್ಲಿಂದ ಬಂತು ?”

“ಸಂತೆಗೆ ಹೋದಾಗ ನನ್ನ ಗಂಡನು ಹೊಟ್ಟೆತುಂಬಲಿಲ್ಲವೆಂದು ಎಕ್ಕೆಲೆಯ ಹಾಲು ಕುಡಿದು, ಕುಳಿತಾಗ ರೊಕ್ಕದ ಹಮ್ಮೀಣಿಯೇ ಕಾಣಿಸಿತಂತೆ” ಎಂದು
ಸಮಗಾರತಿ ಹೇಳಿದಳು.

ನೆರೆಮನೆಯ ಹೆಂಗಸು ತನ್ನ ಗಂಡನನ್ನು ಸಂತೆಗೆ ಕಳಿಸುವ ಎತ್ತುಗಡೆ ಮಾಡಿದಳು. ಎಕ್ಕೆಲೆಯ ಹಾಲು ಕುಡಿಯುವ ರಹಸ್ಯವನ್ನು ಹೇಳಿಕೊಟ್ಟಳು. ಕೈಯಲ್ಲಿ ಹನ್ನೆರಡಾಣೆ ರೊಕ್ಕ ಕೊಟ್ಟಳು.

ಶ್ರೀಮಂತನಾಗಬೇಕೆಂಬ ಹವ್ಯಾಸದಿಂದ ಹೆಂಡತಿಯ ಮಾತು ಕೇಳಿ, ಎಕ್ಕಲೆಯ ಹಾಲು ಕುಡಿದು, ಹೊಟ್ಟಿಯುರಿಯುವದೆಂದು ಮನೆಗೆ ಬಂದು ಆ ಗೃಹಸ್ಥನು ಸತ್ತೇಹೋದನು. ಆತನ ಹೆಂಡತಿ ಸಮಗಾರ್ತಿಯ ಮಾತು ಕೇಳಿದ್ದರಿಂದ ಹೀಗಾಯಿತೆಂದು ಬೊಬ್ಬಿಟ್ಟಳು.

ಸರ್ಕಾರದವರು ಸಮಗಾರ್ತಿಯನ್ನು ಕರೆಸಿ ಕೇಳಿದರೆ ಆಕೆ ತನ್ನ ಗಂಡನ ಹೆಸರು ಹೇಳಿದಳು. ಸಮಗಾರನನ್ನು ಕರೆಯಿಸಲು, ಸರ್ಕಾರದ ಮುಂದೆ ಸುಳ್ಳು ಹೇಳಬಾರದು – ಎಂಬ ಮಾತು ನೆನಪಿಗೆ ಬಂತು. ನಡೆದ ಸಂಗತಿಯನ್ನೆಲ್ಲ ಹೇಳಿದನು. ಹೆಂಡತಿಯ ಮುಂದೆ ನಿಜ ಹೇಳಬಾರದು – ಎಂಬ ಮಾತಿನ ಪ್ರಕಾರ ನಾನು ಆಕೆಗೆ ಎಕ್ಕಲೆಯ ಕಥೆಯನ್ನು ಹುಟ್ಟಿಸಿಕೊಂಡು ಹೇಳಿದೆನೆಂದೂ ನುಡಿದನು.

“ಎಕ್ಕಲೆಯ ಹಾಲು ಕುಡಿದರೆ ಹೊಟ್ಟೆಯಲ್ಲಿ ಉರುಪುಬಿಟ್ಟು ಸಾಯುವರು” ಎಂಬುದು ನಿನ್ನ ಗಂಡನಿಗೆ ತಿಳಿಯಲಿಲ್ಲವೇ ? ಹೋಗು. ಸಮಗಾರ್ತಿಯದಾಗಲಿ ಸಮಗಾರನದಾಗಲಿ ಏನೂ ತಪ್ಪಿಲ್ಲ. ನಿನ್ನದೇ ತಪ್ಪು. ಮಾಡಿದ್ದನ್ನು ಭೋಗಿಸು” ಎಂದರು ಸರ್ಕಾರದವರು ಆಕೆಗೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...