Home / ಕಥೆ / ಜನಪದ / ಮೂರು ಆಕಳ ಕರುಗಳು

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು.

ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳಾಗಿರುವಾಗ ಕಟ್ಟಿಹಾಕಿದ ಕರುಗಳನ್ನು ತುಸು ಅಡ್ಡಾಡಿ ಬರಲೆಂದು ಕುಣಿಕೆ ಉಚ್ಚಿ ಬಿಡುವುದುಂಟು. ಹಾಗೆ ಹೊರಬಿದ್ದ ಮೂರು ಆಕಳ ಕರುಗಳು ಅಗಸೆಯ ಬಳಿಯಲ್ಲಿ ಕೂಡಿದವು. ಒಂದು ಕರು ಒಕ್ಕಲಿಗರದು; ಇನ್ನೂಂದು ಉಪಾಧ್ಯರದು; ಮೂರನೇದು ಗೌಳಿಗರದು.

ಮೂರೂ ಕರುಗಳು ಜೊತೆಗೂಡಿ ಅಗಸೆಯಿಂದ ಹೊರಬಿದ್ದವು. ಮುಂದೆ ಬಚ್ಚಲ ಮೋರೆಯ ನೀರು ಹೊರಬಿದ್ದು, ಹುದಿಲುಂಟುಮಾಡಿತ್ತು. ದಾರಿಹಿಡಿದು ಸಾಗುವವರು ಅದನ್ನು ದಾಟಬೇಕಾಗುತ್ತಿತ್ತು. ಎಲ್ಲಿಂದ ಹೇಗೆ ದಾಟಬೇಕು ಎಂದು ಯೋಚಿಸದೆ ಒಕ್ಕಲಿಗರ ಕರು ಬಾಲವನ್ನು ಎತ್ತರಿಸಿ ಟಣ್ಣನೆ ಜಿಗಿದು ಆಚೆಯ ಬದಿಯಲ್ಲಿ ನಿಂತಿತು. ಅದರಂತೆ ಜಿಗಿದು ಹೋಗುವ ಪ್ರಯತ್ನ ಮಾಡಿದರೂ ಉಪಾಧ್ಯರ ಕರುವಿನ ಹಿಂಗಾಲು ಕೆಸರು ತುಳಿದವು. ಇನ್ನುಳಿದದ್ದು ಗೌಳಿಗರ ಕರು. ಅದು ಜಿಗಿದು ಹೋಗುವ ವಿಚಾರವನ್ನೇ ಮಾಡಲಿಲ್ಲ. ಪಚಲ್ ಕಚಲ್ ಎಂದು ಹುದಿಲು ತುಳಿಯುತ್ತ ಅದನ್ನು ದಾಟಿಹೋಗಿ ಮುಂದಿನ ಕರುಗಳನ್ನು ಕೂಡಿಕೊಳ್ಳಲು ಧಾವಿಸಿತು.

ಅಷ್ಟರಲ್ಲಿ ಉಪಾಧ್ಯರ ಕರು ಕೇಳಿತು ಒಕ್ಕಲಿಗರ ಕರುವಿಗೆ – “ಏನೋ- ನೀನು ಕಾಲಿಗೆ ಕೆಸರು ಸೋಂಕದಂತೆ ಆ ಹುದಿಲು ಹರಿಯನ್ನು ಟಣ್ಣನೆ ಜಿಗಿದು ಬಂದೆಯಲ್ಲ ! ಅಷ್ಟೊಂದು ಚಪಲತೆ ನಿನಗೆಲ್ಲಿಂದ ಬಂತು” ಎಂದು ಕೇಳಿತು.

ಒಕ್ಕಲಿಗರ ಕರು ಅಭಿಮಾನದಿಂದ ಹೇಳಿತು – “ನಮ್ಮವ್ವನಿಗಿರುವ ನಾಲ್ಕು ಮೊಲೆಗಳ ಹಾಲನ್ನೆಲ್ಲ ದಿನಾಲು ಎರಡೂ ಹೊತ್ತು ಕುಡಿಯುತ್ತೇನೆ. ಅದರಿಂದ ನನಗೆ ಅಷ್ಟೊಂದು ಕಸುವು ಬಂದಿದೆ.”

“ಏನಂದೀ ? ಅವ್ವನ ಮೊಲೆಯಲ್ಲಿ ಹಾಲಿರುತ್ತವೆಯೇ?” ಎಂದು ಉಪಾಧ್ಯರ ಕರು ಬೆಕ್ಕಸಬಟ್ಟು ಕೇಳಿತು.

ಅವೆರಡೂ ಕರುಗಳು ಮಾತಾಡುವುದನ್ನು ಕೇಳಿ ಇದಾವ ಹೊಸವಿಷಯ ಎಂದು ಕುತುಹಲದಿಂದ ಗೌಳಿಗರ ಕರು ಅವಸರದ ಹೆಜ್ಜೆ ಹಾಕಿ ಕೇಳಿತು – “ಅವ್ವನಿಗೆ ಮೊಲೆ ಇರುವವೇ?”

ತಮ್ಮ ಎಳೆಕರು ಬೆಲೆಯುಳ್ಳ ಬದುಕಾಗಲೆಂದು ಆಕಳನ್ನು ಹಿಂಡಿಕೊಳ್ಳದೆ ಇದ್ದಷ್ಟು ಹಾಲನ್ನು ಒಕ್ಕಲಿಗರು ಹೋರಿಗರುವಿಗೆ ಬಿಟ್ಟುಕೊಡುತ್ತಾರೆ, ಉಪಾಧ್ಯರು ಹಾಲಿನ ಸಲುವಾಗಿ ಅವುಗಳನ್ನು ಕಟ್ಟಿರುವುದರಿಂದ ಅವರು, ಕೆಚ್ಚಲೊಳಗಿನ ಹಾಲನ್ನೆಲ್ಲ ಹಿಂಡಿಕೊಂಡು ಆಮೇಲೆ ಕರುವಿಗೆ ಬಿಡುವರು. ಅದು ಒಣ ಮೊಲೆಗಳನ್ನು ಚೀಪುವದು. ಅಂತೆಯೇ ಅದು ಕೇಳಿತು – “ಅವ್ವನ ಮೊಲೆಯಲ್ಲಿ ಹಾಲಿರುವವೇ” ಎಂದು.

ಇನ್ನು ಗೌಳಿಗರಂತೂ ಹಾಲು ಮಾರುವವರು. ಆಕಳ ದೊಲೆಗಳನ್ನು ಜಗ್ಗಿ ಹಿಂಡಿಕೊಳ್ಳವರಲ್ಲದೆ, ಹಿಂದುಗಡೆ ಸಹ ಕರುವನ್ನು ಬಿಡುವದಿಲ್ಲ. ಅಂತೆಯೇ ಗೌಳಿಗರ ಕರು ಕೇಳುತ್ತದೆ – “ಅವ್ವನಿಗೆ ಮೊಲೆ ಇರುವವೇ” ಎಂದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...