Home / ಕವನ / ಕವಿತೆ / ಸಿಂಕ್ಲೇರನಿಗೆ

ಸಿಂಕ್ಲೇರನಿಗೆ

ಹಸಿದ ಹೊಟ್ಟೆಯ ಹೇರ ಹೊರಲಾರದಿಹ ಜನರ
ಕಾಸಿನಾಸೆಯ ತೋರಿ ಹೇಸಿಗೆಯ ನರಕದಲಿ
ದೂಡಿದುಡಿಸುವ ದುಡ್ಡಿನಪ್ಪಗಳ ವಿಶ್ವವನು,
ನಾಗರಿಕ ಜೀವನದ ಮೇಲ್ಮುಸುಕ ಮರೆಯಲ್ಲಿ
ಬಚ್ಚಿಟ್ಟ ಬ್ರಹ್ಮಾಂಡ ಬಯಲು ಮಾಡಿದ ಬ್ರಹ್ಮ   ೫
ಸಿಂಕ್ಲೇರ ಅಪ್ಟನನೆ ನಿನಗೆ ಜಗ ಚಿರಋಣಿಯು!
ಬಾಳ ಕಗ್ಗಾಡಿನಲಿ ಸಿಕ್ಕಿ ಸೊರಗಿದ ದೀನ
ಕೂಲಿಗಾರನ ಜೀವ-ನೋವು ಕಾವಿನ ಬಾಳು
ಕಾಸುಗಾರನ ಕೈಯ ರಾಕ್ಷಸೀ ಹಿಡಿತದಲಿ
ದಬ್ಬಾಳಿಕೆಯ ಕ್ರೂರಯಂತ್ರದಲಿ ನಶಿಸುತಲಿ   ೧೦
ಅಂಧಕಾರದಿ ಬರಿಯ ಧೂಳಾಗಿ ಬೀಳುವುದ
ತೋರಿಸಿದೆ.  ದೂರದಿಂ ನೋಡಿದೊಡೆ ಕಾರ್ಖಾನೆ
ಬಾಳೂ ಬಲು ಬಲು ಚಂದ, ಕಾಸ ಕೂಡಿಸಬಹುದು
ಎಂಬ ಭ್ರಮೆ ಮುಸುಕುವುದು, ಬೆಳಕಿಲ್ಲೆ ಇಹುದೆಂಬ
ಹಿಗ್ಗಿನಲಿ ಬಂದೊಡನೆ, ಬಯಕೆಗಳು ಬಯಲಾಗಿ   ೧೫
ಎದೆಯೊಡೆದು ನೀರಾಗಿ-ಕತ್ತಲಲಿ ಕುಗ್ಗುವುದು!
ಜೀವ ಮೊದಲಿಂ ತುದಿಗೆ ಮೋಸ, ಮೋಸದಸಂತೆ!
ಕಸವನೇ ರಸವೆಂದು ಮರುಳುಗೊಳಿಸುವ ಜಾಲ!
ಅಮೆರಿಕದ ಜೀವವಿದು!  ಒಳಗನರಿಯದೆ ಬರಿಯ
ಹೊಳೆವ ಹೊರಗನೆ ಕಂಡು ಮುಗ್ಧರಾಗುತ ಓಡಿ   ೨೦
ಸಾರಿ ಬಂದವರೆನಿತು ಜಾರಿಬಿದ್ದರು ಬಲೆಗೆ!
ಕೂಲಿಗಾರನ ಕಷ್ಟ ಬಣ್ಣನೆಯ ಬಣ್ಣಕ್ಕೆ
ನಿಲುಕದಿದೆ.  ಕಲ್ಕೂಡ ಕರಗುವುದು ಕೇಳುತದನು!
ಎಲ್ಲವನು ವರ್ಜಿಸುತ, ಕಷ್ಟಗಳ ಬೆಟ್ಟಗಳ
ಬೆನ್ನ ಮೇಲ್ಹೊರುವುದಕೆ ಸುಖವಿರಹಿ ಬಂದಿಹನು!   ೨೫
ಆವುದನು ಅಮೃತವೆಂದೆಣಿಸಿ ಬಂದಿರ್ದನದೆ
ಸರ್ಪವಿಷ!  ಜೀವನವ-ರಸವನ್ನು-ಕಾವನ್ನು
ಮೆಲ್ಲಮೆಲ್ಲನೆ ಹಿಂಡಿ ಹಿಪ್ಪೆಯಾಗಿಪ ಯಂತ್ರ!
ಕಂಪಸೂಸುವ ಹೂವಹಾರವೆಂದಿರ್ದುದದು
ಫೂತ್ಕಾರ ಮಾಡುತಿಹ ಉರಿವ ಹಾವಿನ ಹೆಡೆಯು!   ೩೦
ಬಂಡವಾಳದ ಬಾಳು!  ಮೊದಲಿನಿಂ ಕೊನೆವರೆಗು
-ಕಾರ್ಖಾನೆ, ಸಹಕಾರ ಸಂಘಗಳು, ಸರ್ಕಾರ-
ಎಲ್ಲ ಮೋಸದ ಬೀಡು!  ಮೋಸವೇ ಉಸಿರವಕೆ!
ಮೇಲ್ಮಾತ್ರ ಬಲು ಚೆನ್ನ!  ಮನಸೆಳೆವ ಮುಗ್ಧಬಗೆ!
ದೂರದಿಂ ನೋಡುತಲೆ ಹೃದಯ ಸಾರುವುದಲ್ಲಿ!   ೩೫
