Home / ಕವನ / ಕವಿತೆ / ಕೇರಳ

ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...