Home / ಕಥೆ / ಜನಪದ / ಹೂಂ ಅಂದರೆ ಒಂದೇ ಉಂಡಿ

ಹೂಂ ಅಂದರೆ ಒಂದೇ ಉಂಡಿ

ಚಿತ್ರ: ಸರಿನಾ
ಚಿತ್ರ: ಸರಿನಾ

ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ”
ಎಂದಳು ಹೆಂಡತಿ.

“ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎಂದು ಗಂಡನವಾದ.

ಒಂದು ತಾಸು ಜಗಳಾಡಿದರು. ಯಾರೂ ಉಣ್ಣಲಿಲ್ಲ. ಕಡೆಯಲ್ಲಿ ಒಂದು ನಿರ್ಧಾರಕ್ಕೆ ಬಂದರು – “ಯಾರು ಹೂಂ ಅಂತಾರೊ ಅವರು ಒಂದು
ತಿನ್ನಬೇಕು. ಸುಮ್ಮನೆ ಮನಗಿದವರಿಗೆ ಎರಡು.”

ನಾಯಿ ಬಂದು ಮಾಲಾದಿ ತಿನ್ನ ಹತ್ತಿತು. ನಾಯಿಯನ್ನು ಹೊಡೆಯುವರಾರು? ಹೊಡೆದರೆ ಹೂಂ ಅನ್ನಬೇಕಾಗುತ್ತದೆ. ಹೂಂ ಅಂದವರಿಗೆ ಒಂದಽ ಉಂಡಿ. ಅದಕ್ಕಾಗಿ ಅವನೂ ಹೂಂ ಅನಲಿಲ್ಲ. ಅವಳೂ ಹೂಂ ಅನಲಿಲ್ಲ. ಹಾಗೇ ಮಲಗಿದರು.

ಹೊತ್ತು ಹೊರಟಿತು. ಸೂರ್ಯನು ಮಾರು ಮೇಲೆ ಏರಿ ಬಂದನು. ಅವರ ಮುಚ್ಚಿದ ತಟ್ಟಿ ಮುಚ್ಚಿದ ಹಾಗೆಯೇ ಇತ್ತು. ನೆರೆಹೊರೆಯವರು ತಟ್ಟಿ
ಬಡಿದರು. ಹೂಂ ಅನಲಿಲ್ಲ; ಹಾಂ ಅನಲಿಲ್ಲ. ನಾಲ್ಕು ಮಂದಿ ನೆರೆದರು. ತಟ್ಟಿ ಮುರಿದರು. ಒಳಗೆ ಹೊಕ್ಕರು. ಇಬ್ಬರಿಗೂ ಮಾತಾಡಿಸಿ ನೋಡಿದರು. ಅಗಳಾಡಿಸಿ ನೋಡಿದರು. ಮಿಸುಕಲೇ ಇಲ್ಲ ಯಾರೂ.

ಇಬ್ಬರೂ ಸತ್ತಿದ್ದಾರೆಂದು ನಿರ್ಧರಿಸಿ ಕುಳ್ಳುಕಟ್ಟಿಗೆಗಳನ್ನು ಹೊತ್ತೊಯ್ದು ಸುಡುಗಾಡಿನಲ್ಲಿ ಒಗೆದು ಬಂದರು. ಇಬ್ಬರನ್ನೂ ನಾಲ್ಕು ನಾಲ್ಕು ಜನ ಹೊತ್ತರು.
ಇಬ್ಬರೊಳಗಾರೂ ಹೂಂ ಅನಲಿಲ್ಲ. ಹೂಂ ಅಂದರೆ ಒಂದೇ ಉಂಡಿ ಅಲ್ಲವೇ?

ಕುಳ್ಳು ಕಟ್ಟಿಗೆಯ ತಾಳಿಯ ಮೇಲೆ ಹೆಣ ಒಗೆದರು. ಉರಿ ಹಚ್ಚಿದರು. ಚೌಕೀದಾರನನ್ನು ಅಲ್ಲಿ ನಿಲ್ಲಿಸಿ ಮಂದಿಯೆಲ್ಲ ತಂತಮ್ಮ ಮನೆಗೆ ಹೋದರು.
ಬೆಂಕಿ ಹೊತ್ತಿದಂತೆ ಮೈಯೆಲ್ಲ ಸುಡುತ್ತ ಬಂತು. ಇಬ್ಬರಲ್ಲಿ ಒಬ್ಬರೂ ಸೋಲಲಿಲ್ಲ. ಕಿರಿ ಬೆರಳೊಂದು ಛಟ್ ಎಂದು ಸಿಡಿದು ಬಂದು ಬಿತ್ತು. “ಥೂ ! ನೀನೇ ಎರಡು ಉಂಡಿ ತಿನ್ನು” ಎಂದನು ಗಂಡ. ಮೈಮೇಲಿನ ಬಟ್ಟೆಬರೆಗಳೆಲ್ಲ ಸುಟ್ಟಿದ್ದರಿಂದ ಇಬ್ಬರೂ ಬರಿ ಬತ್ತಲೆಯೇ ಜಿಗಿದು ಕಡೆಗೆ ಬಂದರು. “ದೆವ್ವ ಬಂದವೆಂದು ಚೌಕಿದಾರ ಓಡಿಹೋದನು.

ಊರ ಗೌಡನು ತನ್ನ ಅರಿವೆ ಒಗೆದು ತರಲಿಕ್ಕೆ ಅಗಸನಿಗೆ ಹೇಳಿದನು. ಆದರೆ ಅಗಸನು ಹಳ್ಳಕ್ಕೆ ಹೋಗಲು ಸಿದ್ದನಾಗಲಿಲ್ಲ. ಹಳ್ಳದ ದಂಡೆಯಲ್ಲಿಯೇ
ಸುಡುಗಾಡು ಇತ್ತು. ದೆವ್ವ ಬೆನ್ನುಹತ್ತುವವೆಂದು ಚೌಕಿದಾರನು ಉರಲ್ಲೆಲ್ಲ ಹೇಳಿದ್ದನು. ಗೌಡನು ಅಗಸನಿಗೆ ಒತ್ತಾಯದಿಂದ ಅರಿವೆಗಳನ್ನು ಕೊಟ್ಟು ತಾನೂ ಕುದುರೆ ಹತ್ತಿ ಬೆನ್ನ ಹಿಂದೆ ಹೋದನು. ಬಟ್ಟಿ ಒಗೆದು ದಡದಲ್ಲಿ ಒಣಹಾಕಲಾಯಿತು. ಆ ಬಟ್ಟೆಗಳನ್ನು ತೆಗೆದುಕೊಳ್ಳಲು ಇಬ್ಬರೂ ಆ ಗಂಡಹೆಂಡತಿ ಓಡುತ್ತ ಬಂದರು.

“ಅಯ್ಯಯ್ಯೋ ದೆವ್ವ ಹಿಡಿಯುತ್ತವೆ” ಎನ್ನುತ್ತ ಅಗಸ ಮತ್ತು ಗೌಡ ಇಬ್ಬರೂ ಓಡಿದರು. ಅಂದು ಆ ಗಂಡ ಹೆಂಡತಿ ಅಗಸನ ಬಟ್ಟೆ ಹಾಕಿಕೊಂಡು ಬಂದಂದಿನಿಂದ ಹಾರುವರು, ಲಮಾಣಿಗರಾದರಂತೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...