Home / ಕವನ / ಕವಿತೆ / ಕೇರಳ

ಕೇರಳ

ಹದಿನಾರಕೆ
ಈಗತಾನೆ ಐನೀರು ಮುಳುಗಿ ಬಂದವಳು
ಗಾಳಿಗೆ ತಲೆಮುಡಿ ಹರಡಿ ಒಣಗಿಸುತಿದಾಳೆ
ಶಕುಂತಳೆ
ಇದು ವಿಶ್ವಾಮಿತ್ರ ಸೃಷ್ಟಿ
ಅಪರಿಮಿತ ಯುಗದ ಬ್ರಹ್ಮಚರ್ಯದ ಫಲ.
ಈ ಪ್ರಮೀಳೆ ಯಾರಾರ ಹೃದಯಕ್ಕೆ
ಹಚ್ಚುವಳೊ ಬೆಂಕಿ!
ಆರಿಸುವ
ಲಾಲಿಸುವ ತೋಳ ತೆರೆಮಾಲೆ
ಕುಡಿಮೊಲೆಯ ಕ್ಷೀರ ನಿಕ್ಷೇಪ
ಹೊತ್ತು ತಲೆಬಾಗಿಸಿದ ಕಲ್ಪವೃಕ್ಷ

ಛೀ ಸಾಕು
ಈ ಹುಚ್ಚು
ಇದು ಸೆಕೆಂಡ್ ಹ್ಯಾಂಡ್ ಕಾವ್ಯ
ಯಾರ ಟೇಸ್ಟಿಗೋ ಮಾಡಿದ ಅಡಿಗೆ ಇದು
ಪಂಪ, ಕುಮಾರವ್ಯಾಸ, ಮಿಲ್ಟನರ
ಕಿಸೆಗೆ ಕೈಹಾಕಿ
ಪದ ವಿಜೃಂಭಣೆಯ ಅಮಲಿನಲ್ಲಿ
ನಾನು ರಾಮಾಯಣ ಬರೆಯಲೊಲ್ಲೆ
ನನ್ನ ದರ್ಶನ ಬೇರೆ
ಕೊಂಡೆ ಕೊಳ್ಳಗಳಲ್ಲಿ ಗಲ್ಲಿಗಳಲ್ಲಿ
ಕಂಡ, ಅರಗಿಸಿಕೊಂಡ,
ಮರೆತೇ ಹೋದ ಸಂಕೀರ್ಣ
ಅನುಭವದ ವಿಸ್ಕಿ, ಅದು
ಇಲ್ಲಿ ವಿಶ್ವಾಮಿತ್ರನೂ
ನಾಯಿಯ ಮಾಂಸ ತಿಂದು ತೇಗಿದ್ದ
ಇದಕ್ಕೆ ನೂರೆಂಟು ಪ್ರಾಕಾರಗಳು
ಈಕೆಗೆ ಹದಿನಾರೆಂಬ ಛಲವೇಕೆ?
ಕಾಲದ ಪರೆ ತೆರೆದರೆ
ಒಳಗೆ ಮಸಿ ಹಿಡಿದ ಪೆಟ್ಟಿಕ್ಕೋಟು
ಅಗ್ಗ ಪೌಡರಿನಲ್ಲಿ ಬೆವರಿನ ಕಮಟು
ಹೆಲೆನಳ ಚರ್ಮದಲ್ಲೂ ಗ್ರೀಸಿನ ಜಾರು
ಈ ವಿಕೃತ ಮುಖಗಳ ವ್ಯಕ್ತಿ
ಇರಬಹುದು ನಾನು ನೀನು

ನನ್ನ ಹಾಡೇ ಬೇರೆ
ತಾಳಲಯ ವ್ಯಾಕರಣ ಸಿಂಟ್ಯಾಕ್ಸು ಎಲ್ಲ
ಒಡೆದು
ನೋವು ನಗೆ ಜಿಗುಪ್ಸೆ ವ್ಯಂಗ್ಯ
ತಿಳಿದ ತಿಳಿಯದ ಸುಪ್ತ ಜಾಗೃತ ಭಾವಗಳ
ಅಕ್ರೊಬಾಟಿಕ್ಸ್
ಏನೋ ಹೇಳಬೇಕು
ಏನೆಂಬುದು ಮಬ್ಬಿ
ಹೇಗೋ ಹೇಳಬೇಕು
ಹೇಗೆಂಬುದು ಅಸ್ಪಷ್ಟ
ಅತೃಪ್ತಿಯ ಉಗ್ಗು
ಕಳಚಿ ಬೀಳುವ ಇಂದ್ರಿಯ ಪ್ರಜ್ಞೆಗಳಿಗೆ ಜೋತು
ನನ್ನ ಪ್ಯಾಟರ್ನ್ ಕಂಡು ಹುಡುಕುವ
ಪ್ರಯತ್ನ ಇದು
ಈ ಸಂಕೀರ್ಣತೆಯ ಅಕ್ಷಯ ಜಿಡ್ಡುದಾರ ಮೈಬಿಗಿದು
ಅನುಭವವಾಗಿ, ಅದು ನಾನಾಗಿ
ನಾನೆ ಅಭಿವ್ಯಕ್ತಿಯಾದಾಗ
ಅದೇನು ನಾನೇ ನನ್ನ ಕಾವ್ಯ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...