Home / ಲೇಖನ / ಇತರೆ / ಕ್ರೂರಿಯಾಗದಿರಲಿ!

ಕ್ರೂರಿಯಾಗದಿರಲಿ!

ಪ್ರಿಯ ಸಖಿ,
ಬೆಂಗಳೂರಿಗೆ ಹೊರಟಿದ್ದ ಬಸ್ಸು ಕುಣಿಗಲ್ನಲ್ಲಿ ನಿಂತು ಇಳಿಸುವವರನ್ನು ಇಳಿಸಿ ಹತ್ತಿಸಿಕೊಳ್ಳುವವರನ್ನು ಹತ್ತಿಸಿಕೊಂಡು ತಕ್ಷಣ ಹೊರಟಿದೆ. ಇದರ ಅರಿವಿಲ್ಲವ ಕಡಲೇ ಕಾಯಿ ಮಾರುವ ಹುಡುಗನೂ ಬಸ್ಸು ಹತ್ತಿ ವ್ಯಾಪಾರಕ್ಕಿಳಿದವನು ಬಸ್ಸು ಹೊರಟು ಬಿಟ್ಟಿದ್ದನ್ನು ಗಮನಿಸಿ ಗಾಬರಿಯಾಗಿ ಬಸ್ಸು ನಿಲ್ಲಿಸುವಂತೆ ಕೂಗಿಕೊಳ್ಳುತ್ತಾನೆ. ಇದನ್ನು ಕೇಳಿದ ಡ್ರೈವರ್ ಅಟ್ಟಹಾಸದ ನಗೆ ನಕ್ಕು ಬಸ್ಸೊಳಗೆ ಹತ್ತಕ್ಕೆ ಯಾವನ್ಲಾ ನಿಂಗ್ ಹೇಳ್ದವ್ನು? ಬಾ, ಬಾ ಬೆಂಗಳೂರ್ನಾಗೇ ನಿನ್ನ ಇನ್ನ ಇಳ್ಸಾದು ಎನ್ನುತ್ತಾನೆ. ಇದನ್ನು ಕೇಳಿದ ಹುಡುಗ ಮತ್ತಷ್ಟು ಗಾಬರಿಯಾಗಿ ಇಲ್ಲಣ್ಣ ಗೊತ್ತಿಲ್ದೇ ಹತ್ಬುಟ್ಟೆ ಇಳುದ್ಬುಡ್ತೀನಿ, ನಿಲ್ಸಣ್ಣ, ನಿನ್ನ ದಮ್ಮಯ್ಯ ಎಂದು ಬೇಡಿಕೊಂಡಷ್ಟೂ ಡ್ರೈವರ್ನ ಅಟ್ಟಹಾಸ ಏರುತ್ತದೆ.

ಬಸ್ಸಿನಲ್ಲಿರುವ ಜನರ ಯೋಚನೆಗಳೂ ಹತ್ತು ಹಲವು ದಿಕ್ಕಿನಲ್ಲಿ ಸಾಗುತ್ತವೆ. ಬಸ್ಸು ಹೊರಡೋದು ಗೊತ್ತಿದ್ದೂ ಯಾಕ್ ಹತ್ಬೇಕಿತ್ತು. ಅನುಭವಿಸಲಿ ಅಂತ ಒಬ್ಬನೆಂದು ಕೊಂಡರೆ ಇನ್ನೊಬ್ಬ ಪಾಪ ಅವನು ಇವತ್ತು ದುಡಿದ ದುಡ್ಡನ್ನೆಲ್ಲಾ ಮತ್ತೆ ವಾಪಸ್ಸು ಬರಲು ಟಿಕೇಟಿಗೇ ಹಾಕಬೇಕೇನೋ ಎಂದುಕೊಳ್ಳುತ್ತಾನೆ. ತಾಯಿಯೊಬ್ಬಳು ಪಾಪ ಹುಡುಗ ಏನೋ ಗೊತ್ತಿಲ್ದೆ ಹತ್ತಿದೆ, ಇಳಿಸಿಬಿಡಬಾರ್ದಾ. ಈ ಡ್ರೈವರ್ ಎಂತ ಕಟುಕ ಎಂದು ಬೈಯ್ದುಕೊಳ್ಳುತ್ತಾ ಆ ಹುಡುಗನಿಂದ ಎರಡು ರೂಪಾಯಿಯ ಕಡ್ಲೆಕಾಯಿ ತೆಗೆದುಕೊಳ್ಳುತ್ತಾಳೆ. ಮತ್ತೊಬ್ಬ ಸೂಕ್ಷ್ಮ ಮನಸ್ಸಿನವ ಡ್ರೈವರ್ನ ಕ್ರೂರ ಮುಖವನ್ನು ಕಂಡು ಅವನೊಂದಿಗೆ ಮಾತನಾಡಲಾಗದೇ ಕಂಡಕ್ಟರ್ ಬಳಿ ಪಾಪ ಅವನನ್ನು ಇಳಿಸಿ ತೊಂದರೆ ಕೊಡಬೇಡಿ ಎಂದು ಬೇಡಿಕೊಳ್ಳುತ್ತಾನೆ. ಡ್ರೈವರ್‍‍ಗೆ ಕಂಡಕ್ಟರ್ ತಿಳಿಸಿ ಹೇಳಿದರೂ ಬುದ್ಧಿ ಬರ್‍ಲಿ ಸುಮ್ನಿರು ಎನ್ನುತ್ತಾ ಅಸಡ್ಡೆ ಮಾಡುತ್ತಾನೆ.

