Home / ಕವನ / ಕವಿತೆ / ನಿಜಬುದ್ಧ

ನಿಜಬುದ್ಧ

ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ
ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ,
ಆನಂದ ಪ್ರಶ್ನಿಸಿದ “ಗುರುದೇವ, ಹೃದಯದಲಿ
ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!”
ಬುದ್ಧದೇವನು ಆಗ ಚಂದ್ರಮನ ಎಳೆನಗುವ   ೫
ನಕ್ಕು ಪೇಳಿದನಿಂತು – “ಆನಂದ, ಅಂತಹುದು
ಸಂದೇಹವೇನಿಹುದು? – ಮನವ ಮುರಿವಂತಹುದು!
ಅರಿತಿದ್ದರದಕಾನು ಉತ್ತರವ ಹೇಳುವೆನು”
“ಗುರುದೇವ! ಜೀವನದಿ ಎಲ್ಲರೊಡನಾಡುತಲಿ
ಕಾಮಕ್ರೋಧದ ಕ್ರೂರ ಅಲೆಗಳಪ್ಪಳಿಸಿದರು   ೧೦
ಕಲ್ಬಂಡೆಯಂತಿರುವ ಯೋಗವೇ ಮೇಲಹುದೊ?
ಮೇಣ್, ಜಗಕೆ ದೂರಾಗಿ ಜ್ಞಾನಪಡೆವುದು ಮೇಲೊ?”
“ಆನಂದ, ಸಂದೇಹ ತಿಳುಹಿದುದೆ ಮೇಲಾಯ್ತು!
ನಾನು ಜಗವನೆ ತೊರೆದು ದೂರ ಕಾಡನು ಸೇರಿ
ಬುದ್ಧನಾದುದು ನಿನಗೆ ಅರಿತಿಹುದು …..ಎನಗಲ್ಲಿ,   ೧೫
ಕಾನನದಿ ಮಾಯೆಗಳು ಬಂಧನಗಳಿರಲಿಲ್ಲ!
ರಾಹುಲ ಯಶೋಧರರ ಮಾಯೆಯನು ಒಡೆಯಲಿಕೆ
ಕಾಡಿಗೋಡಿದೆ ನಾನು! – ಅದು ಹಿರಿಮೆಯೇನಲ್ಲ!
ಪತ್ನಿ ಪುತ್ರರ ಕೂಡ ನಿಂತು ತನ್ನನು ಗೆಲುವ
ಯೋಗವೇ ಮೇಲಹುದು! ಬುದ್ಧನಾದರು ಮತ್ತೆ   ೨೦
ಅರಿತುದನು ಬಿತ್ತಲಿಕೆ ಜನತೆಯೇನೆಲನೆಮಗೆ!
ಜನತೆಯೊಡಲಲಿ ಹುಟ್ಟಿ, ಜನತೆ ಮಡಿಲಲಿ ಬೆಳೆದು,
ಜನತೆಯೆಡೆಯೇ ಉಳಿದು, ಜನತೆಯಡಿ ಮುಂದೊಯ್ವ
ಜ್ಞಾನ ಕರ್ಮಿಯು ಬುದ್ಧ! – ಮುಂದೆ ಬರುವವನವನು!
ಹಗಲು ಹುಟ್ಟುವ ಮುನ್ನ ಅರುಣನಿಣುಕುವ ಹಾಗೆ   ೨೫
ಮುಂದೆ ಜನಿಸುವ ಅವನ ಆಗಮನ ಸೂಚಿಸಲು
ನಾಬಂದೆ! ಆನಂದ- ಈಗ ನಿನಗರಿವಾಯ್ತೆ?
ಜಗದ ನಿಜವನು ಅರಿತ ನಿಜಬುದ್ಧ ಬರುತಿಹನು!
ಜಗವ ನಿಜದಲಿ ನಡೆಪ ಆನಂದ ನನಗಿಲ್ಲ-
ಆತನಿಗೆ ಮೀಸಲದು!”  ಆನಂದ ನಡುವಿನಲಿ   ೩೦
ಬಾಯಿಟ್ಟು ಪ್ರಶ್ನಿಸಿದ, “ಗುರುದೇವ, ಆತನನು
ವರ್ಣಿಪಿರ? – ಎಂತಿರುವ ಆ ಬುದ್ಧ-ನಿಜಬುದ್ಧ?
