Home / ಕಥೆ / ಜನಪದ / ಮೂರು ಆಕಳ ಕರುಗಳು

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು.

ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳಾಗಿರುವಾಗ ಕಟ್ಟಿಹಾಕಿದ ಕರುಗಳನ್ನು ತುಸು ಅಡ್ಡಾಡಿ ಬರಲೆಂದು ಕುಣಿಕೆ ಉಚ್ಚಿ ಬಿಡುವುದುಂಟು. ಹಾಗೆ ಹೊರಬಿದ್ದ ಮೂರು ಆಕಳ ಕರುಗಳು ಅಗಸೆಯ ಬಳಿಯಲ್ಲಿ ಕೂಡಿದವು. ಒಂದು ಕರು ಒಕ್ಕಲಿಗರದು; ಇನ್ನೂಂದು ಉಪಾಧ್ಯರದು; ಮೂರನೇದು ಗೌಳಿಗರದು.

ಮೂರೂ ಕರುಗಳು ಜೊತೆಗೂಡಿ ಅಗಸೆಯಿಂದ ಹೊರಬಿದ್ದವು. ಮುಂದೆ ಬಚ್ಚಲ ಮೋರೆಯ ನೀರು ಹೊರಬಿದ್ದು, ಹುದಿಲುಂಟುಮಾಡಿತ್ತು. ದಾರಿಹಿಡಿದು ಸಾಗುವವರು ಅದನ್ನು ದಾಟಬೇಕಾಗುತ್ತಿತ್ತು. ಎಲ್ಲಿಂದ ಹೇಗೆ ದಾಟಬೇಕು ಎಂದು ಯೋಚಿಸದೆ ಒಕ್ಕಲಿಗರ ಕರು ಬಾಲವನ್ನು ಎತ್ತರಿಸಿ ಟಣ್ಣನೆ ಜಿಗಿದು ಆಚೆಯ ಬದಿಯಲ್ಲಿ ನಿಂತಿತು. ಅದರಂತೆ ಜಿಗಿದು ಹೋಗುವ ಪ್ರಯತ್ನ ಮಾಡಿದರೂ ಉಪಾಧ್ಯರ ಕರುವಿನ ಹಿಂಗಾಲು ಕೆಸರು ತುಳಿದವು. ಇನ್ನುಳಿದದ್ದು ಗೌಳಿಗರ ಕರು. ಅದು ಜಿಗಿದು ಹೋಗುವ ವಿಚಾರವನ್ನೇ ಮಾಡಲಿಲ್ಲ. ಪಚಲ್ ಕಚಲ್ ಎಂದು ಹುದಿಲು ತುಳಿಯುತ್ತ ಅದನ್ನು ದಾಟಿಹೋಗಿ ಮುಂದಿನ ಕರುಗಳನ್ನು ಕೂಡಿಕೊಳ್ಳಲು ಧಾವಿಸಿತು.

ಅಷ್ಟರಲ್ಲಿ ಉಪಾಧ್ಯರ ಕರು ಕೇಳಿತು ಒಕ್ಕಲಿಗರ ಕರುವಿಗೆ – “ಏನೋ- ನೀನು ಕಾಲಿಗೆ ಕೆಸರು ಸೋಂಕದಂತೆ ಆ ಹುದಿಲು ಹರಿಯನ್ನು ಟಣ್ಣನೆ ಜಿಗಿದು ಬಂದೆಯಲ್ಲ ! ಅಷ್ಟೊಂದು ಚಪಲತೆ ನಿನಗೆಲ್ಲಿಂದ ಬಂತು” ಎಂದು ಕೇಳಿತು.

ಒಕ್ಕಲಿಗರ ಕರು ಅಭಿಮಾನದಿಂದ ಹೇಳಿತು – “ನಮ್ಮವ್ವನಿಗಿರುವ ನಾಲ್ಕು ಮೊಲೆಗಳ ಹಾಲನ್ನೆಲ್ಲ ದಿನಾಲು ಎರಡೂ ಹೊತ್ತು ಕುಡಿಯುತ್ತೇನೆ. ಅದರಿಂದ ನನಗೆ ಅಷ್ಟೊಂದು ಕಸುವು ಬಂದಿದೆ.”

“ಏನಂದೀ ? ಅವ್ವನ ಮೊಲೆಯಲ್ಲಿ ಹಾಲಿರುತ್ತವೆಯೇ?” ಎಂದು ಉಪಾಧ್ಯರ ಕರು ಬೆಕ್ಕಸಬಟ್ಟು ಕೇಳಿತು.

ಅವೆರಡೂ ಕರುಗಳು ಮಾತಾಡುವುದನ್ನು ಕೇಳಿ ಇದಾವ ಹೊಸವಿಷಯ ಎಂದು ಕುತುಹಲದಿಂದ ಗೌಳಿಗರ ಕರು ಅವಸರದ ಹೆಜ್ಜೆ ಹಾಕಿ ಕೇಳಿತು – “ಅವ್ವನಿಗೆ ಮೊಲೆ ಇರುವವೇ?”

ತಮ್ಮ ಎಳೆಕರು ಬೆಲೆಯುಳ್ಳ ಬದುಕಾಗಲೆಂದು ಆಕಳನ್ನು ಹಿಂಡಿಕೊಳ್ಳದೆ ಇದ್ದಷ್ಟು ಹಾಲನ್ನು ಒಕ್ಕಲಿಗರು ಹೋರಿಗರುವಿಗೆ ಬಿಟ್ಟುಕೊಡುತ್ತಾರೆ, ಉಪಾಧ್ಯರು ಹಾಲಿನ ಸಲುವಾಗಿ ಅವುಗಳನ್ನು ಕಟ್ಟಿರುವುದರಿಂದ ಅವರು, ಕೆಚ್ಚಲೊಳಗಿನ ಹಾಲನ್ನೆಲ್ಲ ಹಿಂಡಿಕೊಂಡು ಆಮೇಲೆ ಕರುವಿಗೆ ಬಿಡುವರು. ಅದು ಒಣ ಮೊಲೆಗಳನ್ನು ಚೀಪುವದು. ಅಂತೆಯೇ ಅದು ಕೇಳಿತು – “ಅವ್ವನ ಮೊಲೆಯಲ್ಲಿ ಹಾಲಿರುವವೇ” ಎಂದು.

ಇನ್ನು ಗೌಳಿಗರಂತೂ ಹಾಲು ಮಾರುವವರು. ಆಕಳ ದೊಲೆಗಳನ್ನು ಜಗ್ಗಿ ಹಿಂಡಿಕೊಳ್ಳವರಲ್ಲದೆ, ಹಿಂದುಗಡೆ ಸಹ ಕರುವನ್ನು ಬಿಡುವದಿಲ್ಲ. ಅಂತೆಯೇ ಗೌಳಿಗರ ಕರು ಕೇಳುತ್ತದೆ – “ಅವ್ವನಿಗೆ ಮೊಲೆ ಇರುವವೇ” ಎಂದು.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...