Home / ಕವನ / ಕವಿತೆ / ನೆನಪುಗಳಿವೆ… ಕೊಳ್ಳಿ!

ನೆನಪುಗಳಿವೆ… ಕೊಳ್ಳಿ!

ಪೆರ್‍ಲಾಜ್ಜ… ನೆಟ್ಟ ಆಲದ ಮರದಲಿ,
ಮೊಮ್ಮಕ್ಳು ಮರಕೋತಿ ಆಡಿದ್ದು ನೆನಪು.
ಮರಿ ಮಗಾ ಬುಗುರಿ ಕೆತ್ತಿ, ದಾರ ಸುತ್ತಿ,
‘ಗುಯ್’…ಽಽ ಎಂದು,
ಊರುಕೇರಿ ಆಲಿಸುವಂತೆ,
‘ಗುಯ್’ ಗುಟ್ಟಿಸಿದ್ದ!
ಆಕ್ಷಣ: ಏನೆಲ್ಲ ಮರೆತು,
ಬಾಲ್ಯಕೆ ಜಾರಿದ ಜನ!
ಅರಳಿ ನೆರಳಿಗೆ,
ತೊಟ್ಟಿಲ ಕಟ್ಟಿ,
ಅಳುವಾಕಂದಮ್ಮಗಳ ಹಾಕಿ…
ಕರುಳ ಬಳ್ಳಿಯ ಹಾಡು, ನಿತ್ಯ ತೂಗುತ್ತಿತು!

ಅರಳಿ ಮರದ ಕತೆ, ಆಳೆತ್ತರ ಹಬ್ಬಿ…
ಮರ ಮರದಾ ರಂಬೆ, ಕೊಂಬೆಗೆಲ್ಲ…
ಹದ್ದು, ಕಾಗೆ, ಹಾಳಾಗದ್ದ, ಗುಬ್ಬಿ, ಪಾರಿವಾಳ,
ಗಿಡುಗ, ಗಿಳಿ, ಬೆಳವಗಳೂ ಹಿಂಡು… ಹಿಂಡು!
ನಿತ್ಯ ಚಿಲಿಪಿಲಿಯ ಸುಪ್ರಭಾತ ಮುದದೀ ಕೇಳುತ್ತಿತ್ತು
ಪಡ್ಡೆ ಹುಡುಗರಿಲ್ಲಿ ಗೋಲಿ, ಗೆಜ್ಜುಗವಾಡಿ,
ನೆರಳ ಆಶ್ರಯಿಸಿ ಬಂದ್ವರಿಲ್ಲಿ…
ಚಿನ್ನಿದಾಂಡು, ಲಗೋರಿ, ಕಣ್ಣಾಮುಚ್ಚಾಲೆಯಾಟವಿಲ್ಲಿ!
ಊರುಕೇರಿ ಜಗಳ ಬಗೆಹರಿದು,
ಸಾಕ್ಷಿ ಮರವಾಗಿ, ವರವಾಗಿ, ಹಣ್ಣು, ಕಾಯಿ, ತೂಗುತ್ತಿತ್ತು!
ಆಲೆ ಹಣ್ಣಿನಾ ರುಚಿಯು ಬಲು ನೆನೆದರೇನುಂಟು?
ಸಿಹಿ ಸಿಹಿ ನೆನಪುಗಳಿವೆ ಈಗೋಕೊಳ್ಳಿ…
ತಲೆ ತಲೆ ಮಾರಿನ, ಲೆಕ್ಕವೀಗ ಇತಿಹಾಸ!

ಸುತ್ತಳ್ಳೀ ಜನ, ಅರಳಿ ಮರವನ್ನೇ…
ತಲೆದಿಂಬು ಮಾಡಿ
ಗುಡಿ, ಚರ್ಚು, ಮಸೀದಿ ಮನೆ, ಮಠಗಳ ಬಿಟ್ಟು,
ಒಟ್ಟಿಗೆ ಕುಂತು… ಹೊಟ್ಟೆ ತುಂಬಾ… ಮಂಡಾಳುಕಾರ,
ಒಬ್ಬಟ್ಟು, ಮಿರ್ಚಿಭಜೆ, ಕೆನೆಮಸ್ರು, ಖಾರದ ಹಿಂಡಿ,
ಅಕ್ಕಿಬಾನ, ಹುಣೆಸೆತೊಕ್ಕು, ಕೆತ್ತು ತಿಂದು…
ದುಂಡಗೆ ಮಾತಿನಾಮಂಟಪ ಕಟ್ಟಿ,
ಕುಣಿಕುಣಿದಾ ದೀನವೀಗಾ, ಗತ ವೈಭವವಿಲ್ಲಿ!!

