Home / ಕವನ / ಕವಿತೆ / ಅಮ್ಮ ಹೇಳಿದ್ದು

ಅಮ್ಮ ಹೇಳಿದ್ದು

ಇದು ನನ್ನ ಕಲ್ಪನೆಯ
ಕಥೆಯಲ್ಲ ಮಗಳೇ
ನನ್ನಮ್ಮ ನನಗೆ ಹೇಳಿದ್ದು
ಅವಳಮ್ಮ ನನ್ನಮ್ಮನಿಗೆ ಹೇಳಿದ್ದಂತೆ
ಈಗ ನಾ ನಿನಗೆ ಹೇಳಿದಂತೆ
ನಾಳೆ ನೀ ನಿನ್ನ ಮಗಳಿಗೆ ಹೇಳುವಂತೆ
ಇದೊಂದು ರೀತಿ ಚಕ್ರದಂತೆ!

ಇದು ಕಥೆಯ ಮೂಲರೂಪವೂ
ಅಲ್ಲ ಮಗಳೇ
ನನ್ನಮ್ಮ, ಅವರಮ್ಮ,
ಅವರಮ್ಮ, ಅವರಮ್ಮನಮ್ಮನ
… … … … … …
… … … … … …
ಬಾಯ್ಗೆ ಹರಿದು
ಮೂಲರೂಪ ಹೇಗಿತ್ತೋ
ಸೃಷ್ಟಿಕರ್ತನಿಗೇ ಗೊತ್ತು!
*
“ಅಳಬೇಡ ಕಂದಮ್ಮ
ನಿನ ಪುಣ್ಯ ಇಲ್ಲಿ ರಾಕ್ಷಸನಿಲ್ಲ!”
ಏಳು ಸಮುದ್ರದಾಚೆ
ಅವನಿರುವುದೆಲ್ಲಾ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ!
ಬಿಡು ಮಗಳೇ
ನಾವೂ ಅಲ್ಲಿಗೆ ಹೋಗುವುದಿಲ್ಲವಲ್ಲಾ!
*
ಅವನು ಕುಡಿಯುವುದು
ನನ್ನ – ನಿನ್ನಂತೆ
ಹಾಲು ಕಾಫಿಯಲ್ಲ
ಬೆಳಗು – ಬೈಗು
ಹಸಿ – ಹಸಿ ನೆತ್ತರೇ ಬೇಕಂತಲ್ಲಾ?
ನಿನ್ನಂತವರ ಕಣ್ಣೀರೆಂದರೆ
ಅವನಿಗೆ ಸಿಹಿ ತಿಂಡಿಯ ತರಹ!
ಅವ ತಿನ್ನುವುದೂ
ಸೊಪ್ಪು ಸದೆ ಹಣ್ಣಲ್ಲ
ನನ್ನ-ನಿನ್ನಂತವರೇ ಆಹಾರ
“ಅಳದಿರು ಬಂಗಾರಿ
ರಾಕ್ಷಸ ಇಲ್ಲಿಲ್ಲ!”
*
“ಹುಷ್ ಸುಮ್ಮನಿರೆ ನನ್ನ ಚಿನ್ನ”
ಅವನಂತವರೂ ಇಲ್ಲಿಲ್ಲ
ದೈತ್ಯ ಪರ್ವತವೇ
ಅವನ ಆಕೃತಿಯಂತಲ್ಲಾ!
ಅವನ ಘರ್ಜನೆಗೆ
ಏಳೇಳು ಸಮುದ್ರವೇ ನಡುಗಿ
ಅಲೆಗಳೇಳುವುದಂತಲ್ಲ
ಸಮುದ್ರದಲಿ ಅಲೆಗಳಿರುವವರೆಗೂ
ಅವನಿಗೋ ಸಾವಿಲ್ಲ!
*
ಆದರೂ ಅವನ ಪ್ರಾಣ
ಅವನ ಹೃದಯದಲಿಲ್ಲ!
“ಅಯ್ಯೋ ಹೀಗ್ಯಾಕಳುವೆ ನನ್ನ ಜೀವವೇ?”
ಏಳು ಕಾಡನು ದಾಟಿ ಮತ್ತೇಳೂ ಕಡಲನು ಮೀಟಿ
ಕೊಟ್ಟ ಕೊನೆಯ ಗುಹೆಯೊಳಗಿನ
ಗಿಣಿಯೊಳಗೇ ಇದೆಯಂತೆ ಆ
ರಾಕ್ಷಸನೆಂಬುವನ ಪ್ರಾಣ!
*
“ನನ ಮುದ್ದು ಮಗುವೇ ಅಳಬೇಡ”
ರಾಕ್ಷಸನಿಗೋ ಸಾವಿಲ್ಲ
ಅಮ್ಮ ಹೇಳಿದ್ದಳಲ್ಲಾ
ಅವ ನಿನ್ನ ಕದ್ದರೆ
ಕಾಪಾಡಲು ಯಾವ
ರಾಜಕುಮಾರನೂ ಬರುವುದಿಲ್ಲ
ಏಕೆಂದರೆ ಇಲ್ಲಿ ರಾಜಕುಮಾರ ಇಲ್ಲ!
ಅದಕೆಂದೇ ಮಗಳೇ ನೀ ಅಳಬೇಡ
*
ಹೀಗೇ… ಹೀಗೇ…
ನಗಬೇಕು ಕಂದಮ್ಮ
ಎಂದೆಂದೂ ಇಲ್ಲಿ ರಾಕ್ಷಸನಿಲ್ಲ
ನೀ ಅಳದಿದ್ದರೆ
ಅವನಿಲ್ಲಿಗೆ ಬರುವುದೂ ಇಲ್ಲ
ಬಿಡು ನಾವು ಜಾಣರು
ಅವನ ಬಾಯಿಗೆ
ಹೋಗುವುದೂ ಇಲ್ಲ!
*
ಅತ್ತವರಿಗಷ್ಟೇ ನನ್ನ ರನ್ನ
ರಾಕ್ಷಸನ ಹೆದರಿಕೆ
ಅಳುನುಂಗಿ ನಗುವವರಿಗೆ
ರಾಕ್ಷಸನ ಕಥೆಯೇಕೆ?
ಹೀಗೇ ಏನನ್ನೂ ಪ್ರಶ್ನಿಸದೇ
ನಗುನಗುತ್ತಿದ್ದರೆ ಬೇರೆ ಮಾತೇಕೆ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...