Home / ಕಥೆ / ಜನಪದ / ಶಿವರಾತ್ರಿ – ಪಾರಣೆ

ಶಿವರಾತ್ರಿ – ಪಾರಣೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ್ಲಿ ಫಲಾಹಾರ ಮಾಡಿದರು. ಮರುದಿನ ಹೊತ್ತು ಹೊರಡುವ ವೇಳೆಗೆ ಪಾರಣೆ. ಅದಕ್ಕಾಗಿ ಹಿಟ್ಟು, ಬೇಳೆ, ಬೆಲ್ಲ, ಅಕ್ಕಿಗಳನ್ನು ಸಾವರಿಸಿಟ್ಟಳು.

ಶಿವರಾತ್ರಿಯದಿನ ಇಡಿಯರಾತ್ರಿ ಮಹಾದೇವನ ಗುಡಿಯಲ್ಲಿ ನಡೆಯುವ ಭಜನೆಯಲ್ಲಿ ಭಾಗವಹಿಸಿಲು ಗಂಡನು ಹೊರಟನು “ನೀನೂ ಗುಡಿಗೆ ಬಂದುಬಿಡು ನನ್ನೊಡನೆ. ಭಜನೆ ಕೇಳುವಿಯಂತೆ. ಸಾಕಷ್ಟು ಹೆಣ್ಣು ಮಕ್ಕಳು ಬಂದಿರುತ್ತಾರೆ” ಎಂದು ಹೆಂಡತಿಗೆ ಹೇಳಲು, ಆಕೆ ಗಂಡನ ಬಿಡೆಯಕ್ಕಾಗಿ ಗುಡಿಗೆ ಹೋದಳು.

ಭಜನೆ ಆರಂಭವಾಗಿ ಒಳ್ಳೆಯ ಭರಕ್ಕೆ ಬರತೊಡಗಿತ್ತು. ಅಂಥ ಪ್ರಸಂಗದಲ್ಲಿ ಆಕೆಯ ಮನಸ್ಸು ಮನೆಯತ್ತ ಎಳೆಯತೊಡಗಿತು. ಬೇಕಾದಷ್ಟು ಫಲಾಹಾರ ಮಾಡಿದ್ದರೂ ಆಕೆಗೆ ಉಂಡಷ್ಟು ತೃಪ್ತಿಯಾಗಿರಲಿಲ್ಲ. ಹಸಿವೆಯೆನಿಸಹತ್ತಿದ್ದರಿಂದ ಮನೆಗೆ ಹೋಗಿ, ಏನಾದರೂ ಮಾಡಿಕೊಂಡು ತಿಂದು ಮಲಗಬೇಕೆಂದು ಯೋಚಿಸಿದಳು. “ಗಂಡನಂತೂ ಭಜನೆಯಲ್ಲಿ ಭಾಗಿಯಾಗಿದ್ದರಿಂದ ಅಡ್ಡಹೊತ್ತಿನಲ್ಲಿ ಮನೆಗೆ ಬರುವಂತಿಲ್ಲ. ಆದ್ದರಿಂದ ನನ್ನ ಉದ್ದೇಶವು ನಿರ್ಬಾಧವಾಗಿ ನೆರವೇರುತ್ತದೆ” – ಎಂದು ಎದ್ದು ಮನೆಯ ಹಾದಿ ಹಿಡಿದಳು. ಮನೆಗೆ ಬಂದವಳೇ ಒಲೆಹೊತ್ತಿಸಿ, ಭಾಂಡೆಯಲ್ಲಿ ಸಟ್ಟುಗವನ್ನು ಅಟ್ಟು, ಕೋಣಮಗಿಯಲ್ಲಿ ಆರಹಾಕಿದಳು. ತಾಬಾಣದಲ್ಲಿ ಅಷ್ಟಷ್ಟು ತೆಗೆದುಕೊಂಡು ತಿಂದರಾಯಿತೆಂದು. ತಾಬಾಣ ತೆಗೆದುಕೊಳ್ಳುವಷ್ಟರಲ್ಲಿ ಗುಡಿಯಿಂದ ಗಂಡ ಬಂದು. ಬಾಗಿಲು ತೆಗೆಯೆಂದು ಕೂಗಿದನು. ಹೆಂಡತಿ ಲಗುಬಗೆಯಿಂದ ಅದೆಲ್ಲವನ್ನೂ ಮುಚ್ಚಿಟ್ಟು ದಡದಡನೆ ಬಾಗಿಲಿಗೆ ಬಂದು ಕದ ತೆರೆದಳು.

“ಗುಡಿಯಿಂದ ತೀವ್ರವೇ ಬಂದುಬಿಟ್ಟೆಯಲ್ಲ ! ಏಕೆ ?” ಎಂದು ಕೇಳಿದನು ಗಂಡ.