ಎಲ್ಲಿ ಹೋದವೋ… ಆ ದಿನಗಳೂ?!
ಬಟ್ಟು, ದಮ್ಮಿಡಿ, ಆಣೆ, ಅರ್ಧಾಣೆ…
ಇನ್ನೆಲ್ಲಿ ಹುಡುಕಲಿನ್ನಾ…ಽಽ ಸೇರು, ಅಚ್ಫೇರು, ಗಿದ್ನಾ, ಪಾವುಗಳನ್ನಾ…
‘ಅಂಥಾ ಮುತ್ತಿನಂಥಾ ಜನಗಳನ್ನಾಽಽ…??’
ಈಗ ಪೆರ್‍ಲಾಜ್ಜನಿಲ್ಲ!… ಮರವಿಲ್ಲ!
ವರವಾಗಿ, ನೆನಪುಗಳಿವೆ ಕೊಳ್ಳಿ…!!
ಹಳ್ಳಿಯೆಂದರೆ: ಕೊಳ್ಳಿ! ಕಳ್ಳಿಯಂಗೆ ಸಿಕ್ಕಿದಂಗೆಲ್ಲ ಹಬ್ಬಿದಾ ಮಳ್ಳಿ!
ಪ್ರಗತಿಯ ಹೆಸರಲಿ:
ಹಸಿರು ಕಡಿದು, ಉಸಿರು ತಡೆದು,
ಬರ ಹಡೆದು, ಸರಣಿ ಸ್ಫೋಟಾ, ಏಡ್ಸ್, ಹಾರ್ಟು, ಸಕ್ಕರೆ, ಬೀಪಿ,-
ಒತ್ತಡಕ್ಕೆ, ಪೀಪಿ ಹರಿದಾಪಾಪಿಗಳಿಲ್ಲಿ.
ಐಟಿ; ಬೀಟಿ, ಆಧುನಿಕರಣದ ಬೇಟೆಗೆ,
‘ಕೊಳ್ಳು ಬಾಕು’ ಸಂಸ್ಕೃತಿಗೆ-
ಗರಗರನೇ, ಗಿರಗಿರನೇ… ತಿರಗುವಾ ‘ಗಿರಗಿಟ್ಟೆ’ಯಾಗಿ,
ಮನೆ ಮನೆಯೆಲ್ಲ…
ಜನಾಮನವೆಲ್ಲ…
ಹಳ್ಳಿ ಹಳ್ಳಿಯೆಲ್ಲ ಖಾಲಿ ಖಾಲಿ…
ಎಲ್ಲೆಲ್ಲೋ… ಆತಂಕದಾ ಸೀಮೆ ಜಾಲಿ…!!
ಊರು ಹಬ್ಬಕೆ- ‘ಮಾರಿ ಹಬ್ಬ’ವ ಮಾಡಿ,
ನಾರಿಯರೆಲ್ಲ… ನಾರು ಮಡೀಲೆ, ಹಸಿರು ತೋರಣ, ಸಿಂಗಾರ ಮಾಡಿ,
ಘಮ ಘಮ ‘ಸಳ್ಳೆಪಲ್ಲೆ’, ಅಕ್ಕಿದಾನ ಉಂಡು-
‘ದಢಮ್ಮ ಧಡಿಕೆ’ಯಾಡಿದ ನೆನಪೀಗ, ಹಾಳು ಹಂಪಿಯಾಗಿದೆ!
ಈ ಊರು ಕೇರಿ,
ಈ ಹಾದಿ ಬೀದಿ,
ಈ ಗಂಡು ಹೆಣ್ಣು,
ಒಟ್ಟಿಗಿದ್ದ ಆ ನಂಟೂ…
ಈಗೆಲ್ಲಿದೆ ಅಂಥಾ ಅಂಟು?!
ಹಾಲಿನಂಥಾ ನಮ್ಮೂರ, ಬೆಳದಿಂಗಳ ಬೆಳಕಲಿ,
ಇರುಳೆಲ್ಲ ‘ಬಗಾಟುಬಗ್ರಿ’ ‘ಪರಂಗಿ ಪೀಪಿ’ ಆಡಿದಾ ಅಂಗಳದಿ,
ಕಾಂಕ್ರಿಟ್ ಗೋಡೆಗಳೆದ್ದು,
ಮೈಯೆಲ್ಲ ತಂತಿ ಬೇಲಿಯಂದದಿ-
ಮೋಬೆಲ್ ಸರಪಳಿಗಳು!!
ಬೋರು ಬೋರಾಡಿ ಅತ್ತರೂ…
ಹೆಣಯೆತ್ತಲು ನಾಲ್ಕು ಜನರಿಲ್ಲ!
ಕೂಗಿ ಬೊಬ್ಬಿಟ್ಟರೂ ಕದ ತೆಗೆದು ‘ಸೊಪ್ಪೆನ್ನು’ವವರಿಲ್ಲ!
ಮನೆ ಮಂದಿಯೆಲ್ಲ, ಮಾಯಾ ಪೆಟ್ಟಿಗೆ ಮುಂದೇಮುಪ್ಪು!!
ಬದುಕೆಲ್ಲ ಮೂರು ಕಣ್ಣಿನಾ ಚಿಪ್ಪು
ಯಾರು ಅಳಲಿಲ್ಲ…?
ಯಾರು ಕೇಳರಿಲ್ಲಿ?!
ಯಾರಿಗೆ ಯಾರು?
ಮೂರು ದಿನದ ಸಂಸಾರ…
ಯಾವ ಪುರುಷಾರ್ಥಕೆ ಈ ಜನರೋ??
ಮನ ಕಲಕಿದೆ!
ದಿನವೆಲ್ಲ…!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...