Home / ಕವನ / ಕವಿತೆ / ಮನೆಯು ಪಾಲಾಯ್ತು

ಮನೆಯು ಪಾಲಾಯ್ತು

“ಮನೆಯು ಪಾಲಾಯ್ತು
ಒರ್‌ಬಾಳ್ವೆ ಹೋಳಾಯ್ತು
ಕರುಳೆರಡು ಸೀಳಾಯ್ತು
ಅಯ್ಯೊ! ಅಕಟಕಟಾ!
ಎರಡಾಯ್ತು ಬಾವುಟ”
ಎಂದು ಗೋಳಾಡದಿರು
ಓ, ಗೆಳೆಯನೇ!

ಕಲಹ ಪಾಲಿಗೆ ಮೊದಲು:
ಹೊಗೆಯಿತಸಮಾಧಾನ,
ಉರಿಯಿತು ದುರಭಿಮಾನ.
ತಮ್ಮ, ಪಸುಗೆಯ ಬಯಸಿ
ಕೈಮಾಡಿದನು, ಮುನಿದು;
ಒಬ್ಬಣ್ಣ ಸುಮ್ಮನಿರೆ
ಉಳಿದರಂತಿಹರೆ?

ಹೊಡೆತಕ್ಕೆ ಮರುಹೊಡೆತ;
ಮತದ ಮದ್ದಿನ ಸಿಡಿತ!
ಮಾರಿಗಾಯ್ತೌತಣ;
ನಾಡೆಲ್ಲ ರಣ ರಣ!

ತಡವೆ ರೋಗನಿದಾನ!
ಒಳಗೆಲ್ಲೊ ವಿಷದ ಸೆಲೆ
ಉಪಚಾರ ಮೇಲ್ಮೇಲೆ!
ಅರಿವು ಮೂಡಿದ ಮೇಲೆ
ನಿಜದ ಸಂಧಾನ.
ನಮ್ಮ ಮನೆ ಪಾಲಾಗೆ
ಬೇಕಾಯ್ತು ಕಡೆಗೆಮಗೆ
ಹೆರರ ತೀರ್ಮಾನ!

ಎಲ್ಲವೂ ಆಯ್ತು, ದಿಟ!
ಪಾಲಾಯ್ತು ಮನೆ ಮಠ,
ಹಣಕಾಸು ಆಳು ಭಟ;
ಒಂದೆಸೆದ ಬಾವುಟ!
ಗೆದ್ದಿತೆಲ್ಲರ ಹಟ!
ಇನ್ನೇತಕಾ ಗೋಳು?

ನೋಡು ನಾಳಿನ ಬಾಳು:
ನಗುತಿರಲಿ ಆ ಮನೆ,
ನಗುತಿರಲಿ ಈ ಮನೆ!
ಅವರ ಬಾವುಟವವರು
ನಮ್ಮ ಬಾವುಟ ನಾವು
ಏರಿಸುವ! ಹಾರಿಸುವ!
ಒಲುಮೆ ತೋರಿಸುವ!
ನಮ್ಮ ಕರುಳಿನ ನಂಟು
ಬಿಡಿಸಲಾಗದ ಗಂಟು:
ಈ ನಂಬಿಕೆಯ ಬೆಳಕೆ
ಒಡೆದ ಮನಕಂಟು!

ಬೇರೆಯಿಹ ಕೈಗಳನು
ಮುಗಿದು ವಂದಿಸಿದಂತೆ;
ಎರಡು ಕಣ್ಣಿನ ಕವಲು-
ನೋಟ ಸಂಧಿಸಿದಂತೆ;
ಇಬ್ಬಗೆಯ ಹೂಗಳನು
ಹಾರಕೊಂದಿಸಿದಂತೆ;
ಗಂಡು ಹೆಣ್ಣಿನ ಬಾಳ-
ನೊಲುಮೆ ಬಂಧಿಸಿದಂತೆ;
ಕವಲೊಡೆದ ಕಾವೇರಿ
ಮತ್ತೆ ಕೂಡಿದ ತೆರದಿ;
ಬೇಡನಾವನೊ ಬಂದು
ಎರಡು ಗೂಡಿನಲಿಟ್ಟ
ಜೊತೆಯ ಹಕ್ಕಿಗೆ ಕಟ್ಟ-
ಕಡೆಗೆ ಬಿಡುಗಡೆ ದೊರೆಯೆ
ಅವು ಹಾರಿ ನೆರೆವಂತೆ;
ಹುಟ್ಟು ಧರಿಸಿದ ಆತ್ಮ
ಪರಮಾತ್ಮನಲಿ ಕಡೆಗೆ
ಬೆರೆತೈಕ್ಯವಪ್ಪಂತೆ;
ನಾವು ಸೋದರರಿಂದು
ಬೇರಾದರೇನಂತೆ,-
ಮನವೊಡೆಯದಂತೆ
ಮನೆಯೊಡೆಯದಂತೆ
ಮತ್ತೆ ಬೆರೆಯೋಣ,
ಹೊಸ ಬಾಳ ತೆರೆಯೋಣ,
ಶಾಂತಿ ಸೌಹಾರ್ದಗಳ
ಅಮೃತವರ್ಷದ ಧಾರೆ
ಇಳೆಗೆಲ್ಲ ಕರೆಯೋಣ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...