Home / ಕಥೆ / ಜನಪದ / ಗೌಡರ ನಾಯಿ

ಗೌಡರ ನಾಯಿ

ಗೋಡಿಹಾಳ ಗ್ರಾಮ ಚಿಕ್ಕದಾದರೂ ಅಲ್ಲಿಯ ಗೌಡರು ದೊಡ್ಡವರಾಗಿದ್ದರು. ಶ್ರೀಮಂತಿಕೆಗಿಂತ ಅವರಲ್ಲಿ ತಿಳಿವಳಿಕೆ ಹೆಚ್ಚಾಗಿತ್ತು. ವಯಸ್ಸಿನಿಂದಲೂ ಹಿರಿಯರಾಗಿದ್ದರು. ಮಕ್ಕಳೆಲ್ಲ ಕೈಗೆ ಬಂದಿದ್ದರು. ಹಿರೇಮಗ ಗೌಡಿಕೆಯನ್ನೂ, ಚಿಕ್ಕವನು ಹೊಲಮನೆಗಳ ಮೇಲ್ವಿಚಾರಣೆಯನ್ನೂ ನಿಸ್ತರಿಸುತ್ತಿದ್ದನು. ದೊಡ್ಡ ಗೌಡರು ವೇದಾಂತಗ್ರಂಥಗಳನ್ನು ಓದುವುದರಲ್ಲಿ ಆಸಕ್ತಿಯುಳ್ಳವರು. ಬಂದವರೊಡನೆ ಚರ್ಚೆ ಮಾಡುವುದರಲ್ಲಿ ಅವರಿಗೆ ವೇಳೆಯೇ ಸಾಲುತ್ತಿರಲಿಲ್ಲ.

ಚಳಿಗಾಲದ ಮುಂಜಾವಿನಲ್ಲಿ ಮನೆಯ ಮುಂದಿನ ಕಟ್ಟೆಯ ಮೇಲೆ ಬಿಸಿಲು ಕಾಯಿಸಿಕೊಳ್ಳುತ್ತ ಕುಳಿತರೆಂದರೆ, ಅವರ ಮಗ್ಗುಲಲ್ಲಿ ಒಂದು ನಾಯಿ ಯಾವಾಗಲೂ ಪವಡಿಸಿರುತ್ತಿತ್ತು. ಗೌಡರ ಸಲುವಾಗಿ ಅದೆಷ್ಟೋ ಜನರು ಅಲ್ಲಿಗೆ ಬಂದಾಗ ಆ ನಾಯಿ ಜಗ್ಗನೆದ್ದು ಕವ್ವನೇ ಬೊಗಳಿ ಹೆದರಿಸುವದು. ಒಮ್ಮೊಮ್ಮೆ ಚಂಗನೆ ನೆಗೆದು ಬಂದವರ ಮೈಮೇಲೆ ಏರಿಹೋಗುವದು. ಆಗ ಗೌಡರು ಬೆದರಿಸಿ ಅದನ್ನು ಹತ್ತಿರ ಕರೆದು ಕುಳ್ಳಿರಿಸಿಕೊಳ್ಳುವರು. ಅದರಿಂದ ಸಂದರ್ಶನಾರ್ಥಿಗಳಿಗೆ ನಿರ್ಬಾಧವಾಗುವದು.

ಅದೆಷ್ಟೋ ಜನರು ನಾಯಿಗಂಜಿಯೇ ಗೌಡರ ಬಳಿಗೆ ಹೋಗುವುದಕ್ಕೆ ಹಿಂಜರಿಯುತ್ತಿದ್ದರು. ನಾಯಿಯ ಆ ಸ್ವಭಾವಕ್ಕಾಗಿ ಗೌಡರಿಗೂ ಬೇಸರವೆನಿಸಿತ್ತು. ಅದರ ಸ್ವಭಾವ ಪರಿವರ್ತನೆಗೊಳಿಸುವದಕ್ಕೆ ಯಾವ ಹಂಚಿಕೆಮಾಡಬೇಕು – ಎಂದು ಯೋಚನೆಗೀಡಾದರು. ಒಂದು ಯುಕ್ತಿಯೂ ಹೊಳೆಯಿತವರಿಗೆ. ಸಿದ್ಧತೆಮಾಡಿ ಕೊಂಡರು. ನಾಯಿಯನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡರು. ಸೂಜಿಯಿಂದ ಕೇರಿನೆಣ್ಣೆ ತೆಗೆದು ನಾಯಿಯ ಪೃಷ್ಠದ್ವಾರದ ಮೇಲೆ ಅಧಿಕ ಚಿಹ್ನ ಬರೆದರು. ಅದು ಒಂದೆರಡು ದಿನಗಳಲ್ಲಿ ಗುದುಗುದಿಸಹತ್ತಿದ್ದರಿಂದ ನಾಯಿ ಎದ್ದುನಿಂತು ಮುಕಳಿಯನ್ನು ನೆಲಕ್ಕೆ ತಿಕ್ಕಿತು. ಅದರಿಂದ ಗುದದ್ವಾರವು ಕೆತ್ತಿಹೋಗಿ ಹುಣ್ಣೇ ಬಿದ್ದಿತು. ಕೀವು ಆಯಿತು. ಆದರೆ ಬಂದ ಹೊಸಬರನ್ನು ಕಂಡು, ವವ್ವ್ ಎಂದು ಬೊಗಳಿ ಅವರ ಮೈಮೇಲೆ ಹೋಗುವುದನ್ನು ಬಿಟ್ಟಿರಲಿಲ್ಲ. ಆದರೆ ವವ್ವ್ ಎಂದು ಬೊಗಳಬೇಕಾದರೆ ಗುದದ್ವಾರವನ್ನು ಬಿಗಿಹಿಡಿಯಬೇಕಾಗುತ್ತದೆ. ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ
ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ “ಅಂಽಽಽ ಎಂದು ನರಳಿ ಹಿಂದಿರುಗಿ ಬರತೊಡಗಿತು.

ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.

“ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು” ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...