Home / ಕವನ / ಕವಿತೆ / ಅಮ್ಮ ಹೇಳಿದ್ದು

ಅಮ್ಮ ಹೇಳಿದ್ದು

ಇದು ನನ್ನ ಕಲ್ಪನೆಯ
ಕಥೆಯಲ್ಲ ಮಗಳೇ
ನನ್ನಮ್ಮ ನನಗೆ ಹೇಳಿದ್ದು
ಅವಳಮ್ಮ ನನ್ನಮ್ಮನಿಗೆ ಹೇಳಿದ್ದಂತೆ
ಈಗ ನಾ ನಿನಗೆ ಹೇಳಿದಂತೆ
ನಾಳೆ ನೀ ನಿನ್ನ ಮಗಳಿಗೆ ಹೇಳುವಂತೆ
ಇದೊಂದು ರೀತಿ ಚಕ್ರದಂತೆ!

ಇದು ಕಥೆಯ ಮೂಲರೂಪವೂ
ಅಲ್ಲ ಮಗಳೇ
ನನ್ನಮ್ಮ, ಅವರಮ್ಮ,
ಅವರಮ್ಮ, ಅವರಮ್ಮನಮ್ಮನ
… … … … … …
… … … … … …
ಬಾಯ್ಗೆ ಹರಿದು
ಮೂಲರೂಪ ಹೇಗಿತ್ತೋ
ಸೃಷ್ಟಿಕರ್ತನಿಗೇ ಗೊತ್ತು!
*
“ಅಳಬೇಡ ಕಂದಮ್ಮ
ನಿನ ಪುಣ್ಯ ಇಲ್ಲಿ ರಾಕ್ಷಸನಿಲ್ಲ!”
ಏಳು ಸಮುದ್ರದಾಚೆ
ಅವನಿರುವುದೆಲ್ಲಾ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ!
ಬಿಡು ಮಗಳೇ
ನಾವೂ ಅಲ್ಲಿಗೆ ಹೋಗುವುದಿಲ್ಲವಲ್ಲಾ!
*
ಅವನು ಕುಡಿಯುವುದು
ನನ್ನ – ನಿನ್ನಂತೆ
ಹಾಲು ಕಾಫಿಯಲ್ಲ
ಬೆಳಗು – ಬೈಗು
ಹಸಿ – ಹಸಿ ನೆತ್ತರೇ ಬೇಕಂತಲ್ಲಾ?
ನಿನ್ನಂತವರ ಕಣ್ಣೀರೆಂದರೆ
ಅವನಿಗೆ ಸಿಹಿ ತಿಂಡಿಯ ತರಹ!
ಅವ ತಿನ್ನುವುದೂ
ಸೊಪ್ಪು ಸದೆ ಹಣ್ಣಲ್ಲ
ನನ್ನ-ನಿನ್ನಂತವರೇ ಆಹಾರ
“ಅಳದಿರು ಬಂಗಾರಿ
ರಾಕ್ಷಸ ಇಲ್ಲಿಲ್ಲ!”
*
“ಹುಷ್ ಸುಮ್ಮನಿರೆ ನನ್ನ ಚಿನ್ನ”
ಅವನಂತವರೂ ಇಲ್ಲಿಲ್ಲ
ದೈತ್ಯ ಪರ್ವತವೇ
ಅವನ ಆಕೃತಿಯಂತಲ್ಲಾ!
ಅವನ ಘರ್ಜನೆಗೆ
ಏಳೇಳು ಸಮುದ್ರವೇ ನಡುಗಿ
ಅಲೆಗಳೇಳುವುದಂತಲ್ಲ
ಸಮುದ್ರದಲಿ ಅಲೆಗಳಿರುವವರೆಗೂ
ಅವನಿಗೋ ಸಾವಿಲ್ಲ!
*
ಆದರೂ ಅವನ ಪ್ರಾಣ
ಅವನ ಹೃದಯದಲಿಲ್ಲ!
“ಅಯ್ಯೋ ಹೀಗ್ಯಾಕಳುವೆ ನನ್ನ ಜೀವವೇ?”
ಏಳು ಕಾಡನು ದಾಟಿ ಮತ್ತೇಳೂ ಕಡಲನು ಮೀಟಿ
ಕೊಟ್ಟ ಕೊನೆಯ ಗುಹೆಯೊಳಗಿನ
ಗಿಣಿಯೊಳಗೇ ಇದೆಯಂತೆ ಆ
ರಾಕ್ಷಸನೆಂಬುವನ ಪ್ರಾಣ!
*
“ನನ ಮುದ್ದು ಮಗುವೇ ಅಳಬೇಡ”
ರಾಕ್ಷಸನಿಗೋ ಸಾವಿಲ್ಲ
ಅಮ್ಮ ಹೇಳಿದ್ದಳಲ್ಲಾ
ಅವ ನಿನ್ನ ಕದ್ದರೆ
ಕಾಪಾಡಲು ಯಾವ
ರಾಜಕುಮಾರನೂ ಬರುವುದಿಲ್ಲ
ಏಕೆಂದರೆ ಇಲ್ಲಿ ರಾಜಕುಮಾರ ಇಲ್ಲ!
ಅದಕೆಂದೇ ಮಗಳೇ ನೀ ಅಳಬೇಡ
*
ಹೀಗೇ… ಹೀಗೇ…
ನಗಬೇಕು ಕಂದಮ್ಮ
ಎಂದೆಂದೂ ಇಲ್ಲಿ ರಾಕ್ಷಸನಿಲ್ಲ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ
ಬಿಡು ನಾವು ಜಾಣರು
ಅವನ ಬಾಯಿಗೆ
ಹೋಗುವುದೂ ಇಲ್ಲ!
*
ಅತ್ತವರಿಗಷ್ಟೇ ನನ್ನ ರನ್ನ
ರಾಕ್ಷಸನ ಹೆದರಿಕೆ
ಅಳುನುಂಗಿ ನಗುವವರಿಗೆ
ರಾಕ್ಷಸನ ಕಥೆಯೇಕೆ?
ಹೀಗೇ ಏನನ್ನೂ ಪ್ರಶ್ನಿಸದೇ
ನಗುನಗುತ್ತಿದ್ದರೆ ಬೇರೆ ಮಾತೇಕೆ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...