Home / ಕವನ / ಕವಿತೆ / ಹಗಲಲ್ಲಿ ಕೆಂಪು ಕತ್ತಲೆ

ಹಗಲಲ್ಲಿ ಕೆಂಪು ಕತ್ತಲೆ

ಹದ್ದು ಹಾರಾಡುತಿವೆ ದೇಶಾಕಾಶದ ಮೇಲೆ
ನಿದ್ದೆ ಮಾಡುತಿವೆ ಹೆಣಗಳು ಈ ನೆಲದ ಮೇಲೆ
ರಾಮಬಾಣಗಳು ಬಡಿಗೆ ಸಲಾಕಿಗಳಾಗಿವೆ
ಮಂದಿರಗಳಲ್ಲಿ ಮಾರಣಹೋಮ ನಡೆದಿದೆ
ವಿದ್ಯಾಮಂದಿರಗಳಲ್ಲಿ ಕೊಲ್ಲುವ ವಿದ್ಯಾಪಠಣ
ಜಗದೊಡೆಯ ಯಾವುದೋ ಸಂದಿಯಲ್ಲಿ ಕುಳಿತುಕೊಂಡು
ಬೇರೆ ಸಂದಿನವರನೆಲ್ಲ ಕೊಲ್ಲಲು ಧರ್ಮಾದೇಶ ನೀಡುತ್ತಾನೆ
ತಿಳಿ ಸರೋವರದಂಥ ಕೂಸು ಕಂದಮ್ಮಗಳ ಕಣ್ಣುಗಳಲ್ಲಿ
ಕೆಂಪು ನದಿಗಳ ಭಯಾನಕ ಕನಸುಗಳು
ಮನಮನಗಳು ಸಿಡಿಮದ್ದುಗಳ ಗೂಡುಗಳಾಗಿವೆ
ಮಾತು ಮಾತುಗಳು ವಿಷ ಒಳಗಿಟ್ಟುಕೊಂಡ ಹೂಗಳು
ಮಚ್ಚು ಚಾಕು ಚೈನುಗಳದೇ ಕಾರುಬಾರು
ಓಣಿ ಓಣಿಗಳಲ್ಲಿ ದೇಶದ ಸಂದುಗೊಂದುಗಳಲ್ಲಿ

ಆದರೆ ಮೇಲೆ ಮೇಲೆ ಹಾಡುತ್ತಿದ್ದಾರೆ
‘ಸಾರೆ ಜಹಾನ್‌ಸೆ ಅಚ್ಚಾ ಹಿಂದೋಸ್ತಾನ್ ಹಮಾರಾ’
‘ಈಶ್ವರ ಅಲ್ಲಾ ತೇರೇ ನಾಮ್ ಸಬಕೋ ಸನ್ಮತಿ ದೇ ಭಗವಾನ್’
ದಮ್ಮೇ ಇಲ್ಲದೆ ಹಾಡು ಗಾಳಿಯಲ್ಲಿ ತೇಲಿ ಕರಗಿ ಹೋಗುತ್ತವೆ

ದೇಶ ಸಮಸ್ಯೆಗಳ ಹಾವುಗಳ ಹುತ್ತ
ಒಳಗೊಳಗೇ ಭುಸುಗುಡುತ್ತಿವೆ
ಉಗುಳುತ್ತಿವೆ ವಿಷವ-ಕೊಲ್ಲುತ್ತಿವೆ ಭವಿಷ್ಯವ
ಮೇಲೆ ಕಟ್ಟಿದ ವಲ್ಮೀಕವ ಗುಡಿಯೆಂದು ಭಾವಿಸಿದ್ದಾರೆ
ರಾಮ ರಹೀಮರ ನಡುವೆ ಮುಗಿಲೆತ್ತರ ಗೋಡೆ
ಒಂದನ್ನೊಂದು ನಿರ್ನಾಮ ಮಾಡುವ ದ್ವೇಷ
ತ್ವೇಷದ ಭ್ರಮೆಯ ಪರಿಕಲ್ಪನೆ

ಜಗವೇ ಮನೆಯಾದವಗೆ ಮಂದಿರ ಮಸೀದಿಗಳಲಿ
ಕಟ್ಟಿ ಹಾಕಿದ್ದಾರೆ, ನಿರಾಕಾರ ನಿರ್ಗುಣನ ಮೈಮೇಲೆ
ನಾಮ ಜನಿವಾರ, ಟೋಪಿ ಗಡ್ಡಗಳ ಅಂಟಿಸಿ
ದಾರಿ ಮಾಡಿಕೊಂಡಿದ್ದಾರೆ ಕೆಂಪು ಕಾಲುವೆಗಳಿಗೆ
ಸಜ್ಜಾಗಿವೆ ಕೆಂಗಣ್ಣುಗಳು ಭಾವುಕತೆಯಿಂದ

ಬಾತುಕೂಂಡಿವೆ ತೋಳುಗಳು ಬಡಿದಾಡುವ ಹಟದಿಂದ
ವಿಜ್ಞಾನ ಸೂರ್ಯ ಒಂದೇ ತೆಕ್ಕೆಯಲ್ಲಿ
ಭೂಮಂಡಲವ ಅಪ್ಪಿಕೊಂಡಿರುವ ಈ ಹಗಲಲ್ಲೇ
ಆವರಿಸಿದೆ ಮತಾಂಧ ಕೆಂಪುಕತ್ತಲು ಸುತ್ತಲು
ತಾಲಿಬಾನೋ ಅಯೋಧ್ಯಯ ನೆಲಬಾನೊ
ಕಾಶ್ಮೀರವೋ ಮಾಯಲಾರದ ಹುಣ್ಣು ಹುಣ್ಣು
ಗಾಂಧೀಜಿಯ ಗುಜರಾತು ನರಮೇಧಗಳ ಸುಡುಗಾಡು
ಅಹಿಂಸಾತತ್ವದ ತೆಳು ಮೋಡ ಮೇಲೆ ಮೇಲೆ
ಹಿಂಸಾ ತಾಂಡವ ನರ್ತಿಸಿದೆ ಕರುಳುಗಳ ಮಾಲೆ ಮಾಲೆ
ರಾಜಕೀಯ ಚೌಕಾಸಿ ನಡೆದಿದೆ ಕುರ್ಚಿಗಳ ಮೇಲೆ
ಅಕರಾಳ ವಿಕರಾಳ ರಕ್ತಮಾಂಸಗಳ ಪಿಪಾಸೆ
ಹಲ್ಲುಕಿಸಿದು ದೇಶದ ಮೂಲೆ ಮೂಲೆಗಳಲ್ಲಿ ತಿನ್ನುತ್ತಿದ್ದರೂ
ದಿಲ್ಲಿ ಸಾರುತ್ತಿದೆ ಮೇರಾ ಭಾರತ್‌ ಮಹಾನ್
ಇಲ್ಲಿ ಅಂತರಾತ್ಮ ಮುನುಗುತಿದೆ ದೇಶದ ಅವಸಾನ್
ಸಬಕೋ ಸನ್ಮತಿ ದೇ ಭಗವಾನ್
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...