ಜಗದ ನಡೆನುಡಿಬೆರೆತ, ಜಗದ ಸತ್ಯವನರಿತ
ಜಗದ ಕೂಸಾಬುದ್ಧ ಎಲ್ಲಿ ಜನಿಸಿಹನವನು?”
ಬುದ್ಧ ನಸುನಕ್ಕಿಂತು ಪೇಳಿದನು ಉತ್ತರವ-   ೩೫
“ನಡುವಿಂದ ಮೊಳಕಾಲವರೆಗಿಳಿವ ಬಿಳಿವಸ್ತ್ರ
ತನ್ನ ಕೈಯಿಂ ತಾನೆ ನೂತುನೇದುದು ಖಾದಿ!
ಮೇಲ್ಹೊದಿಕೆ-ಮತ್ತೊಂದು-ಬಿಳಿಯ ಖಾದಿಯ ಚೌಕ
ವಿಶ್ವದಿಗ್ವಜಯಕ್ಕೆ ಹೊರಟ ಸನ್ಯಾಸಿಯವ,
ಕೈಯಲ್ಲಿ ದಂಡವಿದೆ-ಮುಖಬತ್ತಿ ಬಾಡಿಹುದು   ೪೦
ಯೌವನದ ತೇಜವಿದೆ-ಬ್ರಹ್ಮಚರ್‍ಯದ ತೇಜ!
ಮಡದಿಯನು ಮಾತೆಯೊಲು ಕಾಣವವನಾ ತೇಜ!
ಹೃಯದಲಿ ಹಿರಿಕೆಚ್ಚು-ಸ್ವಾತಂತ್ರ್‍ಯದಾ ಕಿಚ್ಚು
ಅದೊ ಆತ ಬರುತಲಿಹ ಈ ಎಡೆಗೆ ನೋಡಲ್ಲಿ
ಭಾರತಿಯ ಹಿರಿಯಮಗ-ಕಿರಿಯಮಕ್ಕಳು ನೋಡು   ೪೫
ಎನಿತು ಜನ ದಂಡಾಗಿ ಹಿಂದೆ ಸಾಗುತಲಿಹರು-
ಬುದ್ಧನವ! – ನಿಜಬುದ್ಧ! ನಾನವನ ಜನ್ಮವನು
ಸೂಚಿಸಲು ಬಂದಿದ್ದ ಮುಂಜಾನೆ! – ಆನಂದ!”
-ಅಷ್ಟರಲೆ ಕನಸೊಡೆದು ಎಚ್ಚೆತ್ತು ನೋಡಿದೆನು
ಸೆರೆಮನೆಯ ಹೊರಬದಿಗೆ ಕಾವಲಿನ ಪೋಲೀಸ   ೫೦
ನಡೆದ ಬೂಟ್ಸಿನ ಸದ್ದು ರಾತ್ರಿಯಾ ಕಡುಮೌನ
ಭೇದಿಸುತ ಬರುತಿತ್ತು- ಸುಂದರ ದಿಗಂತದಲಿ
ನಕ್ಷತ್ರನೂರ್ಲಕ್ಷ ಸ್ವಾತಂತ್ರ್‍ಯಸಿರಿಯಲ್ಲಿ
ನಕ್ಕುನಲಿಯುತಲಿರಲು, ಸೆರೆಮನೆಯ ಒಳಬದಿಯ
ಗಾಳಿ ಸುಂಯ್ಗುಡುತಿತ್ತು! ಕಂಗಳಲಿ ನೀರೂರಿ   ೫೫
ಗೋಡೆಯಲಿ ಮಸಿಯಿಂದ ನಾಬರೆದ ಚಿತ್ರದೆಡೆ
ಕಣ್ತಿರುವಿ ಕೈಮುಗಿದೆ ಗಾಂಧಿಗೆ ಮಹಾತ್ಮನಿಗೆ!
– “ನಿಜಬುದ್ಧ! ಭಾರತಿಯ ಹಿರಿಮಗ-ನಮಗೆಲ್ಲ
ಆತ್ಮ ಸ್ವಾತಂತ್ರ್‍ಯವನು ಸಾಧಿಸುವ ಮಂತ್ರವನು
ಬೋಧಿಸಿದ ನಿಜಗುರುವೆ! – ನಿನಗೆ ಚಿರಜಯಮಕ್ಕೆ!”   ೬೦
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...