Home / ಕಥೆ / ಜನಪದ / ಸತ್ತೇನು ಗುಬ್ದಿ ?

ಸತ್ತೇನು ಗುಬ್ದಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ.

ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ ಬಂದ ಕವಣೆಗಲ್ಲಿನ ರಭಸಕ್ಕಂಜಿಯೇ ಹಕ್ಕಿಗಳೆಲ್ಲ ಹಾರಿಹೋದವು, ಆದರೆ ಒಂದು ಗುಬ್ದಿ ಮಾತ್ರ ಹಾರಿ ಹೋಗದೆ, ಒಂದು ತೆನೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಹೊಲದವನ ಬಾಯ ಬೆದರಿಕೆಗಾಗಲಿ, ಬಾರಕೋಲಿನ ಸಪ್ಪಳಕ್ಕಾಗಲಿ ಅದು ಮಿಸುಕಲಿಲ್ಲ; ಕವಣೆಗಲ್ಲಿಗೂ ಹಣಿಯಲಿಲ್ಲ. ಅಟ್ಟದಿಂದಿಳಿದು ಕಾವಲಿಗನು ಆ ಗುಬ್ದಿ ಕುಳಿತಲ್ಲಿಗೆ ಮೆಲ್ಲನೆ ಹೋಗಿ ಅದನ್ನು ಗಪ್ಪನೆ ಹಿಡಿದು ತಂದು, ಅದರ ಕಾಲಿಗೆ ದಾರಕಟ್ಟಿ ಅಟ್ಟದ ಕಾಲಿಗೆ
ಬಿಗಿದನು. ಆದರೂ ಅದು ಪಕ್ಕ ಬಿಚ್ಚಿ ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು ಕಾವಲಿಗನು ಕೇಳಿದನು – “ಸತ್ತೇಯೇನು ಗುಬ್ಬಿ?”
ಆ ಗುಬ್ದಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚಗೀ ಕಾಲಿನಲ್ಲಿ
ಜೋಕಾಲಿ ಆಡಹತ್ತಿದ್ದೇನೆ.
ನಾನೇಕೆ ಸಾಯುವೆನು ?”

ಹೊಲದವನು ಅದನ್ನು ಬಿಚ್ಚಿ ಕೊಂಡೊಯ್ದು ಹರಿಯುವ ಹಳ್ಳದಲ್ಲಿ ಒಗೆದನು, ಆಗಲೂ ಅದು ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು – “ಸತ್ತೆಯಾ ಗುಬ್ಬಿ” ಎಂದು ಕೇಳಿದನು. ಗುಬ್ಬಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?”

ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
“ಸತ್ತೆಯೇನು ಗುಬ್ಬಿ ?”
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಹೊಲದವನು ಗುಬ್ದಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. “ಸತ್ತೆಯಾ ಗುಬ್ದಿ” ಎಂದು ಕೇಳಿದನು. ಗುಬ್ದಿ ಹೇಳಿತು –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು –
“ಸತ್ತೆಯಾ ಗುಬ್ಬಿ ?”

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಬ್ಬಿ ಕಾಣಿಸಿ ಕೊಂಡಿತು. ಮತ್ತೆ ಫಡಫಡಿಸುತ್ತ –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊಂಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು ?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...