Home / ಕವನ / ಕವಿತೆ / ಮಾತು ಕೇಳದ ಮಾತುಗಳು

ಮಾತು ಕೇಳದ ಮಾತುಗಳು

ಈ ಮಾತುಗಳು ಮಾತೇ ಕೇಳಲೊಲ್ಲವು
ಮೊಳಕೆ ಒಡೆಯಲೊಲ್ಲವು
ಚಿಗುರಿ ಹೂತು ಕಾತು ಹಣ್ಣಾಗುವುದಂತೂ
ದೂ…ರ

ಷಂಡವಾಗಿವೆ ಮಾತು ಜೊಳ್ಳು ಬೀಜದಂತೆ
ಸಂತಾನ ಶಕ್ತಿಯೇ ಇಲ್ಲ
ಬರೀ ಬೆಂಕಿಯಲ್ಲಿ ತುಪ್ಪ ಹೊಯ್ದು
ಹೊಗೆ ಎಬ್ಬಿಸಿದಂತೆ
ಮಿಥ್ಯಾ ಮಾಯಾಬ್ರಹ್ಮದ ಮಂಜು
ಮೇಲೆ ಮುಚ್ಚಿದಂತೆ
ಹೊಗೆಯಲ್ಲಿ ಸ್ವರ್ಗದ ದೇವತೆಗಳು
ಬ್ರಹ್ಮ ವಿಷ್ಣು ಮಹೇಶ್ವರರು ಅಪ್ಸರೆಯರು
ತೇಲಾಡುತ್ತಿವೆ ಹೆಣ ಮೋಡಗಳಂತೆ

ಭಂಡವಾಗಿವೆ ಮಾತು
ಜೀವ ಇಲ್ಲ ಭಾವ ಇಲ್ಲ
ಗರ್ಭ ಗುಡಿಯಲ್ಲಿ ಹೂತು
ಮಂತ್ರ ಮಣ ಮಣ ಗಂಟೆ ಗಣ ಗಣ
ಗಟ್ಟಿಸಿಕೊಂಡಂತೆ ಬಂಡೆಗೆ ಮಂಡೆ
ಮತ್ತೆ ಮತ್ತೆ ಗುಡಿ ಕಟ್ಟುತ್ತಿವೆ
ಬೊಜ್ಜು ಬೆಳೆಯುತ್ತಿವೆ
ಕಮರುಡೇಗಿನಂತೆ ಮಾತು

ಮೊಂಡಾಗಿವೆ ಮಾತು ಏನನ್ನೂ ಚುಚ್ಚಲಾರವು
ಮರ್ಮಕ್ಕೆ ನಾಟಲಾರವು
ಮತ್ತೆ ಅದೇ ಆದೇ ಸುಪ್ರಭಾತ ಪಾಪ ಪುಣ್ಯ
ಸ್ವರ್ಗ ನರಕ ವೈರಾಗ್ಯ ಭಕ್ತಿ ಮುಕ್ತಿಗಳ
ಹಳೇ ಸವಕಲು ಪ್ಲೇಟು ಕಿರುಚಿದಂತೆ
ದಯೆಯೇ ಧರ್ಮ, ಅಹಿಂಸೆ, ಸತ್ಯಗಳ
ಉರುಳ ಕೊರಳಿಗೆ ಹಾಕಿ ಹಿಚುಕಿದಂತೆ

ಗುಳ್ಳೆಯಾಗಿವೆ ಮಾತು
ಭಾವ ಕವಿಗಳಂತೆ
ದೂರ ದೂರ ನಿಂತು ಪ್ರೀತಿ ಮಾಡುತ್ತವೆ
ಹತ್ತಿರ ಬಂದು ಅಪ್ಪಲಿಲ್ಲ
ಹಿಂಡಿ ರಸ ಹೀರಲಿಲ್ಲ

ಪರದೇಶಿ ಕಫ ಕೆಮ್ಮುಗಳ ವಾಂತಿ ಹರಡಿ
ನವ್ಯವಾದ ಕ್ಯಾನ್ಸರ್ ಏಡ್ಸ್ ರೋಗಗಳು
ಚಿಕನ್ ಗುನ್ಯಾ ಢೆಂಗೆ ಜ್ಜರಗಳು
ಅಕಾಡೆಮಿಗಳಿಗೆ ಏಣಿಯಾಗುತ್ತಿವೆ
ಪ್ರಾಧಿಕಾರ ಪ್ರಶಸ್ತಿಗಳಿಗೆ
ಜ್ಞಾನ ಪೀಠಗಳಿಗೆ ಲಗ್ಗೆ ಹಾಕುತ್ತಿವೆ

ಮಾತಿನಂಗಡಿಗಳು ವಿದ್ಯಾ-ಲಯಗಳಲ್ಲಿ
ತರ್ಕಗಳು ತಿಕ್ಕಾಡಿ ಮಣ್ಣು ಕಸ ಮುಕ್ಕಾಡಿ
ಜಾನಪದ ನೆಕ್ಯಾಡಿ
ತೊಟ್ಟಿಳಲ್ಲಿ ಕಾಗದದ ಉಂಡೆ ಉಂಡೆ
ಅದಕ್ಕೆ ಬೆಂಕಿ ಹಚ್ಚಿ ಕಾಯಿಸಿಕೊಳ್ಳುತ್ತಾರೆ
ಬೇಳೆ ಬೇಯಿಸಿಕೊಳ್ಳುತ್ತಾರೆ ಹಲವರು

ಪೊಳ್ಳಾಗಿವೆ ಮಾತು ರಾಜಕಾರಣಿಗಳಿಗೆ
ದೇಶ ಲೂಟಿ ಮಾಡಿಕೊಳಲು ಹಡದಿ ಹಾಸುತ್ತವೆ
ಹಾದರಕ್ಕೆ ಗುರಿಯಾಗಿವೆ ಮಾತು
ಕಂಡ ಭಂಡರಿಗೆಲ್ಲ ಸೆರಗು ಹಾಸುತ್ತಿವೆ

ಜೊಳ್ಳಾಗಿವೆ ಮಾತು
ನಯವಂಚಕರ ನಮಸ್ಕಾರ ಚಮತ್ಕಾರಗಳ
ಸರ ಪೋಣಿಸಿ ಕೊರಳಿಗೆ ಹಾಕಿಕೊಂಡು
ಲಂಚ ಮಂಚದ ಮೇಲೆ ಹಾಯಾಗಿ
ಮಲಗುತ್ತಿವೆ ಮುಲುಗುತ್ತಿವೆ

ಬಂಡವಾಳವಾಗಿವೆ ಮಾತು
ಬುದ್ಧ, ಬಸವ ಸರ್ವಜ್ಞರನ್ನು
ಗಾಂಧಿ ವಿವೇಕಾನಂದರನ್ನು
ಹರಾಜಿಗೆ ಹಾಕಲು

ಇಷ್ಟಿಷ್ಟೆ ಅವರ ಹರಿದು ತಿನ್ನುತ್ತ
ತಮ್ಮ ಪೀಠಗಳ ಬಲಿಸಿಕೊಳ್ಳಲು
ಕುತ್ತಿಗೆ ಮಟ ಗಳಿಸಿಕೊಳ್ಳಲು

ಆಕ್ರಂದನ ಮಾಡುತ್ತಿವೆ ಮೇಲೆ ಆತ್ಮಗಳು
ಪರದೇಶಿಗಳಾಗಿ
ಇದ್ದ ದೇಶದಲ್ಲೆ – ಈ ದೇಶದಲ್ಲೆ
*****

Tagged:

Leave a Reply

Your email address will not be published. Required fields are marked *

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...