Home / ಕವನ / ಕವಿತೆ / ಸಾಕು ಮಾಡೋಣ

ಸಾಕು ಮಾಡೋಣ

ಪುರಾಣ ಪುಣ್ಯಕಥೆಗಳ ಮಿಥ್ಯಾಲಾಪಗಳು ಇನ್ನು ಸಾಕು
ಮುಗಿಲ ಮಲ್ಲಿಗೆಗಳ ಮೂಸುವ ಭ್ರಮೆ ಇನ್ನು ಸಾಕು,
ಕಾಣದುದರ ಕೈಕಾಲುಗಳಿಗೆ ಜೋತಾಡಿ
ಕರ್ರಗೆ ಕಲೆಕಲೆ ಮಾಡಿದ್ದ ಕಂತೆಗಳು ಇನ್ನು ಸಾಕು

ಇದೋ ನೋಡಿ ನಿಮ್ಮ ಮುಂದಿರುವುದು
ಪುಣ್ಯ ಗಣ್ಯ ಭೂಮಿ ಭಾರತವಲ್ಲ
ಹಂದೆಗಳ ಹಡೆಯುವ ದಾರಿದ್ರ್ಯ ದಳ್ಳುರಿಯ
ಆತ್ಮಘಾತಕತನದ ಗಟಾರಮತಿಗಳ ಒಣನೆಲವಾಗಿದೆ.
ನಾವೀಗ ನಿಜವನರಿಯದ ಕೂಪಮಂಡೂಕಗಳು
ಹಲವು ಹಲ್ಕಟ್ತನಗಳ ಮುಚ್ಚಿ ಆದರ್ಶ ಹಾಡುವವರು,
ಸಂಪನ್ನ ರಾಮರೊಳಗೆ ಹುದುಗಿರುವ ರಾವಣರು,
ಪತಿವ್ರತಾ ಮೇಕಪ್ಪಿನೊಳಗೆ ಮಿಡುಕುವ ಪತಿತೆಯರು,

ಜಗವನ್ನೇ ಬೆಳಗುವ ರವಿಕಿರಣಗಳು
ಈ ಒಣಕಾಡಿನೆಲೆಗಳಿಗೂ ಸೋಕವು
ನೆಲವ ಬೆಳಗುವುದನ್ನಂತು ಕೇಳಬೇಡ
ಇಲ್ಲಿಯ ಕಾಗೆ ಗೂಗೆಗಳಿಗೆ ಹೊಸಪಾಠ ಕಲಿಸಿದರೆ
ಅವು ಕೂಗುವುದು ಮತ್ತದೇ ಕಾಕಾ ಗೂಗೂ
ಇಲ್ಲಿಯ ನಾಯಿಗಳಿಗೆ ಹೊಸ ಶಾಸ್ತ್ರ ಕಲಿಸಿದರೆ
ಅವು ಊಳಿಡುವುದು ಮತ್ತದೇ ಬೌಬೌ
ನವ ವೇಷ ಭೂಷಣಗಳೊಳಗೆ
ಅದೇ ಪಾಚಿಗಟ್ಟಿದ ಭೂತಬುದ್ಧಿ,

ಯಾವ ಹೊಸಗಾಳಿಗೂ ಮೈತೆರೆಯದ ಹಳಸಲು ಬಾವಿ ಇದು
ಯಾವ ಹೊಸ ಪ್ರಭಾವಗಳಿಗೂ ಪಕ್ಕಾಗದ ಮೋಟು ಮರವಿದು
ಯಾವ ಹೊಸ ಬೀಜವೂ ನಾಟದ ಕಗ್ಗಲ್ಲಿದು
ಇಲ್ಲಿಯವರೆಗೆ ವಿಧಿ ನಿಷೇಧಗಳ
ಋಣಮಾರ್ಗದಲ್ಲಿ ನಡೆದದ್ದಾಯಿತು
ಹುಲಿ ಹಲ್ಲು ಕಿತ್ತು ಆಕಳ ಮಾಡುವ ಯತ್ನ ನಡೆಯಿತು
ಆಡುವ ಬಾಲಕನ ಕೈಕಾಲು ಕಟ್ಟಿ ಮೂಲೆ ಹಿಡಿಸಿದ್ದಾಯಿತು
ಹರಿವ ನಾಲಗೆಯ ಕತ್ತರಿಸಿ, ಉರಿವಗ್ನಿಯ ಮೇಲೆ ತಣ್ಣೀರು
ಸುರುವಿ
ಕಡಿವ ಕತ್ತಿಯನು ಬಂಡೆಗೆ ಹೊಡೆದು ಮೊಂಡಾಗಿಸಿ
ಜೀವಚ್ಛವವಾದೆವು
ಭಕ್ತಿಯ ಬೋಳೆತನ, ಅಹಿಂಸೆಯ ಹೇಡಿತನ, ಸ್ವರ್ಗದ
ದುರ್ಮಾರ್ಗತನ,
ಬ್ರಹ್ಮಚರ್ಯದ ಭಾನಗಡಿತನ, ಯೋಗದ ಗಂಡುಜೋಗತಿತನ,
ಇವನ್ನೆಲ್ಲ ಇನ್ನಾದರೂ ಸಾಕು ಮಾಡೋಣ
ಚೆನ್ನಾಗಿ ಉಳುವ-ಬೆಳೆವ, ಚೆನ್ನಾಗಿ ಉಣ್ಣುವ-ಉಡುವ,
ಮೈತುಂಬ ಕೆಲಸ ತುಂಬಿ ಕಾಯ ಕಲ್ಲಾಗಿಸುವಾ,
ಮನ ತುಂಬ ಸೊಗವುಂಡು ಭಾವಪೂರ ಹರಿಸುವಾ,

ನಮ್ಮ ಬೆನ್ನಿಗಂಟಿದ ಹೊಟ್ಟೆ ತುಂಬಿಸಿ ತೇಗುವ,
ಕಣ್ತುಂಬ ನಿದ್ರಿಸಿ ಪುನರ್ಜನ್ಮವನಣಕಿಸುವ
ಇಹ ಸಾರ್ಥಕತೆಯ ಧನಮಾರ್ಗ ಹಿಡಿಯೋಣ
ಎಲ್ಲಿ ಬೇಡದು ಕೂಡದು ಬಾರದುಗಳು ಬಂಧಿಸವೋ
ಎಲ್ಲಿ ಬೇಕು ಮಾಡು ಕೂಡುನಲಿಯುವಿಕೆಗಳು
ತಂತಾವೇ ಆಳುವುವೋ
ಹಾಗೆಯೇ ಬಾಳೋಣ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...