Home / ಕವನ / ಕವಿತೆ / ಅಮ್ಮ ಹೇಳಿದ್ದು

ಅಮ್ಮ ಹೇಳಿದ್ದು

ಇದು ನನ್ನ ಕಲ್ಪನೆಯ
ಕಥೆಯಲ್ಲ ಮಗಳೇ
ನನ್ನಮ್ಮ ನನಗೆ ಹೇಳಿದ್ದು
ಅವಳಮ್ಮ ನನ್ನಮ್ಮನಿಗೆ ಹೇಳಿದ್ದಂತೆ
ಈಗ ನಾ ನಿನಗೆ ಹೇಳಿದಂತೆ
ನಾಳೆ ನೀ ನಿನ್ನ ಮಗಳಿಗೆ ಹೇಳುವಂತೆ
ಇದೊಂದು ರೀತಿ ಚಕ್ರದಂತೆ!

ಇದು ಕಥೆಯ ಮೂಲರೂಪವೂ
ಅಲ್ಲ ಮಗಳೇ
ನನ್ನಮ್ಮ, ಅವರಮ್ಮ,
ಅವರಮ್ಮ, ಅವರಮ್ಮನಮ್ಮನ
… … … … … …
… … … … … …
ಬಾಯ್ಗೆ ಹರಿದು
ಮೂಲರೂಪ ಹೇಗಿತ್ತೋ
ಸೃಷ್ಟಿಕರ್ತನಿಗೇ ಗೊತ್ತು!
*
“ಅಳಬೇಡ ಕಂದಮ್ಮ
ನಿನ ಪುಣ್ಯ ಇಲ್ಲಿ ರಾಕ್ಷಸನಿಲ್ಲ!”
ಏಳು ಸಮುದ್ರದಾಚೆ
ಅವನಿರುವುದೆಲ್ಲಾ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ!
ಬಿಡು ಮಗಳೇ
ನಾವೂ ಅಲ್ಲಿಗೆ ಹೋಗುವುದಿಲ್ಲವಲ್ಲಾ!
*
ಅವನು ಕುಡಿಯುವುದು
ನನ್ನ – ನಿನ್ನಂತೆ
ಹಾಲು ಕಾಫಿಯಲ್ಲ
ಬೆಳಗು – ಬೈಗು
ಹಸಿ – ಹಸಿ ನೆತ್ತರೇ ಬೇಕಂತಲ್ಲಾ?
ನಿನ್ನಂತವರ ಕಣ್ಣೀರೆಂದರೆ
ಅವನಿಗೆ ಸಿಹಿ ತಿಂಡಿಯ ತರಹ!
ಅವ ತಿನ್ನುವುದೂ
ಸೊಪ್ಪು ಸದೆ ಹಣ್ಣಲ್ಲ
ನನ್ನ-ನಿನ್ನಂತವರೇ ಆಹಾರ
“ಅಳದಿರು ಬಂಗಾರಿ
ರಾಕ್ಷಸ ಇಲ್ಲಿಲ್ಲ!”
*
“ಹುಷ್ ಸುಮ್ಮನಿರೆ ನನ್ನ ಚಿನ್ನ”
ಅವನಂತವರೂ ಇಲ್ಲಿಲ್ಲ
ದೈತ್ಯ ಪರ್ವತವೇ
ಅವನ ಆಕೃತಿಯಂತಲ್ಲಾ!
ಅವನ ಘರ್ಜನೆಗೆ
ಏಳೇಳು ಸಮುದ್ರವೇ ನಡುಗಿ
ಅಲೆಗಳೇಳುವುದಂತಲ್ಲ
ಸಮುದ್ರದಲಿ ಅಲೆಗಳಿರುವವರೆಗೂ
ಅವನಿಗೋ ಸಾವಿಲ್ಲ!
*
ಆದರೂ ಅವನ ಪ್ರಾಣ
ಅವನ ಹೃದಯದಲಿಲ್ಲ!
“ಅಯ್ಯೋ ಹೀಗ್ಯಾಕಳುವೆ ನನ್ನ ಜೀವವೇ?”
ಏಳು ಕಾಡನು ದಾಟಿ ಮತ್ತೇಳೂ ಕಡಲನು ಮೀಟಿ
ಕೊಟ್ಟ ಕೊನೆಯ ಗುಹೆಯೊಳಗಿನ
ಗಿಣಿಯೊಳಗೇ ಇದೆಯಂತೆ ಆ
ರಾಕ್ಷಸನೆಂಬುವನ ಪ್ರಾಣ!
*
“ನನ ಮುದ್ದು ಮಗುವೇ ಅಳಬೇಡ”
ರಾಕ್ಷಸನಿಗೋ ಸಾವಿಲ್ಲ
ಅಮ್ಮ ಹೇಳಿದ್ದಳಲ್ಲಾ
ಅವ ನಿನ್ನ ಕದ್ದರೆ
ಕಾಪಾಡಲು ಯಾವ
ರಾಜಕುಮಾರನೂ ಬರುವುದಿಲ್ಲ
ಏಕೆಂದರೆ ಇಲ್ಲಿ ರಾಜಕುಮಾರ ಇಲ್ಲ!
ಅದಕೆಂದೇ ಮಗಳೇ ನೀ ಅಳಬೇಡ
*
ಹೀಗೇ… ಹೀಗೇ…
ನಗಬೇಕು ಕಂದಮ್ಮ
ಎಂದೆಂದೂ ಇಲ್ಲಿ ರಾಕ್ಷಸನಿಲ್ಲ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ
ಬಿಡು ನಾವು ಜಾಣರು
ಅವನ ಬಾಯಿಗೆ
ಹೋಗುವುದೂ ಇಲ್ಲ!
*
ಅತ್ತವರಿಗಷ್ಟೇ ನನ್ನ ರನ್ನ
ರಾಕ್ಷಸನ ಹೆದರಿಕೆ
ಅಳುನುಂಗಿ ನಗುವವರಿಗೆ
ರಾಕ್ಷಸನ ಕಥೆಯೇಕೆ?
ಹೀಗೇ ಏನನ್ನೂ ಪ್ರಶ್ನಿಸದೇ
ನಗುನಗುತ್ತಿದ್ದರೆ ಬೇರೆ ಮಾತೇಕೆ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...