Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...