Home / ಕವನ / ಕವಿತೆ / ಸಿಂಕ್ಲೇರನಿಗೆ

ಸಿಂಕ್ಲೇರನಿಗೆ

ಹಸಿದ ಹೊಟ್ಟೆಯ ಹೇರ ಹೊರಲಾರದಿಹ ಜನರ
ಕಾಸಿನಾಸೆಯ ತೋರಿ ಹೇಸಿಗೆಯ ನರಕದಲಿ
ದೂಡಿದುಡಿಸುವ ದುಡ್ಡಿನಪ್ಪಗಳ ವಿಶ್ವವನು,
ನಾಗರಿಕ ಜೀವನದ ಮೇಲ್ಮುಸುಕ ಮರೆಯಲ್ಲಿ
ಬಚ್ಚಿಟ್ಟ ಬ್ರಹ್ಮಾಂಡ ಬಯಲು ಮಾಡಿದ ಬ್ರಹ್ಮ   ೫
ಸಿಂಕ್ಲೇರ ಅಪ್ಟನನೆ ನಿನಗೆ ಜಗ ಚಿರಋಣಿಯು!
ಬಾಳ ಕಗ್ಗಾಡಿನಲಿ ಸಿಕ್ಕಿ ಸೊರಗಿದ ದೀನ
ಕೂಲಿಗಾರನ ಜೀವ-ನೋವು ಕಾವಿನ ಬಾಳು
ಕಾಸುಗಾರನ ಕೈಯ ರಾಕ್ಷಸೀ ಹಿಡಿತದಲಿ
ದಬ್ಬಾಳಿಕೆಯ ಕ್ರೂರಯಂತ್ರದಲಿ ನಶಿಸುತಲಿ   ೧೦
ಅಂಧಕಾರದಿ ಬರಿಯ ಧೂಳಾಗಿ ಬೀಳುವುದ
ತೋರಿಸಿದೆ.  ದೂರದಿಂ ನೋಡಿದೊಡೆ ಕಾರ್ಖಾನೆ
ಬಾಳೂ ಬಲು ಬಲು ಚಂದ, ಕಾಸ ಕೂಡಿಸಬಹುದು
ಎಂಬ ಭ್ರಮೆ ಮುಸುಕುವುದು, ಬೆಳಕಿಲ್ಲೆ ಇಹುದೆಂಬ
ಹಿಗ್ಗಿನಲಿ ಬಂದೊಡನೆ, ಬಯಕೆಗಳು ಬಯಲಾಗಿ   ೧೫
ಎದೆಯೊಡೆದು ನೀರಾಗಿ-ಕತ್ತಲಲಿ ಕುಗ್ಗುವುದು!
ಜೀವ ಮೊದಲಿಂ ತುದಿಗೆ ಮೋಸ, ಮೋಸದಸಂತೆ!
ಕಸವನೇ ರಸವೆಂದು ಮರುಳುಗೊಳಿಸುವ ಜಾಲ!
ಅಮೆರಿಕದ ಜೀವವಿದು!  ಒಳಗನರಿಯದೆ ಬರಿಯ
ಹೊಳೆವ ಹೊರಗನೆ ಕಂಡು ಮುಗ್ಧರಾಗುತ ಓಡಿ   ೨೦
ಸಾರಿ ಬಂದವರೆನಿತು ಜಾರಿಬಿದ್ದರು ಬಲೆಗೆ!
ಕೂಲಿಗಾರನ ಕಷ್ಟ ಬಣ್ಣನೆಯ ಬಣ್ಣಕ್ಕೆ
ನಿಲುಕದಿದೆ.  ಕಲ್ಕೂಡ ಕರಗುವುದು ಕೇಳುತದನು!
ಎಲ್ಲವನು ವರ್ಜಿಸುತ, ಕಷ್ಟಗಳ ಬೆಟ್ಟಗಳ
ಬೆನ್ನ ಮೇಲ್ಹೊರುವುದಕೆ ಸುಖವಿರಹಿ ಬಂದಿಹನು!   ೨೫
ಆವುದನು ಅಮೃತವೆಂದೆಣಿಸಿ ಬಂದಿರ್ದನದೆ
ಸರ್ಪವಿಷ!  ಜೀವನವ-ರಸವನ್ನು-ಕಾವನ್ನು
ಮೆಲ್ಲಮೆಲ್ಲನೆ ಹಿಂಡಿ ಹಿಪ್ಪೆಯಾಗಿಪ ಯಂತ್ರ!
ಕಂಪಸೂಸುವ ಹೂವಹಾರವೆಂದಿರ್ದುದದು
ಫೂತ್ಕಾರ ಮಾಡುತಿಹ ಉರಿವ ಹಾವಿನ ಹೆಡೆಯು!   ೩೦
ಬಂಡವಾಳದ ಬಾಳು!  ಮೊದಲಿನಿಂ ಕೊನೆವರೆಗು
-ಕಾರ್ಖಾನೆ, ಸಹಕಾರ ಸಂಘಗಳು, ಸರ್ಕಾರ-
ಎಲ್ಲ ಮೋಸದ ಬೀಡು!  ಮೋಸವೇ ಉಸಿರವಕೆ!
ಮೇಲ್ಮಾತ್ರ ಬಲು ಚೆನ್ನ!  ಮನಸೆಳೆವ ಮುಗ್ಧಬಗೆ!
ದೂರದಿಂ ನೋಡುತಲೆ ಹೃದಯ ಸಾರುವುದಲ್ಲಿ!   ೩೫
