ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತುಕೊಂಡನು. ಶ್ರೀಮಂತನ ದೃಷ್ಟಿಯು ಆ ಹುಡುಗನತ್ತ ಹರಿಯಿತು. ಹುಡುಗ ನಗುತ್ತ ನಿಂತಿದ್ದಾನೆ ! ಅದನ್ನು ಕಂಡು ಶ್ರೀಮಂತನಿಗೆನಿಸಿತು – ತನ್ನ ಮನೆಯನ್ನೂ ತನ್ನ ವೈಭವವನ್ನೂ ನೋಡಿ ಆನಂದದಿಂದ ನಗುತ್ತಿದ್ದಾನೆ. ಈ ಹುಡುಗ. ಈತನಿಗೆ ಏನಾದರೂ ತಿನ್ನಲು ಮಿಠಾಯಿಕೊಡಿಸೋಣವೆಂದು ಯೋಚಿಸಿ, ಆ ಹುಡುಗನನ್ನು ಮಾತಾಡಿಸಿದನು-

“ಏನೋ, ತಮ್ಮಾ ಏಕೆ ನಗುತ್ತಿರುವಿ ?”

ಅನುಮಾನಿಸುತ್ತಲೇ ಆ ಹುಡುಗನು ಮರುನುಡಿದನು – “ಅಕಸ್ಮಾತ್ ನೀವು ಸತ್ತರೆ ನಿಮ್ಮ ಹೆಣವನ್ನು ಈಚೆಗೆ ಹೇಗೆ ತರುವುದು – ಎಂದು ಯೋಚಿಸಿ ನಕ್ಕೆನು.”

ಹುಡುಗನು ಅಧಿಕಪ್ರಸಂಗಿಯೆನ್ನುವುದು ಸ್ಪಷ್ಟವಾಯಿತು. ಅವನ ಮನೆಯೊಳಗಿನ ಹಿರಿಯರನ್ನು ಕರೆಯಿಸಿ ಈತನು ವಿವೇಕಿಯಾಗುವಂತೆ ತಿದ್ದಲು ಸೂಚಿಸಬೇಕೆಂದು ಶ್ರೀಮಂತನು ಬಗೆದನು.

“ಏ ಹುಡುಗಾ, ನಿಮ್ಮ ಮನೆಯಲ್ಲಿ ಯಾರಾರು ಇರುವಿರಿ ?”

“ನನ್ನ ಅಣ್ಣ ಹಾಗೂ ತಂದೆ ಇದ್ದಾರೆ” ಹುಡುಗನ ಹೇಳಿಕೆ.

“ಒಳ್ಳೇದು ಇಲ್ಲಿ ಕುಳಿತುಕೋ” ಎಂದು ಆ ಹುಡುಗನನ್ನು ಕುಳ್ಳರಿಸಿಕೊಂಡು ಒಬ್ಬ ಆಳುಮಗನನ್ನು ಕರೆದು ಆ ಹುಡುಗನ ಅಣ್ಣನನ್ನು ಕರೆತರಲು ಹೇಳಿದನು.

ಹುಡುಗನ ಅಣ್ಣ ಬರಲು, ಶ್ರೀಮಂತನು ಅವನ ಅಧಿಕಪ್ರಸಂಗವನ್ನು ತಿಳಿಸಿದನು. ಆ ಮಾತು ಕೇಳಿ ಅಣ್ಣನಿಗೆ ತಮ್ಮನ ಮೇಲೆ ಸಿಟ್ಟು ಬಂತು. ಜಂಕಿಸಿ
ನುಡಿದನು – “ಧನಿಯರು ಸತ್ತರೆ ಆ ಹೆಣವನ್ನು ಹೊರತರುವ ವಿಚಾರ ನಿನಗೇಕೆ ಬೇಕಾಗಿತ್ತು ? ಹೆಣವನ್ನು ಕಡೆಕಡೆದು ತಂದಾರು ಹೊರಗೆ. ಅದರ
ಉಸಾಬರಿ ಏತಕ್ಕೆ ಮಾಡುವಿ ?”

ಆ ಮಾತು ಕೇಳಿ ಶ್ರೀಮಂತನಿಗೆ ಅನಿಸಿತು – ಈತನು ತಮ್ಮನಿಗಿಂತ ಮಿಗಿಲಾದ ಅಧಿಕಪ್ರಸಂಗಿ – “ತಮ್ಮಾ, ನೀನೂ ಒಂದಿಷ್ಟು ಕುಳಿತುಕೋ” ಎಂದು
ನುಡಿದು, “ಇವರಿಬ್ಬರನ್ನು ಬಿಡಬೇಡ” ಎಂದು ಆಳುಮಗನಿಗೆ ಸೂಚಿಸಿದನು. ಬೇರೊಬ್ಬ ಆಳನ್ನು ಕರೆದು – “ಅವರ ತಂದೆಯನ್ನು ಮುಂದೆ ಹಾಕಿಕೊಂಡು ಬಾ. ಅವನಾದರೂ ಈ ಅವಿವೇಕಿಗಳನ್ನು ತಿದ್ದಲಿ” ಎಂದು ಹೇಳಿದನು.

ಮರುಕ್ಷಣದಲ್ಲಿಯೇ ಅವರ ತಂದೆ ಬರಲು, ಶ್ರೀಮಂತನು ಅವನನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡು, ಅವನ ಮಕ್ಕಳಿಬ್ಬರೊಡನೆ ನಡೆದ ಸಂಗತಿಯನ್ನು ಕ್ರಮವಾಗಿ ವಿವರಿಸಿದನು. ತಂದೆಗೂ ಎಲ್ಲಿಲ್ಲದ ಸಿಟ್ಟುಬಂತು, ಅವರ ವರ್ತನೆ ಕೇಳಿ. ಶ್ರೀಮಂತನ ಎದುರಿನಲ್ಲಿಯೇ ಮಕ್ಕಳಿಗೆ ಛೀ ಎನ್ನಲು ತೊಡಗಿದನು – “ಕತ್ತೆ ಆಗಿರುವಿರಿ ತಿಳಿಯುವದಿಲ್ಲವೇ ನಿಮಗೆ ? ಧನಿಯರು ಸತ್ತರೆ ಹೆಣವನ್ನು ಹೇಗೆ ಹೊರತರುವುದೆಂಬ ವಿಚಾರ ನಿಮಗೇಕೆ ಬೇಕಿತ್ತು ? ಹೆಣವನ್ನು ಕಡೆ ಕಡೆದು ಹೊರತರುವ ಯುಕ್ತಿ ಹೇಳಿಕೊಡುವದಕ್ಕೆ ನೀನಾವ ಪಂಡಿತನು ? ಮನೆಯಲ್ಲಿಯೇ ಶವಕ್ಕೆ ಬೆಂಕಿ ಹಚ್ಚಲೊಲ್ಲರೇಕೆ, ನಿಮಗೇಕೆ ಆ ಉಸಾಬರಿ ?”

ತಂದೆಯೂ ಅದೇ ವರ್ಗಕ್ಕೆ ಸೇರಿದ ಪ್ರಾಣಿಯೆಂದು ಬಗೆದು, ಅವರೆಲ್ಲರಿಗೂ ಹೋಗಿಬನ್ನಿರೆಂದು ಶ್ರೀಮಂತನು ಕೈಮುಗಿದು ಕಳಿಸಿದನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆನಿ ಬಂತಾನಿ
Next post ಸೂರ್ಯನ ವಿವರಣೆ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…