ಡ್ರೈವರ್ ಯಾರ ಮಾತೂ ಕೇಳುವವನಲ್ಲ ಎಂದು ಅರಿವಾದ ಹುಡುಗ ಬಂದದ್ದನ್ನೆಲ್ಲಾ ಎದುರಿಸಲು ತಯಾರಾದವನಂತೆ ಮತ್ತೆ ಉತ್ಸಾಹದಿಂದ ಕಡ್ಲೆಕಾಯಿ ಮಾರಲು ಪ್ರಾರಂಭಿಸುತ್ತಾನೆ. ಅ ಹುಡುಗನ ಬಗ್ಗೆ ಕರುಣೆ ಮೂಡಿದ ಅನೇಕ ಪ್ರಯಾಣಿಕರು, ಕಡಲೇಕಾಯಿ ಖರೀದಿಸಿ ಧನ್ಯವಾದೆವು ಎಂದು ಸಮಾಧಾನದ ಉಸಿರೆಳೆಯುತ್ತಾರೆ. ಯಾವಾಗಲೋ ಮನಸ್ಸು ಬಂದೆಡೆ ಆ ಡ್ರೈವರ್ ಬಸ್ಸು ನಿಲ್ಲಿಸಿ ಮಹಾನ್ ಉಪಕಾರ ಮಾಡಿದವನಂತೆ ಮುಖ ಮಾಡಿ ಹುಂ, ಇಳಿ ಎನ್ನುತ್ತಾನೆ. ಹುಡುಗ ಡ್ರೈವರ್ನೆಡೆಗೆ ತಣ್ಣನೆಯ ನೋಟವೊಂದನ್ನು ಬೀರಿ ಸರಸರನೆ ಬಸ್ಸಿನಿಂದಿಳಿಯುತ್ತಾನೆ.

ಸಖಿ, ಡ್ರೈವರ್‍ನ ಈ ಕ್ರೌರ್ಯ, ಬಡ ಹುಡುಗನ ಅಸಹಾಯಕತೆ ಮತ್ತೆ ಮತ್ತೆ ನೆನಪಾಗಿ ಕಾಡುತ್ತವೆ. ಡ್ರೈವರ್ ತನ್ನ ಕ್ರೌರ್ಯದಿಂದ ಪುಟ್ಟ ಹುಡುಗನ ಮನ ಕ್ಷಣಕ್ಕೆ ಭೀತಿಯನ್ನುಂಟು ಮಾಡಿದೆ. ಪಾಠ ಕಲಿಸಿದೆ ಎಂದು ಬೀಗಿದರೂ ಬಸ್ಸಿನಲ್ಲಿನ ಹೆಚ್ಚಿನ ಪ್ರಯಾಣಿಕರ ಕಣ್ಣಿನಲ್ಲಿ ಅವನು ವಿಲನ್ ಆದದ್ದು ಸುಳ್ಳಲ್ಲ. ಹಾಗೇ ತನ್ನ ಅಸಹಾಯಕತೆಯಲ್ಲೂ ಉತ್ಸಾಹದಿಂದಿದ್ದ, ಬದುಕನ್ನು ಬಂದಂತೆ ಧೈರ್ಯವಿರುವ ಪುಟ್ಟ ಹುಡುಗ ಅವನಿಗರಿವಿಲ್ಲದೇ ಹೀರೋ ಆಗಿ ಬಿಡುತ್ತಾನೆ. ಡ್ರೈವರ್‍ನ ಕ್ರೌರ್ಯ ಆ ಮುಗ್ದ ಹೃದಯದಲ್ಲಿ ದ್ವೇಷದ ಬೀಜವನ್ನು ಬಿತ್ತದಿರಲಿ, ಸಮಾಜವನ್ನೇ ಪ್ರತೀಕಾರದ ತಾಣವಾಗಿಸಿಕೊಂಡು ಕ್ರೂರಿಯಾಗದಿರಲಿ ಎಂಬುದು ನಮ್ಮ ಪ್ರಾರ್ಥನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...