Home / ಕವನ / ಕವಿತೆ / ಮಾತು ಕೇಳದ ಮಾತುಗಳು

ಮಾತು ಕೇಳದ ಮಾತುಗಳು

ಈ ಮಾತುಗಳು ಮಾತೇ ಕೇಳಲೊಲ್ಲವು
ಮೊಳಕೆ ಒಡೆಯಲೊಲ್ಲವು
ಚಿಗುರಿ ಹೂತು ಕಾತು ಹಣ್ಣಾಗುವುದಂತೂ
ದೂ…ರ

ಷಂಡವಾಗಿವೆ ಮಾತು ಜೊಳ್ಳು ಬೀಜದಂತೆ
ಸಂತಾನ ಶಕ್ತಿಯೇ ಇಲ್ಲ
ಬರೀ ಬೆಂಕಿಯಲ್ಲಿ ತುಪ್ಪ ಹೊಯ್ದು
ಹೊಗೆ ಎಬ್ಬಿಸಿದಂತೆ
ಮಿಥ್ಯಾ ಮಾಯಾಬ್ರಹ್ಮದ ಮಂಜು
ಮೇಲೆ ಮುಚ್ಚಿದಂತೆ
ಹೊಗೆಯಲ್ಲಿ ಸ್ವರ್ಗದ ದೇವತೆಗಳು
ಬ್ರಹ್ಮ ವಿಷ್ಣು ಮಹೇಶ್ವರರು ಅಪ್ಸರೆಯರು
ತೇಲಾಡುತ್ತಿವೆ ಹೆಣ ಮೋಡಗಳಂತೆ

ಭಂಡವಾಗಿವೆ ಮಾತು
ಜೀವ ಇಲ್ಲ ಭಾವ ಇಲ್ಲ
ಗರ್ಭ ಗುಡಿಯಲ್ಲಿ ಹೂತು
ಮಂತ್ರ ಮಣ ಮಣ ಗಂಟೆ ಗಣ ಗಣ
ಗಟ್ಟಿಸಿಕೊಂಡಂತೆ ಬಂಡೆಗೆ ಮಂಡೆ
ಮತ್ತೆ ಮತ್ತೆ ಗುಡಿ ಕಟ್ಟುತ್ತಿವೆ
ಬೊಜ್ಜು ಬೆಳೆಯುತ್ತಿವೆ
ಕಮರುಡೇಗಿನಂತೆ ಮಾತು

ಮೊಂಡಾಗಿವೆ ಮಾತು ಏನನ್ನೂ ಚುಚ್ಚಲಾರವು
ಮರ್ಮಕ್ಕೆ ನಾಟಲಾರವು
ಮತ್ತೆ ಅದೇ ಆದೇ ಸುಪ್ರಭಾತ ಪಾಪ ಪುಣ್ಯ
ಸ್ವರ್ಗ ನರಕ ವೈರಾಗ್ಯ ಭಕ್ತಿ ಮುಕ್ತಿಗಳ
ಹಳೇ ಸವಕಲು ಪ್ಲೇಟು ಕಿರುಚಿದಂತೆ
ದಯೆಯೇ ಧರ್ಮ, ಅಹಿಂಸೆ, ಸತ್ಯಗಳ
ಉರುಳ ಕೊರಳಿಗೆ ಹಾಕಿ ಹಿಚುಕಿದಂತೆ

ಗುಳ್ಳೆಯಾಗಿವೆ ಮಾತು
ಭಾವ ಕವಿಗಳಂತೆ
ದೂರ ದೂರ ನಿಂತು ಪ್ರೀತಿ ಮಾಡುತ್ತವೆ
ಹತ್ತಿರ ಬಂದು ಅಪ್ಪಲಿಲ್ಲ
ಹಿಂಡಿ ರಸ ಹೀರಲಿಲ್ಲ

ಪರದೇಶಿ ಕಫ ಕೆಮ್ಮುಗಳ ವಾಂತಿ ಹರಡಿ
ನವ್ಯವಾದ ಕ್ಯಾನ್ಸರ್ ಏಡ್ಸ್ ರೋಗಗಳು
ಚಿಕನ್ ಗುನ್ಯಾ ಢೆಂಗೆ ಜ್ಜರಗಳು
ಅಕಾಡೆಮಿಗಳಿಗೆ ಏಣಿಯಾಗುತ್ತಿವೆ
ಪ್ರಾಧಿಕಾರ ಪ್ರಶಸ್ತಿಗಳಿಗೆ
ಜ್ಞಾನ ಪೀಠಗಳಿಗೆ ಲಗ್ಗೆ ಹಾಕುತ್ತಿವೆ