ಬಳಿಗೆ ಸಾರುತಲೊಮ್ಮೆ ಬಿದ್ದರಾಯಿತು ಬಲೆಗೆ,
ಹೊಂಡದಿಂ ಹೊರಬೀಳ್ವ ಆಸೆ ಬರಿ ಹುಡಿಗನಸು!
ಸುತ್ತೆಲ್ಲ ಹಸುರುವನ-ಒಳಗೆ ಗಾಢಾಂಧತೆಯು
ಮುಸುಕಿರುವ ಹೆಗ್ಗವಿಯು! – ಜೀವ ಬರಿ ಕಗ್ಗಾಡು!
ಕಗ್ಗಾಡು! ಗಾಢಾಂಧ!  ಕರೆದೊಯ್ಯುವವರಿಲ್ಲ!   ೪೦
ನೂರಾರು ಕವಲುಗಳು-ಎಲ್ಲ ಒಂದೆಡೆಗೇ!
ದಾರಿಯರಿಯದು, ವೇಳೆಯರಿಯದೆಯೆ ಮುನ್ನಡೆದು,
ಕಾದು ಕುಳಿತಿಹ ಕ್ರೂರ ಧನಪ್ರೇತಗಳ ಬಾಯ್ಗೆ
ತುತ್ತಾಗಿ, ತೊತ್ತಾಗಿ, ಸಾಯುವುದು!  ಕೂಲಿಗಳ
ಜೀವನಕೆ ಬೆಳಕಿಲ್ಲ! ಗಾಢಾಂಧತೆಯ ಬೀಡು!   ೪೫
ಅಂತಾರದರಿದರಿಂದ ಕೂಲಿಗಾರಗೆ ಮುಕ್ತಿ
ದೊರೆಯದೇ?  ಕನಸುಗಳ ಬಯಕೆಗಳ ಬಸಿರಿನಲೆ
ಬಡಿದು ಕೊಲ್ಲುವುದೇನು?  ಬೇರೇನು ಗತಿಯಿಲ್ಲ!
ಬಂಡವಾಳದ ಹಿಡಿತ ಬಲು ಭದ್ರ-ಜಗವೆಲ್ಲ
ಕಾಸಿಗೊಡೆಯರ ಕೈಲಿ ನಶಿಸಿಹೋಗುತಲಿಹುದು!   ೫೦
ದುಡ್ಡಿನಲ್ಲಿದೆ ಜೀವ! ದುಡ್ಡಿನಿಂದಲೆ ಜೀವ!
ಉಳಿದಿಹುದು ಏನೆಮಗೆ?  ಕೂಲಿಗಾರರಿಗೇನು?
ದುಡಿದು ದುಡಿದೂ ಇಂತೆ ಮಡಿಯುವುದೆ ಫಲವೇನು?
ಕಗ್ಗಾಡಿನಂಧತೆಯ ಬೆಳಗಿ ದಾರಿಯತೋರ್ವ
ಕಿರಣವೆಮಗಿಲ್ಲವೇ?- ಆಸೆಯಿದೆ! ಧೈರ್ಯವಿದೆ!   ೫೫
ಬಂಡವಲದಂಗಾಂಗ ಛಿದ್ರಛಿದ್ರವ ಮಾಡಿ
ಕಿತ್ತೊಗೆದು, ಕೂಲಿಗಳ ಜೀವ ಸವಿಯಾಗಿಪುದು
ಕಗ್ಗಾಡ ಬೆಳಗಿಸುವ ಕಿರಣ ಹೊರಹೊಮ್ಮುತಿದೆ
ಕೂಲಿಗಾರರ ಶಕ್ತಿ! ಸಾಮ್ಯವಾದದ ಕತ್ತಿ
ಸಾಮ್ಯವಾದವದೊಂದೆ ಶತ್ರುವಿಗೆ ಹಿರಿಮದ್ದು!   ೬೦
ಸಾಮ್ಯವಾದವದೊಂದೆ ಶತ್ರಿವಿಗೆ ಸಿಡಿಮದ್ದು!
“ಎಮ್ಮದಾಯ್ತು ಚಿಕಾಗೊ! ಎಮ್ಮದಾಯ್ತು ಚಿಕಾಗೊ!”
ಎಂಬ ಕೊನೆಯಾಕೂಗು ಬಂಡವಲದೆದೆ ಒಡೆದು
ದಿಕ್ಕುದಿಕ್ಕುಗಳಲ್ಲಿ ಮೊಳಗುವುದು – ಗುಡುಗುವುದು!
“ಎಮ್ಮದಾಯ್ತು ಚಿಕಾಗೊ!” ಕೂಗು ಬದಲಿಸುತಿಂದು   ೬೫
ಕೂಲಿಗಾರರ ಕೊರಳಿನಿಂದಿಂತು ಹೊರಡುತಿದೆ!
“ವಿಶ್ವವೇ ನಮ್ಮದಿದೆ, ನಮ್ಮ ಹಕ್ಕಿದು ವಿಶ್ವ!
ವಿಶ್ವ ನಮ್ಮದೆ ಅಹುದು! ನಮ್ಮದಾಯ್ತೀ ವಿಶ್ವ!”   ೬೮

“ದಿ ಜಂಗಲ್” ಕಾದಂಬರಿಯನ್ನು ಓದಿದಮೇಲೆ ಬರೆದುದು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...