Home / ಕವನ / ಕವಿತೆ / ಅಮ್ಮ ಸುಟ್ಟ ರೊಟ್ಟಿ

ಅಮ್ಮ ಸುಟ್ಟ ರೊಟ್ಟಿ

ಅಮ್ಮ
ಬೆಳಗೆದ್ದು
ರೊಟ್ಟಿ ಸುಡುವದೆಂದರೆ
ನಮಗೆ ಪಂಚಪ್ರಾಣ

ಕತ್ತಲು ತುಂಬಿದ ಗುಡಿಸಲಿಗೆ
ಒಲೆಯ ಬೆಂಕಿಯೇ ಬೆಳಕು
ಸುಟ್ಟು ಸುಟ್ಟು ಕರ್‍ರಗಾದ
ಬಿಳಿ ಮೂರು ಕಲ್ಲು
ಮೇಲೊಂದು ಕರ್‍ರಾನೆ ಕರಿ ಹೆಂಚು
ಒಲೆಯೊಳಗೆ ಹಸಿ ಜಾಲಿ
ಮುಳ್ಳು ಕಟ್ಟಿಗೆ ಒಟ್ಟಿ
ಹೊಗೆಯೊಳಗೆ ಉಸಿರು ಕಟ್ಟಿ
ಮನೆಯೊಳಗೆ ಉಸಿರೆರೆದವಳು

ಅಮ್ಮ, ಕಾಲು ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕೊಣಿಗೆಯಲಿ ಹಿಟ್ಟರವಿ
ಆಸೆಯ ಒಡ್ಡು ಕಟ್ಟಿ
ಹಗಲೆಲ್ಲ ದುಡಿದ ಮೈ ಬಸಿದ ಬೆವರು
ಹದಕೆ ಕಾಯಿಸಿದ ಎಸರು
ಸುರುವಿ ಓರೊಟೊರಟ ಕೈಯಿಲೆ
ಮೆತ್ತ ಮೆತ್ತಗೆ ಕಲಸಿ
ಗಾಲಿಯಂಗೆ ಗುಂಡಗೆ ನಣ್ಣನೆಯ
ಮೂರ್ತಿ ಮಾಡಿದವಳು

ಅಮ್ಮ, ಕೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಎದೆಯ ತುಡಿತಗಳ ಬಡಿತ
ಹದವಾಗಿ ಮೆದುವಾಗಿ
ಲಯಬದ್ಧವಾಗಿ ಹಿಟ್ಟ
ತಟ್ಟಿದರೆ ದುಂಡ ದುಂಡಗೆ
ಹುಣ್ಣಿಮೆಯ ಚಂದಿರ
ಕಾದ ಕರಿಹೆಂಚಿನ ಮೇಲೆ
ಆಕಡೀಕಡೆ ಸುಟ್ಟು
ಹೊಟ್ಟೆಗಿಟ್ಟು
ರಟ್ಟೆಗೆ ಬಲವ ಕೊಟ್ಟವಳು

ಅಮ್ಮ, ಮೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಜೀವ ಜೀವದ ಸಾರ
ಕುಸಿವೆಣ್ಣೆ ಒಣಕಾರ
ಈರುಳ್ಳಿ ಹಸಿಮೆಣಸು
ಬೆಳ್ಳುಳ್ಳಿ ಉಂಚೆತೊಕ್ಕು
ದಿನಕೊಂದು ಹೊಸ ರುಚಿಯು
ರೊಟ್ಟಿಯೊಳಗೇ ಸುತ್ತಿ
ಉಣಬಡಿಸಿ
ಸುತ್ತೇಳು ಲೋಕವ ತೋರಿದವಳು

ಅಮ್ಮ. ಜೀವ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕಟ್ಟಿಗೆಯೊಟ್ಪಗೆ ಸುಟ್ಟು
ಹೊಗೆಯೊಳಗೇ ಕುದ್ದು
ಹೆಂಚಂತೆ ಕಾದು
ರೊಟ್ಟಿಯಾಗಿ ಬೆಂದ
ಒಲೆಯ ಮುಂದಿನ ಅಮ್ಮನ ಮುಖ
ನಿಗಿ ನಿಗಿ ಕೆಂಡ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...