Home / ಕವನ / ಕವಿತೆ / ಮನೆಯು ಪಾಲಾಯ್ತು

ಮನೆಯು ಪಾಲಾಯ್ತು

“ಮನೆಯು ಪಾಲಾಯ್ತು
ಒರ್‌ಬಾಳ್ವೆ ಹೋಳಾಯ್ತು
ಕರುಳೆರಡು ಸೀಳಾಯ್ತು
ಅಯ್ಯೊ! ಅಕಟಕಟಾ!
ಎರಡಾಯ್ತು ಬಾವುಟ”
ಎಂದು ಗೋಳಾಡದಿರು
ಓ, ಗೆಳೆಯನೇ!

ಕಲಹ ಪಾಲಿಗೆ ಮೊದಲು:
ಹೊಗೆಯಿತಸಮಾಧಾನ,
ಉರಿಯಿತು ದುರಭಿಮಾನ.
ತಮ್ಮ, ಪಸುಗೆಯ ಬಯಸಿ
ಕೈಮಾಡಿದನು, ಮುನಿದು;
ಒಬ್ಬಣ್ಣ ಸುಮ್ಮನಿರೆ
ಉಳಿದರಂತಿಹರೆ?

ಹೊಡೆತಕ್ಕೆ ಮರುಹೊಡೆತ;
ಮತದ ಮದ್ದಿನ ಸಿಡಿತ!
ಮಾರಿಗಾಯ್ತೌತಣ;
ನಾಡೆಲ್ಲ ರಣ ರಣ!

ತಡವೆ ರೋಗನಿದಾನ!
ಒಳಗೆಲ್ಲೊ ವಿಷದ ಸೆಲೆ
ಉಪಚಾರ ಮೇಲ್ಮೇಲೆ!
ಅರಿವು ಮೂಡಿದ ಮೇಲೆ
ನಿಜದ ಸಂಧಾನ.
ನಮ್ಮ ಮನೆ ಪಾಲಾಗೆ
ಬೇಕಾಯ್ತು ಕಡೆಗೆಮಗೆ
ಹೆರರ ತೀರ್ಮಾನ!

ಎಲ್ಲವೂ ಆಯ್ತು, ದಿಟ!
ಪಾಲಾಯ್ತು ಮನೆ ಮಠ,
ಹಣಕಾಸು ಆಳು ಭಟ;
ಒಂದೆಸೆದ ಬಾವುಟ!
ಗೆದ್ದಿತೆಲ್ಲರ ಹಟ!
ಇನ್ನೇತಕಾ ಗೋಳು?

ನೋಡು ನಾಳಿನ ಬಾಳು:
ನಗುತಿರಲಿ ಆ ಮನೆ,
ನಗುತಿರಲಿ ಈ ಮನೆ!
ಅವರ ಬಾವುಟವವರು
ನಮ್ಮ ಬಾವುಟ ನಾವು
ಏರಿಸುವ! ಹಾರಿಸುವ!
ಒಲುಮೆ ತೋರಿಸುವ!
ನಮ್ಮ ಕರುಳಿನ ನಂಟು
ಬಿಡಿಸಲಾಗದ ಗಂಟು:
ಈ ನಂಬಿಕೆಯ ಬೆಳಕೆ
ಒಡೆದ ಮನಕಂಟು!

ಬೇರೆಯಿಹ ಕೈಗಳನು
ಮುಗಿದು ವಂದಿಸಿದಂತೆ;
ಎರಡು ಕಣ್ಣಿನ ಕವಲು-
ನೋಟ ಸಂಧಿಸಿದಂತೆ;
ಇಬ್ಬಗೆಯ ಹೂಗಳನು
ಹಾರಕೊಂದಿಸಿದಂತೆ;
ಗಂಡು ಹೆಣ್ಣಿನ ಬಾಳ-
ನೊಲುಮೆ ಬಂಧಿಸಿದಂತೆ;
ಕವಲೊಡೆದ ಕಾವೇರಿ
ಮತ್ತೆ ಕೂಡಿದ ತೆರದಿ;
ಬೇಡನಾವನೊ ಬಂದು
ಎರಡು ಗೂಡಿನಲಿಟ್ಟ
ಜೊತೆಯ ಹಕ್ಕಿಗೆ ಕಟ್ಟ-
ಕಡೆಗೆ ಬಿಡುಗಡೆ ದೊರೆಯೆ
ಅವು ಹಾರಿ ನೆರೆವಂತೆ;
ಹುಟ್ಟು ಧರಿಸಿದ ಆತ್ಮ
ಪರಮಾತ್ಮನಲಿ ಕಡೆಗೆ
ಬೆರೆತೈಕ್ಯವಪ್ಪಂತೆ;
ನಾವು ಸೋದರರಿಂದು
ಬೇರಾದರೇನಂತೆ,-
ಮನವೊಡೆಯದಂತೆ
ಮನೆಯೊಡೆಯದಂತೆ
ಮತ್ತೆ ಬೆರೆಯೋಣ,
ಹೊಸ ಬಾಳ ತೆರೆಯೋಣ,
ಶಾಂತಿ ಸೌಹಾರ್ದಗಳ
ಅಮೃತವರ್ಷದ ಧಾರೆ
ಇಳೆಗೆಲ್ಲ ಕರೆಯೋಣ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...