Home / ಕವನ / ಕವಿತೆ / ಉಸಿರಿನ ಹಡಗು

ಉಸಿರಿನ ಹಡಗು

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರೆದಿವೆ ನಿಲ್ಲದ ದಾರಿ.-
ಎಲ್ಲಿಂದೆಲ್ಲಿಗೆ ಇದರ ಸವಾರಿ!

ಕಾಮನ ಕೋರುವ ಕಣ್ಣು ಇದಕ್ಕೆ,
ಬಯಕೆಯ ಬೀರುವ ಬಾವುಟ-ರೆಕ್ಕೆ,
ಕ್ಷುಧಾಗ್ನಿ ಹೊರಳುವ ತುಂಬದ ಹೊಟ್ಟೆ,
ಹಾಹಾಕಾರದ ಹೆಬ್ದುಲಿ-ರಟ್ಟೆ.

ಮುಡಿಯಲಿ ಗರ್ವದ ಹೊಗೆಯ ಕಿರೀಟ,
ಮುಖದಲಿ ತಂಗಿದೆ ಮಕ್ಕಳ ನೋಟ,
ಸುತ್ತಾ ಉತ್ತೆಸೆದಲೆಗಳ ಕಾಟ;
ಮರುಭೂಮಿಯಲಿದು ತೆಂಗಿನ ತೋಟ.

ಮಗುವಿದೆ ತಳ್ಳಿದ ಕಾಲಿಗೆ ಬಿದ್ದು;
ತಂದೆಯ ಉತ್ತರ: ಮತ್ತೂ ಗುದ್ದು.
ಈ ಗತಿಯೇ ಹೆತ್ತವಳೇ ಇದ್ದೂ?-
ಕರುಣೆಯ ಕರುಳಲಿ ಹುಟ್ಟಿದ ಸದ್ದು.

ಇನಿಯನ ಎದೆಯಲಿ ಕೆನ್ನೆಯನಿಟ್ಟು
ಕಣ್ತೆರೆವಿನಿಯಳ ಚೆಲುವನು ತೊಟ್ಟು
ತುಂಬುತ್ತಲೆಯಿರೆ ಹಡಗಿನ ರೂಪ,
ಕಡಲಿನ ಕಣ್ಣಿಗೆ ಏಕೋ ಕೋಪ!

ಉಸಿರಿನ ಹಡಗಿದು, ಏನಿದರರಕೆ?
ಉಸುರುವಂತಿಲ್ಲ.-(ಉಳಿಯುವ ಬಯಕೆ?)
ಬರಿ ಕನಸಿದು,-ನಗೆ ನೋವಿನ ಬೆರಕೆ;-
ಅದೊ! ನೀರಿನ ಬಿರುಗಾಳಿಯ ಗೊರಕೆ.

ಹಡಗಿನ ಪಾಡಿಗೆ ಕಡಲೇ ನಕ್ಕು
ನೀರಿನ ಕೆನ್ನೆಗೆ ಬಂದಿದೆ ಸುಕ್ಕು.
ತೇಲುವ ಬಾಳಿಗೆ ಯಾರೋ ದಿಕ್ಕು?
ಬೇಕು ಅದೃಷ್ಟವೆ ತೇಲುವುದಕ್ಕೂ!

ತೇಲುವುದೆಲ್ಲಾ ತೇಲುತ್ತಿರಲಿ!
ಮುಳುಗುವುದೋ? ಸರಿ, ಮುಳುಗುತ್ತಿರಲಿ!
ರವಿಯೂ ಮುಳುಗಲಿ! ಶಶಿಯೂ ಮುಳುಗಲಿ!
ಗ್ರಹತಾರೆಗಳೂ ಸುಮ್ಮನೆ ಮುಳುಗಲಿ!-

ದಿಗ್ದಿಕ್ತಟಗಳ ಒಳಗೂ ಹೊರಗೂ
ನೀಲ ನೀಳ ನಾಲಗೆಗಳನೆಸೆದು,
ಜೀವದಾಸೆಗಳನೆಲ್ಲಾ ತೊಡೆದು,
ಎಲ್ಲಾ ಮುಗಿದರೆ, ತಾನೇ ಉಳಿದು,

ತುಂಬಿ ತುಳುಕುತಿದೆ ಕಾಲ ಸಮುದ್ರ;
ಬದುಕಬಲ್ಲವನು ಒಬ್ಬನೆ, ರುದ್ರ.
ತೇಲಬಹುದು ಈ ತುಂಬಿದ ಹಡಗು.
ನಾಳೆ ಇವರ ಮನೆ ಆಳದ ಕೊರಗು.-

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರದಿದೆ ನಿಲ್ಲದ ದಾರಿ.
ಎಲ್ಲಿಂದೆಲ್ಲಿಗೆ ಇದರ ಸವಾರಿ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...