ನನಗೇನು ತಿಳಿಯುವದೇ – ಹೊಳೆಯುವದೇ ? ಆದ್ದರಿಂದ ಬೇಸರವೆನಿಸಿತು. ಓಡಿ ಮನೆಗೆ ಬಂದೆ.”

“ಒಳ್ಳೆಯದೇ ಆಯಿತು. ಮಲಗಿಕೊಂಡುಬಿಡೋಣ ಹಾಗಾದರೆ” ಎಂದು ಗಂಡನು ಮಲಗುವದಕ್ಕೆ ಅಣಿಯಾದನು.

“ಅನಕಾ ಒಂದು ಕಥೇಯನ್ನಾದರೂ ಹೇಳಿರಿ” ಎಂದಳು ಹೆಂಡತಿ.

“ನಿದ್ದೆಯ ಹೊತ್ತಿನಲ್ಲಿ ಕಥೆ ಕೇಳಬೇಕನ್ನುವಳಲ್ಲ” ಎಂದು, ಬೇಸರದಿಂದ ಎಂಥದೋ ಕತೆಯನ್ನು ಹೇಳಲು ಆರಂಭಿಸಿದನು ಗಂಡ.

“ಕತ್ತಲದಾಗ ಕಡೋಡಿ, ಕೊಣಮಗ್ಯಾಗ ತೊಡೋಡಿ, ಸುಮ್ಮನೆ ಮನಗ ಬಿದ್ದೋಡಿ” ಎಂದು ಚೇಷ್ಟೆಯಿಂದಾಡಿದ ಲಲ್ಲೆಯನ್ನು ಕೇಳಿ ಹೆಂಡತಿ ಕಕ್ಕಾ ವಿಕ್ಕಿಯಾದಳು. “ಇವನಿಗೆ ಗೊತ್ತಾಗದಂತೆ ಮಾಡಿದ್ದೆಲ್ಲ ತಿಳಿದೇ ಬಿಟ್ಟಿದೆಯಲ್ಲ” ಎನ್ನುತ್ತ ತಾನು ಮಾಡಿದ್ದನ್ನೆಲ್ಲ ವಿವರಿಸಿದಳು-

“ಸುಳ್ಳೇಕೆ ಹೇಳಲಿ ? ಭಜನೆ ಕೇಳಬೇಕೆಂದರೆ ಹಸಿವೆ ಮನೆಯತ್ತ ಎಳೆದುತಂದು ಸಜ್ಜಿಗೆ ಮಾಡಿಸಿತು. ನೀವು ಬರುವಷ್ಟರಲ್ಲಿ ತಿಂದುಮುಗಿಸಿ, ಉಪವಾಸ ಮಾಡಿದವರಂತೆಯೇ ಮಲಗಿಬಿಟ್ಟು, ನೀವು ಬಂದಾಗ ಬಾಗಿಲು ತೆರೆಯಬೇಕೆಂದು ಯೋಚಿಸಿದ್ದೆ. ಆದರೆ ನಾನು ತಾಬಾಣ ಸಾವರಿಸುವಷ್ಟರಲ್ಲಿ ನೀವು ಬಂದೇ ಬಿಟ್ಟಿದ್ದರಿಂದ, ಮಾಡಿದ್ದನ್ನೆಲ್ಲ ಮುಚ್ಚಿಟ್ಟು ಓಡಿಬಂದು ಬಾಗಿಲು ತೆರೆದೆ, ನನ್ನದೇನಿದೆ ತಪ್ಪು ? ಹಸಿವೆ ತಾಳದೆ ಹೀಗೆ ಮಾಡಿದೆ. ನಿಮಗೆಲ್ಲ ತಿಳಿದೇ ಬಿಟ್ಟಿದೆಯಲ್ಲ ? ಹೊಟ್ಟೆಯಲ್ಲಿ ಹಾಕಿಕೊಳ್ಳಿರಿ” ಎಂದು ವಿನಯದಿಂದ ಕೇಳಿಕೊಂಡಳು.

ಗಂಡನು, ಅಂದು ರಾತ್ರಿ ಹೆಂಡತಿಯು ಮಾಡಿದ ಅಚಾತುರ್ಯವನ್ನೂ, ಮರುದಿನ ಬೆಳಗಾದ ಬಳಿಕ ಆಕೆ ಮಾಡಿದ ಸಜ್ಜಗೆಯನ್ನೂ ಆಕೆಯ ವಿನಂತಿಯನ್ನು ಮನ್ನಿಸಿ ಹೊಟ್ಟೆಯಲ್ಲಿ ಹಾಕಿಕೊಂಡನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...