Home / ಕವನ / ಕವಿತೆ / ಅಮ್ಮ ಸುಟ್ಟ ರೊಟ್ಟಿ

ಅಮ್ಮ ಸುಟ್ಟ ರೊಟ್ಟಿ

ಅಮ್ಮ
ಬೆಳಗೆದ್ದು
ರೊಟ್ಟಿ ಸುಡುವದೆಂದರೆ
ನಮಗೆ ಪಂಚಪ್ರಾಣ

ಕತ್ತಲು ತುಂಬಿದ ಗುಡಿಸಲಿಗೆ
ಒಲೆಯ ಬೆಂಕಿಯೇ ಬೆಳಕು
ಸುಟ್ಟು ಸುಟ್ಟು ಕರ್‍ರಗಾದ
ಬಿಳಿ ಮೂರು ಕಲ್ಲು
ಮೇಲೊಂದು ಕರ್‍ರಾನೆ ಕರಿ ಹೆಂಚು
ಒಲೆಯೊಳಗೆ ಹಸಿ ಜಾಲಿ
ಮುಳ್ಳು ಕಟ್ಟಿಗೆ ಒಟ್ಟಿ
ಹೊಗೆಯೊಳಗೆ ಉಸಿರು ಕಟ್ಟಿ
ಮನೆಯೊಳಗೆ ಉಸಿರೆರೆದವಳು

ಅಮ್ಮ, ಕಾಲು ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕೊಣಿಗೆಯಲಿ ಹಿಟ್ಟರವಿ
ಆಸೆಯ ಒಡ್ಡು ಕಟ್ಟಿ
ಹಗಲೆಲ್ಲ ದುಡಿದ ಮೈ ಬಸಿದ ಬೆವರು
ಹದಕೆ ಕಾಯಿಸಿದ ಎಸರು
ಸುರುವಿ ಓರೊಟೊರಟ ಕೈಯಿಲೆ
ಮೆತ್ತ ಮೆತ್ತಗೆ ಕಲಸಿ
ಗಾಲಿಯಂಗೆ ಗುಂಡಗೆ ನಣ್ಣನೆಯ
ಮೂರ್ತಿ ಮಾಡಿದವಳು

ಅಮ್ಮ, ಕೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಎದೆಯ ತುಡಿತಗಳ ಬಡಿತ
ಹದವಾಗಿ ಮೆದುವಾಗಿ
ಲಯಬದ್ಧವಾಗಿ ಹಿಟ್ಟ
ತಟ್ಟಿದರೆ ದುಂಡ ದುಂಡಗೆ
ಹುಣ್ಣಿಮೆಯ ಚಂದಿರ
ಕಾದ ಕರಿಹೆಂಚಿನ ಮೇಲೆ
ಆಕಡೀಕಡೆ ಸುಟ್ಟು
ಹೊಟ್ಟೆಗಿಟ್ಟು
ರಟ್ಟೆಗೆ ಬಲವ ಕೊಟ್ಟವಳು

ಅಮ್ಮ, ಮೈಯ್ಯಿ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಜೀವ ಜೀವದ ಸಾರ
ಕುಸಿವೆಣ್ಣೆ ಒಣಕಾರ
ಈರುಳ್ಳಿ ಹಸಿಮೆಣಸು
ಬೆಳ್ಳುಳ್ಳಿ ಉಂಚೆತೊಕ್ಕು
ದಿನಕೊಂದು ಹೊಸ ರುಚಿಯು
ರೊಟ್ಟಿಯೊಳಗೇ ಸುತ್ತಿ
ಉಣಬಡಿಸಿ
ಸುತ್ತೇಳು ಲೋಕವ ತೋರಿದವಳು

ಅಮ್ಮ. ಜೀವ ಒಲೆಯೊಳಗಿಟ್ಟು ಸುಟ್ಟ
ಬಿಸಿ ಬಿಸಿ ರೊಟ್ಟಿ

ಕಟ್ಟಿಗೆಯೊಟ್ಪಗೆ ಸುಟ್ಟು
ಹೊಗೆಯೊಳಗೇ ಕುದ್ದು
ಹೆಂಚಂತೆ ಕಾದು
ರೊಟ್ಟಿಯಾಗಿ ಬೆಂದ
ಒಲೆಯ ಮುಂದಿನ ಅಮ್ಮನ ಮುಖ
ನಿಗಿ ನಿಗಿ ಕೆಂಡ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...