Home / ಕಥೆ / ಜನಪದ / ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತುಕೊಂಡನು. ಶ್ರೀಮಂತನ ದೃಷ್ಟಿಯು ಆ ಹುಡುಗನತ್ತ ಹರಿಯಿತು. ಹುಡುಗ ನಗುತ್ತ ನಿಂತಿದ್ದಾನೆ ! ಅದನ್ನು ಕಂಡು ಶ್ರೀಮಂತನಿಗೆನಿಸಿತು – ತನ್ನ ಮನೆಯನ್ನೂ ತನ್ನ ವೈಭವವನ್ನೂ ನೋಡಿ ಆನಂದದಿಂದ ನಗುತ್ತಿದ್ದಾನೆ. ಈ ಹುಡುಗ. ಈತನಿಗೆ ಏನಾದರೂ ತಿನ್ನಲು ಮಿಠಾಯಿಕೊಡಿಸೋಣವೆಂದು ಯೋಚಿಸಿ, ಆ ಹುಡುಗನನ್ನು ಮಾತಾಡಿಸಿದನು-

“ಏನೋ, ತಮ್ಮಾ ಏಕೆ ನಗುತ್ತಿರುವಿ ?”

ಅನುಮಾನಿಸುತ್ತಲೇ ಆ ಹುಡುಗನು ಮರುನುಡಿದನು – “ಅಕಸ್ಮಾತ್ ನೀವು ಸತ್ತರೆ ನಿಮ್ಮ ಹೆಣವನ್ನು ಈಚೆಗೆ ಹೇಗೆ ತರುವುದು – ಎಂದು ಯೋಚಿಸಿ ನಕ್ಕೆನು.”

ಹುಡುಗನು ಅಧಿಕಪ್ರಸಂಗಿಯೆನ್ನುವುದು ಸ್ಪಷ್ಟವಾಯಿತು. ಅವನ ಮನೆಯೊಳಗಿನ ಹಿರಿಯರನ್ನು ಕರೆಯಿಸಿ ಈತನು ವಿವೇಕಿಯಾಗುವಂತೆ ತಿದ್ದಲು ಸೂಚಿಸಬೇಕೆಂದು ಶ್ರೀಮಂತನು ಬಗೆದನು.

“ಏ ಹುಡುಗಾ, ನಿಮ್ಮ ಮನೆಯಲ್ಲಿ ಯಾರಾರು ಇರುವಿರಿ ?”

“ನನ್ನ ಅಣ್ಣ ಹಾಗೂ ತಂದೆ ಇದ್ದಾರೆ” ಹುಡುಗನ ಹೇಳಿಕೆ.

“ಒಳ್ಳೇದು ಇಲ್ಲಿ ಕುಳಿತುಕೋ” ಎಂದು ಆ ಹುಡುಗನನ್ನು ಕುಳ್ಳರಿಸಿಕೊಂಡು ಒಬ್ಬ ಆಳುಮಗನನ್ನು ಕರೆದು ಆ ಹುಡುಗನ ಅಣ್ಣನನ್ನು ಕರೆತರಲು ಹೇಳಿದನು.

ಹುಡುಗನ ಅಣ್ಣ ಬರಲು, ಶ್ರೀಮಂತನು ಅವನ ಅಧಿಕಪ್ರಸಂಗವನ್ನು ತಿಳಿಸಿದನು. ಆ ಮಾತು ಕೇಳಿ ಅಣ್ಣನಿಗೆ ತಮ್ಮನ ಮೇಲೆ ಸಿಟ್ಟು ಬಂತು. ಜಂಕಿಸಿ
ನುಡಿದನು – “ಧನಿಯರು ಸತ್ತರೆ ಆ ಹೆಣವನ್ನು ಹೊರತರುವ ವಿಚಾರ ನಿನಗೇಕೆ ಬೇಕಾಗಿತ್ತು ? ಹೆಣವನ್ನು ಕಡೆಕಡೆದು ತಂದಾರು ಹೊರಗೆ. ಅದರ
ಉಸಾಬರಿ ಏತಕ್ಕೆ ಮಾಡುವಿ ?”

ಆ ಮಾತು ಕೇಳಿ ಶ್ರೀಮಂತನಿಗೆ ಅನಿಸಿತು – ಈತನು ತಮ್ಮನಿಗಿಂತ ಮಿಗಿಲಾದ ಅಧಿಕಪ್ರಸಂಗಿ – “ತಮ್ಮಾ, ನೀನೂ ಒಂದಿಷ್ಟು ಕುಳಿತುಕೋ” ಎಂದು
ನುಡಿದು, “ಇವರಿಬ್ಬರನ್ನು ಬಿಡಬೇಡ” ಎಂದು ಆಳುಮಗನಿಗೆ ಸೂಚಿಸಿದನು. ಬೇರೊಬ್ಬ ಆಳನ್ನು ಕರೆದು – “ಅವರ ತಂದೆಯನ್ನು ಮುಂದೆ ಹಾಕಿಕೊಂಡು ಬಾ. ಅವನಾದರೂ ಈ ಅವಿವೇಕಿಗಳನ್ನು ತಿದ್ದಲಿ” ಎಂದು ಹೇಳಿದನು.

ಮರುಕ್ಷಣದಲ್ಲಿಯೇ ಅವರ ತಂದೆ ಬರಲು, ಶ್ರೀಮಂತನು ಅವನನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡು, ಅವನ ಮಕ್ಕಳಿಬ್ಬರೊಡನೆ ನಡೆದ ಸಂಗತಿಯನ್ನು ಕ್ರಮವಾಗಿ ವಿವರಿಸಿದನು. ತಂದೆಗೂ ಎಲ್ಲಿಲ್ಲದ ಸಿಟ್ಟುಬಂತು, ಅವರ ವರ್ತನೆ ಕೇಳಿ. ಶ್ರೀಮಂತನ ಎದುರಿನಲ್ಲಿಯೇ ಮಕ್ಕಳಿಗೆ ಛೀ ಎನ್ನಲು ತೊಡಗಿದನು – “ಕತ್ತೆ ಆಗಿರುವಿರಿ ತಿಳಿಯುವದಿಲ್ಲವೇ ನಿಮಗೆ ? ಧನಿಯರು ಸತ್ತರೆ ಹೆಣವನ್ನು ಹೇಗೆ ಹೊರತರುವುದೆಂಬ ವಿಚಾರ ನಿಮಗೇಕೆ ಬೇಕಿತ್ತು ? ಹೆಣವನ್ನು ಕಡೆ ಕಡೆದು ಹೊರತರುವ ಯುಕ್ತಿ ಹೇಳಿಕೊಡುವದಕ್ಕೆ ನೀನಾವ ಪಂಡಿತನು ? ಮನೆಯಲ್ಲಿಯೇ ಶವಕ್ಕೆ ಬೆಂಕಿ ಹಚ್ಚಲೊಲ್ಲರೇಕೆ, ನಿಮಗೇಕೆ ಆ ಉಸಾಬರಿ ?”

ತಂದೆಯೂ ಅದೇ ವರ್ಗಕ್ಕೆ ಸೇರಿದ ಪ್ರಾಣಿಯೆಂದು ಬಗೆದು, ಅವರೆಲ್ಲರಿಗೂ ಹೋಗಿಬನ್ನಿರೆಂದು ಶ್ರೀಮಂತನು ಕೈಮುಗಿದು ಕಳಿಸಿದನು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...