Home / ಕವನ / ಕವಿತೆ / ಅಮ್ಮ ಸುಟ್ಟ ರೊಟ್ಟಿ

ಅಮ್ಮ ಸುಟ್ಟ ರೊಟ್ಟಿ

ಅಮ್ಮ
ಬೆಳಗೆದ್ದು
ರೊಟ್ಟಿ ಸುಡುವದೆಂದರೆ
ನಮಗೆ ಪಂಚಪ್ರಾಣ

ಕತ್ತಲು ತುಂಬಿದ ಗುಡಿಸಲಿಗೆ
ಒಲೆಯ ಬೆಂಕಿಯೇ ಬೆಳಕು
ಸುಟ್ಟು ಸುಟ್ಟು ಕರ್‍ರಗಾದ
ಬಿಳಿ ಮೂರು ಕಲ್ಲು
ಮೇಲೊಂದು ಕರ್‍ರಾನೆ ಕರಿ ಹೆಂಚು
ಒಲೆಯೊಳಗೆ ಹಸಿ ಜಾಲಿ
ಮುಳ್ಳು ಕಟ್ಟಿಗೆ ಒಟ್ಟಿ
ಹೊಗೆಯೊಳಗೆ ಉಸಿರು ಕಟ್ಟಿ
ಮನೆಯೊಳಗೆ ಉಸಿರೆರೆದವಳು

ಅಮ್ಮ, ಕಾಲು ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕೊಣಿಗೆಯಲಿ ಹಿಟ್ಟರವಿ
ಆಸೆಯ ಒಡ್ಡು ಕಟ್ಟಿ
ಹಗಲೆಲ್ಲ ದುಡಿದ ಮೈ ಬಸಿದ ಬೆವರು
ಹದಕೆ ಕಾಯಿಸಿದ ಎಸರು
ಸುರುವಿ ಓರೊಟೊರಟ ಕೈಯಿಲೆ
ಮೆತ್ತ ಮೆತ್ತಗೆ ಕಲಸಿ
ಗಾಲಿಯಂಗೆ ಗುಂಡಗೆ ನಣ್ಣನೆಯ
ಮೂರ್ತಿ ಮಾಡಿದವಳು

ಅಮ್ಮ, ಕೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಎದೆಯ ತುಡಿತಗಳ ಬಡಿತ
ಹದವಾಗಿ ಮೆದುವಾಗಿ
ಲಯಬದ್ಧವಾಗಿ ಹಿಟ್ಟ
ತಟ್ಟಿದರೆ ದುಂಡ ದುಂಡಗೆ
ಹುಣ್ಣಿಮೆಯ ಚಂದಿರ
ಕಾದ ಕರಿಹೆಂಚಿನ ಮೇಲೆ
ಆಕಡೀಕಡೆ ಸುಟ್ಟು
ಹೊಟ್ಟೆಗಿಟ್ಟು
ರಟ್ಟೆಗೆ ಬಲವ ಕೊಟ್ಟವಳು

ಅಮ್ಮ, ಮೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಜೀವ ಜೀವದ ಸಾರ
ಕುಸಿವೆಣ್ಣೆ ಒಣಕಾರ
ಈರುಳ್ಳಿ ಹಸಿಮೆಣಸು
ಬೆಳ್ಳುಳ್ಳಿ ಉಂಚೆತೊಕ್ಕು
ದಿನಕೊಂದು ಹೊಸ ರುಚಿಯು
ರೊಟ್ಟಿಯೊಳಗೇ ಸುತ್ತಿ
ಉಣಬಡಿಸಿ
ಸುತ್ತೇಳು ಲೋಕವ ತೋರಿದವಳು

ಅಮ್ಮ. ಜೀವ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕಟ್ಟಿಗೆಯೊಟ್ಪಗೆ ಸುಟ್ಟು
ಹೊಗೆಯೊಳಗೇ ಕುದ್ದು
ಹೆಂಚಂತೆ ಕಾದು
ರೊಟ್ಟಿಯಾಗಿ ಬೆಂದ
ಒಲೆಯ ಮುಂದಿನ ಅಮ್ಮನ ಮುಖ
ನಿಗಿ ನಿಗಿ ಕೆಂಡ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...