ಬಳಿಗೆ ಸಾರುತಲೊಮ್ಮೆ ಬಿದ್ದರಾಯಿತು ಬಲೆಗೆ,
ಹೊಂಡದಿಂ ಹೊರಬೀಳ್ವ ಆಸೆ ಬರಿ ಹುಡಿಗನಸು!
ಸುತ್ತೆಲ್ಲ ಹಸುರುವನ-ಒಳಗೆ ಗಾಢಾಂಧತೆಯು
ಮುಸುಕಿರುವ ಹೆಗ್ಗವಿಯು! – ಜೀವ ಬರಿ ಕಗ್ಗಾಡು!
ಕಗ್ಗಾಡು! ಗಾಢಾಂಧ!  ಕರೆದೊಯ್ಯುವವರಿಲ್ಲ!   ೪೦
ನೂರಾರು ಕವಲುಗಳು-ಎಲ್ಲ ಒಂದೆಡೆಗೇ!
ದಾರಿಯರಿಯದು, ವೇಳೆಯರಿಯದೆಯೆ ಮುನ್ನಡೆದು,
ಕಾದು ಕುಳಿತಿಹ ಕ್ರೂರ ಧನಪ್ರೇತಗಳ ಬಾಯ್ಗೆ
ತುತ್ತಾಗಿ, ತೊತ್ತಾಗಿ, ಸಾಯುವುದು!  ಕೂಲಿಗಳ
ಜೀವನಕೆ ಬೆಳಕಿಲ್ಲ! ಗಾಢಾಂಧತೆಯ ಬೀಡು!   ೪೫
ಅಂತಾರದರಿದರಿಂದ ಕೂಲಿಗಾರಗೆ ಮುಕ್ತಿ
ದೊರೆಯದೇ?  ಕನಸುಗಳ ಬಯಕೆಗಳ ಬಸಿರಿನಲೆ
ಬಡಿದು ಕೊಲ್ಲುವುದೇನು?  ಬೇರೇನು ಗತಿಯಿಲ್ಲ!
ಬಂಡವಾಳದ ಹಿಡಿತ ಬಲು ಭದ್ರ-ಜಗವೆಲ್ಲ
ಕಾಸಿಗೊಡೆಯರ ಕೈಲಿ ನಶಿಸಿಹೋಗುತಲಿಹುದು!   ೫೦
ದುಡ್ಡಿನಲ್ಲಿದೆ ಜೀವ! ದುಡ್ಡಿನಿಂದಲೆ ಜೀವ!
ಉಳಿದಿಹುದು ಏನೆಮಗೆ?  ಕೂಲಿಗಾರರಿಗೇನು?
ದುಡಿದು ದುಡಿದೂ ಇಂತೆ ಮಡಿಯುವುದೆ ಫಲವೇನು?
ಕಗ್ಗಾಡಿನಂಧತೆಯ ಬೆಳಗಿ ದಾರಿಯತೋರ್ವ
ಕಿರಣವೆಮಗಿಲ್ಲವೇ?- ಆಸೆಯಿದೆ! ಧೈರ್ಯವಿದೆ!   ೫೫
ಬಂಡವಲದಂಗಾಂಗ ಛಿದ್ರಛಿದ್ರವ ಮಾಡಿ
ಕಿತ್ತೊಗೆದು, ಕೂಲಿಗಳ ಜೀವ ಸವಿಯಾಗಿಪುದು
ಕಗ್ಗಾಡ ಬೆಳಗಿಸುವ ಕಿರಣ ಹೊರಹೊಮ್ಮುತಿದೆ
ಕೂಲಿಗಾರರ ಶಕ್ತಿ! ಸಾಮ್ಯವಾದದ ಕತ್ತಿ
ಸಾಮ್ಯವಾದವದೊಂದೆ ಶತ್ರುವಿಗೆ ಹಿರಿಮದ್ದು!   ೬೦
ಸಾಮ್ಯವಾದವದೊಂದೆ ಶತ್ರಿವಿಗೆ ಸಿಡಿಮದ್ದು!
“ಎಮ್ಮದಾಯ್ತು ಚಿಕಾಗೊ! ಎಮ್ಮದಾಯ್ತು ಚಿಕಾಗೊ!”
ಎಂಬ ಕೊನೆಯಾಕೂಗು ಬಂಡವಲದೆದೆ ಒಡೆದು
ದಿಕ್ಕುದಿಕ್ಕುಗಳಲ್ಲಿ ಮೊಳಗುವುದು – ಗುಡುಗುವುದು!
“ಎಮ್ಮದಾಯ್ತು ಚಿಕಾಗೊ!” ಕೂಗು ಬದಲಿಸುತಿಂದು   ೬೫
ಕೂಲಿಗಾರರ ಕೊರಳಿನಿಂದಿಂತು ಹೊರಡುತಿದೆ!
“ವಿಶ್ವವೇ ನಮ್ಮದಿದೆ, ನಮ್ಮ ಹಕ್ಕಿದು ವಿಶ್ವ!
ವಿಶ್ವ ನಮ್ಮದೆ ಅಹುದು! ನಮ್ಮದಾಯ್ತೀ ವಿಶ್ವ!”   ೬೮

“ದಿ ಜಂಗಲ್” ಕಾದಂಬರಿಯನ್ನು ಓದಿದಮೇಲೆ ಬರೆದುದು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...