ಮಾತಿನಂಗಡಿಗಳು ವಿದ್ಯಾ-ಲಯಗಳಲ್ಲಿ
ತರ್ಕಗಳು ತಿಕ್ಕಾಡಿ ಮಣ್ಣು ಕಸ ಮುಕ್ಕಾಡಿ
ಜಾನಪದ ನೆಕ್ಯಾಡಿ
ತೊಟ್ಟಿಳಲ್ಲಿ ಕಾಗದದ ಉಂಡೆ ಉಂಡೆ
ಅದಕ್ಕೆ ಬೆಂಕಿ ಹಚ್ಚಿ ಕಾಯಿಸಿಕೊಳ್ಳುತ್ತಾರೆ
ಬೇಳೆ ಬೇಯಿಸಿಕೊಳ್ಳುತ್ತಾರೆ ಹಲವರು

ಪೊಳ್ಳಾಗಿವೆ ಮಾತು ರಾಜಕಾರಣಿಗಳಿಗೆ
ದೇಶ ಲೂಟಿ ಮಾಡಿಕೊಳಲು ಹಡದಿ ಹಾಸುತ್ತವೆ
ಹಾದರಕ್ಕೆ ಗುರಿಯಾಗಿವೆ ಮಾತು
ಕಂಡ ಭಂಡರಿಗೆಲ್ಲ ಸೆರಗು ಹಾಸುತ್ತಿವೆ

ಜೊಳ್ಳಾಗಿವೆ ಮಾತು
ನಯವಂಚಕರ ನಮಸ್ಕಾರ ಚಮತ್ಕಾರಗಳ
ಸರ ಪೋಣಿಸಿ ಕೊರಳಿಗೆ ಹಾಕಿಕೊಂಡು
ಲಂಚ ಮಂಚದ ಮೇಲೆ ಹಾಯಾಗಿ
ಮಲಗುತ್ತಿವೆ ಮುಲುಗುತ್ತಿವೆ

ಬಂಡವಾಳವಾಗಿವೆ ಮಾತು
ಬುದ್ಧ, ಬಸವ ಸರ್ವಜ್ಞರನ್ನು
ಗಾಂಧಿ ವಿವೇಕಾನಂದರನ್ನು
ಹರಾಜಿಗೆ ಹಾಕಲು

ಇಷ್ಟಿಷ್ಟೆ ಅವರ ಹರಿದು ತಿನ್ನುತ್ತ
ತಮ್ಮ ಪೀಠಗಳ ಬಲಿಸಿಕೊಳ್ಳಲು
ಕುತ್ತಿಗೆ ಮಟ ಗಳಿಸಿಕೊಳ್ಳಲು

ಆಕ್ರಂದನ ಮಾಡುತ್ತಿವೆ ಮೇಲೆ ಆತ್ಮಗಳು
ಪರದೇಶಿಗಳಾಗಿ
ಇದ್ದ ದೇಶದಲ್ಲೆ – ಈ ದೇಶದಲ್ಲೆ
*****

Tagged:

Leave a Reply

Your email address will not be published. Required fields are marked *

ಪೆಟ್ರೋಲ್ ವಾಸ್ನೆ ಮೂಗಿಗೆ “ಗಫ್” ಅಂತಾ ಬಡೀತು! ಐದಾರು ಕ್ಯಾನ್‌ಗಟ್ಟಲೆ ಮನೆ ಸುತ್ತಮುತ್ತ ಉಗ್ಗಿ ಬಾಗಿಲು ಕಿಟಕಿ ಸಂಧಿನಿಂದ ಧುಭುಧುಭು – ಪೆಟ್ರೋಲ್ ಸುರಿವಿದ ತೀರಿಗೆ ಅದು ಹಳ್ಳ ಕೊಳ್ಳವಾಗಿ ಮನೆಯೊಳಕ್ಕೆ ಜಗ್ಗಿ ಹರಿದು ಬಂತು! ಮಲಗಿದ್ದ ಹಾಸಿಗೆ, ದಿಂಬು, ಹೊ...

ಭಾಗ ೧ ಒಂದು ಯುನಿವರ್ಸಿಟೀನಲ್ಲಿ ಆಧ್ಯಾಪಕನಾಗಿರುವ ನಾನು ಕ್ಯಾಂಪಸ್ ಆವರಣದೊಳಗೇ ಇರುವ ಫ್ಲಾಟೊಂದರಲ್ಲಿ ಹೆಂಡತಿ ಮಕ್ಕಳ ಜತೆ ಮನೆ ಮಾಡಿಕೊಂಡಿದ್ದೇನೆ. ಮನೆ ಮತ್ತು ಆಫೀಸಿಗೆ ಹೆಚ್ಚೇನೂ ದೂರವಿಲ್ಲದ ಕಾರಣ ವಾಹನಗಳಿಗೆ ವೃಥಾ ಕಾಸು ಖರ್ಚು ಮಾಡಬೇಕಾದುದಿಲ್ಲ. ಮಧ್ಯಾಹ್ನ ಲಂಚಿಗೆ ಕೂಡ ಮನ...

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...